KRS ಸುತ್ತಲಿನ ಪ್ರದೇಶದಲ್ಲಿ ಗಣಿಗಾರಿಕೆ: ಖಡಕ್ ಎಚ್ಚರಿಕೆ ನೀಡಿದ ಹೈಕೋರ್ಟ್
ಬೆಂಗಳೂರು ಮಾರ್ಚ್ 29: 'ರಾಜ್ಯದ ಜೀವನದಿ ಕಾವೇರಿಗೆ ಕಟ್ಟಲಾಗಿರುವ ಕೆಆರ್ಎಸ್ (ಕೃಷ್ಣರಾಜ ಸಾಗರ) ಅಣೆಕಟ್ಟೆಗೆ ಧಕ್ಕೆಯಾಗಬಾರದೆಂದು ಹೈಕೋರ್ಟ್ ಎಚ್ಚರಿಕೆ ನೀಡಿದೆ.
ಅಲ್ಲದೆ, ಜಲಾಶಯದ ಸುತ್ತಮುತ್ತಲ ಪ್ರದೇಶದಲ್ಲಿ ಯಾವುದೇ ತೆರನಾದ ಗಣಿಗಾರಿಕೆ ಮತ್ತು ಅದಕ್ಕೆ ಹೊಂದಿಕೊಂಡಂತಹ ಚಟುವಟಿಕೆಗಳು ನಡೆಸಬಾರದು ಎಂದು ನೀಡಲಾಗಿದೆ. ಅದಕ್ಕೆ ಕಾರಣ ಗಣಿಗಾರಿಕೆ ಅತ್ಯಂತ ಅಪಾಯಕಾರಿ. ಆದ್ದರಿಂದ, ಅಣೆಕಟ್ಟಿಗೆ ಕಿಂಚಿತ್ತೂ ಧಕ್ಕೆಯಾಗಂತೆ ನೋಡಿಕೊಳ್ಳಬೇಕಾದ ಸ್ಥಿತಿ ಇದೆ ಎಂದು ನ್ಯಾಯಾಲಯ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯಪೀಠ 'ಕೆಆರ್ಎಸ್ ಜಲಾಯಶಯದ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ಹಾಗೂ ಅದರಾಚೆಗೂ ಕೂಡಾ ಯಾವುದೇ ಕಲ್ಲು ಗಣಿಗಾರಿಕೆ ಹಾಗೂ ಸ್ಫೋಟಕ ಚಟುವಟಿಕೆಗಳಿಗೆ ಸಂಬಂಧಿಸಿದ ತಕರಾರುಗಳಿಗೆ ಪರಿಹಾರ ಪಡೆಯಲು, ಕರ್ನಾಟಕ ರಾಜ್ಯ ಜಲಾಶಯಗಳ ಸುರಕ್ಷಿತ ಸಮಿತಿಯ ಮುಂದೆಯೇ ಮನವಿ ಸಲ್ಲಿಸಬೇಕು. ಈ ವಿಚಾರದಲ್ಲಿ ಸಮಿತಿಯ ತೀರ್ಮಾನವೇ ಅಂತಿಮ' ಎಂದು ಗುರುವಾರ ಆದೇಶಿಸಿದೆ.
ವಾದ-ಪ್ರತಿವಾದ ಆಲಿಸಿದ ಬಳಿಕ ಅಣೆಕಟ್ಟಿಗೆ ಏನಾದರೂ ಆದರೆ ಗತಿಯೇನು? ಕೆಆರ್ಎಸ್ ಸುತ್ತಮುತ್ತಲ ಪ್ರದೇಶದಲ್ಲಿ ಯಾವುದೇ ಗಣಿಗಾರಿಕೆಯ ಚಟುವಟಿಕೆಗಳು ಅಪಾಯ ತಂದೊಡ್ಡಬಲ್ಲವು ಎಂದು ಆತಂಕ ವ್ಯಕ್ತಪಡಿಸಿತು.
ಜೊತೆಗೆ ಇಂತಹ ಚಟುವಟಿಕೆಗಳ ಬಗ್ಗೆ ಉಂಟಾಗುವ ತಕರಾರುಗಳನ್ನು ಈಗಾಗಲೇ ಶಾಸನಾತ್ಮಕವಾಗಿ ರೂಪುಗೊಂಡಿರುವ ತಜ್ಞರ ಸಮಿತಿಯೇ ಪರಾಮರ್ಶಿಸಬೇಕು. ಅದು ಯಾವುದೇ ಕ್ರಮ ಕೈಗೊಳ್ಳಲು ಯುಕ್ತವಿದೆ. ಈ ವಿಷಯದಲ್ಲಿ ತೀರ್ಮಾನ ಪ್ರಕಟಿಸಲು ಕೋರ್ಟ್ ಏನೂ ತಜ್ಞ ಅಲ್ಲ' ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ಅರ್ಜಿದಾರರು 'ನಮ್ಮದು ಕೇವಲ ಕ್ರಷರ್ ಮತ್ತು ಎಂ.ಸ್ಯಾಂಡ್ ಘಟಕವಾಗಿದ್ದು, ಗಣಿಗಾರಿಕೆಗೆ ಹೊಂದಿಕೊಂಡ ಇತರೆ ಯಾವುದೇ, ಕಲ್ಲು ಸ್ಫೋಟಿಸುವ ಅಥವಾ ನಿರ್ಬಂಧಿತ ಚಟುವಟಿಕೆಗಳನ್ನು ಕೈಗೊಳ್ಳುತ್ತಿಲ್ಲ. ನಾವು ಕೆಆರ್ಎಸ್ ಆಣೆಕಟ್ಟಿನ 20 ಕಿಮೀ ಸುತ್ತಳತೆಯ ವ್ಯಾಪ್ತಿ ಪ್ರದೇಶದಿಂದ ಹೊರಗಿದ್ದೇವೆ. ಆದರೂ, ಘಟಕದ ಕಾನೂನು ಬದ್ಧ ಚಟುವಟಿಕೆಗಳಿಗೆ ಅಡ್ಡಿ ಉಂಟು ಮಾಡಲಾಗಿದೆ. ಚಟುವಟಿಕೆ ಪುನರಾರಂಭಕ್ಕೆ ನಿರ್ದೇಶಿಸಬೇಕು' ಎಂದು ಮನವಿ ಮಾಡಿದ್ದರು.
ಪ್ರಕರಣದ ಹಿನ್ನಲೆ ಏನು..?
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕನಗನ ಮರಡಿ ಗ್ರಾಮದ 'ಮಂಚಮ್ಮದೇವಿ ಸ್ಟೋನ್ ಕ್ರಷರ್ ಹಾಗೂ ಎಂ.ಸ್ಯಾಂಡ್' ಘಟಕಕ್ಕೆ ಜಿಲ್ಲಾ ಸ್ಟೋನ್ ಕ್ರಷರ್ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರವು 2024ರ ಜನವರಿ 20ರಂದು ನೋಟಿಸ್ ನೀಡಿರುವ ಕಾರಣ ಘಟಕದ ಚಟುವಟಿಕೆ ಸ್ಥಗಿತಗೊಳಿಸಲಾಗಿದೆ. ಅದನ್ನು ಪ್ರಶ್ನಿಸಿ ಮಾಲೀಕ ವೈ.ಬಿ.ಅಶೋಕ್ಗೌಡ ಪಟೇಲ್ ಹೈಕೋರ್ಟ್ ಮೊರೆ ಹೋಗಿದ್ದರು.












Click it and Unblock the Notifications