ನಲಪಾಡ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಸಿಸಿಬಿ
ಬೆಂಗಳೂರು, ಮಾರ್ಚ್ 21 : ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ಗೆ ಹೊಸ ಸಂಕಷ್ಟ ಎದುರಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ನಲಪಾಡ್ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.
ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿ ಬೆಂಗಳೂರಿನ 63ನೇ ಸೆಷನ್ಸ್ ನ್ಯಾಯಾಲಯ, ಕರ್ನಾಟಕ ಹೈಕೋರ್ಟ್ನಲ್ಲಿ ತಿರಸ್ಕೃತಗೊಂಡಿದೆ. ಸುಪ್ರೀಂಕೋರ್ಟ್ಗೆ ನಲಪಾಡ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
ಬುಧವಾರ ಸಿಸಿಬಿ ಪರ ವಕೀಲರಾದ ಸಂಜಯ್ ಸೂಲಿ ಅವರು ಸುಪ್ರೀಂಕೋರ್ಟ್ಗೆ ಕೇವಿಯಟ್ ಸಲ್ಲಿಸಿದ್ದಾರೆ. ವಿದ್ವತ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ 7 ಜನರಿಗೂ ಜಾಮೀನು ನೀಡಲು ವಿರೋಧ ವ್ಯಕ್ತಪಡಿಸಿದ್ದಾರೆ.

ಮೊಹಮ್ಮದ ನಲಪಾಡ್ ಜಾಮೀನು ಅರ್ಜಿಯ ವಿಚಾರಣೆ ಸಮಯದಲ್ಲಿ ಸಿಸಿಬಿಯ ವಾದ ಮಂಡನೆಗೂ ಅವಕಾಶ ನೀಡಬೇಕು ಎಂದು ಕೋರಿದ್ದಾರೆ. ವಿದ್ವತ್ ಮೇಲೆ ಹಲ್ಲೆ ನಡೆದ ಪ್ರಕರಣದ ತನಿಖೆಯನ್ನು ಸದ್ಯ, ಸಿಸಿಬಿ ನಡೆಸುತ್ತಿದೆ.
ಮೊಹಮ್ಮದ್ ನಲಪಾಡ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಅವರ ನ್ಯಾಯಾಂಗ ಬಂಧನದ ಅವಧಿ ಇಂದಿಗೆ ಪೂರ್ಣಗೊಂಡಿತ್ತು. ಅರ್ಜಿಯ ವಿಚಾರಣೆ ನಡೆಸಿದ 1ನೇ ಎಸಿಎಂಎಂ ಕೋರ್ಟ್ ಏ.4ರ ತನಕ ನ್ಯಾಯಾಂಗ ಬಂಧನವನ್ನು ವಿಸ್ತರಣೆ ಮಾಡಿದೆ.
ಫೆ.17ರಂದು ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಬೆಂಗಳೂರಿನ ಯು.ಬಿ.ಸಿಟಿಯಲ್ಲಿ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. 7 ಆರೋಪಿಗಳ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದೆ.












Click it and Unblock the Notifications