ಯಾವುದೇ ಕಾರಣಕ್ಕೂ ಗಣಿಗಾರಿಕೆ, ಕಲ್ಲು ಕ್ವಾರಿ ನಿಷೇಧವಿಲ್ಲ: ಸಿಎಂ ಯಡಿಯೂರಪ್ಪ
ಬೆಂಗಳೂರು, ಫೆಬ್ರವರಿ 2: ಸರ್ಕಾರದಿಂದ ಪರವಾನಗಿ ಪಡೆದಿರುವ ಗಣಿ ಹಾಗೂ ಕಲ್ಲು ಕ್ವಾರಿಗಳ ಮೇಲೆ ಯಾವುದೇ ರೀತಿಯ ಕಾನೂನು ಕ್ರಮ ತೆಗೆದುಕೊಳ್ಳಬಾರದೆಂದು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸಭೆಯಲ್ಲಿ ತಿಳಿಸಿದರು.
ಕಾನೂನು ಬಾಹಿರವಾಗಿ ಅಕ್ರಮ ಗಣಿಗಾರಿಕೆ ಚಟುವಟಿಕೆ ನಡೆಯುತ್ತಿದ್ದರೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಾನೂನು ಬದ್ಧವಾಗಿದ್ದರೆ ಯಾರೂ ಕೂಡ ತಲೆ ಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ ಎಂದರು.
ಶಿವಮೊಗ್ಗ ಸ್ಪೋಟ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ
ರಾಜ್ಯದಲ್ಲಿ ಸಂಪೂರ್ಣವಾಗಿ ಗಣಿಗಾರಿಕೆ ಅಥವಾ ಕಲ್ಲು ಕ್ವಾರಿ ಚಟುವಟಿಕೆ ನಿಷೇಧಿಸಲು ಸಾಧ್ಯವಿಲ್ಲ. ಹಾಗೊಂದು ವೇಳೆ ಅಂತಹ ಕ್ರಮ ಕೈಗೊಂಡರೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುವುದಿಲ್ಲ ಎಂದು ಮನವರಿಕೆ ಮಾಡಿದರು.
ಕಾನೂನುಬದ್ಧವಾಗಿ ಗಣಿಗಾರಿಕೆ ನಡೆಸಲು ಅವಕಾಶ ನೀಡುತ್ತೇವೆ. ಸಂಬಂಧಪಟ್ಟ ಅಧಿಕಾರಿಗಳಿಂದ ಲೈಸನ್ಸ್ ಪಡೆಯಬೇಕು. ಒಂದು ವೇಳೆ ಲೈಸನ್ಸ್ ಪಡೆಯದೆ ಗಣಿಗಾರಿಕೆ ನಡೆಸುತ್ತಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
Recommended Video
ಸಿಎಂ ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದ ಹುಣಸೋಡುವಿನಲ್ಲಿ ಇತ್ತೀಚಿಗೆ ಕ್ರಷರ್ ಬಳಿ ಜಿಲೆಟಿನ್ ಸ್ಪೋಟಗೊಂಡು ೬ ಕಾರ್ಮಿಕರು ಮೃತಪಟ್ಟಿದ್ದರು. ಇದು ದೇಶಾದ್ಯಂತ ಸುದ್ದಿಯಾಗಿತ್ತು. ಮೃತ ಕುಟುಂಬಗಳಿಗೆ ತಲಾ ೫ ಲಕ್ಷ ರೂ. ಪರಿಹಾರವನ್ನು ರಾಜ್ಯ ಸರ್ಕಾರ ನೀಡಿದೆ. ಅಕ್ರಮ ಗಣಿಗಾರಿಕೆ ಮತ್ತು ಕಲ್ಲು ಕ್ವಾರಿಗಳ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಎಲ್ಲೆಡೆ ಒತ್ತಾಯ ಕೇಳಿಬಂದಿತ್ತು.