ವಲಸೆ ಕಾರ್ಮಿಕರಿಗೆ ಮಹತ್ವದ ಸೂಚನೆ ಕೊಟ್ಟ ಬಿಬಿಎಂಪಿ
ಬೆಂಗಳೂರು, ಜೂನ್ 02 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬೆಂಗಳೂರು ನಗರದಲ್ಲಿರುವ ವಲಸೆ ಕಾರ್ಮಿಕರಿಗೆ ಮಹತ್ವದ ಸೂಚನೆಯನ್ನು ನೀಡಿದೆ. ಕಾರ್ಮಿಕರು ತಮ್ಮ ಊರುಗಳಿಗೆ ಮರಳುವ ಮೊದಲು ಸೇವಾ ಸಿಂಧು ಪೋರ್ಟಲ್ನಲ್ಲಿ ನೋಂದಣಿ ಮಾಡುವುದು ಕಡ್ಡಾಯವಾಗಿದೆ.
ಬಿಬಿಎಂಪಿ ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಲು ಸೇವಾ ಸಿಂಧು ಪೋರ್ಟಲ್ನಲ್ಲಿ ನೋಂದಣಿ ಮಾಡುವುದು ಕಡ್ಡಾಯ. ಪಾಲಿಕೆಯ ಎಲ್ಲಾ ನಾಗರಿಕ ಸೇವಾ ಕೇಂದ್ರಗಳಲ್ಲಿ ವಲಸೆ ಕಾರ್ಮಿಕರ ನೆರವಿಗಾಗಿ ಸಹಾಯ ಕೇಂದ್ರಗಳನ್ನು ಆರಂಭಿಸಿದೆ ಎಂದು ತಿಳಿಸಲಾಗಿದೆ.
ಪ್ರಸ್ತುತ ಲಾಕ್ ಡೌನ್ ಸಡಿಲಗೊಳಿಸಿರುವುದರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ವಲಸೆ ಕಾರ್ಮಿಕರು ತಮ್ಮ ಸ್ವಂತ ಸ್ಥಳ/ಊರುಗಳಿಗೆ ತೆರಳಲು ಅವಕಾಶ ಕಲ್ಪಿಸಲಾಗಿರುತ್ತದೆ. ಈ ಹಿನ್ನಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿನ ವಲಸೆ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್ನಲ್ಲಿ ನೋಂದಣಿ ಮಾಡುವುದು ಕಡ್ಡಾಯವಾಗಿರುತ್ತದೆ ಎಂದು ಬಿಬಿಎಂಪಿ ಹೇಳಿದೆ.
ಜೂನ್ 1ರಿಂದಲೇ ಅನ್ವಯವಾಗುವಂತೆ ನಾಗರಿಕ ಸೇವಾ ಕೇಂದ್ರದಲ್ಲಿ ವಲಸೆ ಕಾರ್ಮಿಕರ ನೋಂದಣಿಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಕೇಂದ್ರದ ಸಹಾಯಕ ಕಂದಾಯ ಅಧಿಕಾರಿಗಳು ನಿರ್ದಿಷ್ಟ ಅಧಿಕಾರಿಯೊಬ್ಬರನ್ನು ಇದಕ್ಕಾಗಿ ನೇಮಿಸಲು ಬಿಬಿಎಂಪಿ ಆದೇಶ ನೀಡಿದೆ.

ಕಡ್ಡಾಯ ನೋಂದಣಿ ಏಕೆ?
ವಲಸೆ ಕಾರ್ಮಿಕರು ಯಾವುದೇ ಮಾಹಿತಿಯನ್ನು ನೀಡದೆ ನಗರವನ್ನು ತ್ಯಜಿಸುತ್ತಿದ್ದಾರೆ. ಇದರಿಂದಾಗಿ ಬಿಬಿಎಂಪಿಗೆ ಯಾವುದೇ ಮಾಹಿತಿ ಇಲ್ಲದಂತಾಗುತ್ತದೆ. ಆದ್ದರಿಂದ, ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್ನಲ್ಲಿ ನೋಂದಣಿ ಮಾಡಿಕೊಳ್ಳಲು ಸೂಚನೆ ಕೊಡಲಾಗಿದೆ.

Migrant ಹೆಲ್ಪ್ ಡೆಸ್ಕ್ ಆರಂಭ
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ನಾಗರಿಕ ಸೇವಾ ಕೇಂದ್ರಗಳಲ್ಲಿ ವಲಸೆ ಕಾರ್ಮಿಕರ ಸಹಾಯ ಕೇಂದ್ರವನ್ನು ತೆರೆಯಲಾಗಿದೆ. ಕನ್ನಡ, ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿ ನಾಮಫಲಕ ಅಳವಡಿಕೆ ಮಾಡಿ, ಅಧಿಕಾರಿಯೊಬ್ಬರನ್ನು ನೇಮಿಸಿ, ನೋಂದಣಿಗೆ ಆಗಮಿಸುವ ಕಾರ್ಮಿಕರಿಗೆ ಅಗತ್ಯ ಸಹಾಯವನ್ನು ಮಾಡುವಂತೆ ಬಿಬಿಎಂಪಿ ಆದೇಶದಲ್ಲಿ ತಿಳಿಸಿದೆ.

ಶ್ರಮಿಕ್ ವಿಶೇಷ ರೈಲುಗಳು
ಲಾಕ್ ಡೌನ್ ಪರಿಣಾಮ ಬೆಂಗಳೂರು ನಗರದಲ್ಲಿ ಕೆಲಸ ಕಳೆದುಕೊಂಡಿರುವ ವಿವಿಧ ರಾಜ್ಯಗಳ ವಲಸೆ ಕಾರ್ಮಿಕರು ಶ್ರಮಿಕ್ ರೈಲಿನ ಮೂಲಕ ತಮ್ಮ ತವರು ರಾಜ್ಯಕ್ಕೆ ವಾಪಸ್ ಹೋಗುತ್ತಿದ್ದಾರೆ. ಈ ಸಂದರ್ಭದಲ್ಲಿ ಸೇವಾ ಸಿಂಧು ಪೋರ್ಟಲ್ನಲ್ಲಿ ಅವರು ನೋಂದಣಿ ಮಾಡಿಸುತ್ತಿಲ್ಲ. ಇದರಿಂದಾಗಿ ಬಿಬಿಎಂಪಿಗೆ ಮಾಹಿತಿ ಸಿಗುತ್ತಿಲ್ಲ.

ಜೂನ್ 1ರಿಂದ ಜಾರಿಗೆ
ಇದುವರೆಗೂ ಲಕ್ಷಾಂತರ ವಲಸೆ ಕಾರ್ಮಿಕರು ಬೆಂಗಳೂರು ನಗರವನ್ನು ಬಿಟ್ಟು ಹೋಗಿದ್ದಾರೆ. ಜೂನ್ 1ರಿಂದ ಜಾರಿಗೆ ಬರುವಂತೆ ವಲಸೆ ಕಾರ್ಮಿಕರ ನೋಂದಣಿಯನ್ನು ಬಿಬಿಎಂಪಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.












Click it and Unblock the Notifications