ಕೆಎಸ್ಒಯುಗೆ ಮರಳಿ ಮಾನ್ಯತೆ ನೀಡುವಂತೆ ರಾಯರೆಡ್ಡಿ ಮನವಿ
ಬೆಂಗಳೂರು, ಅಕ್ಟೋಬರ್ 09: ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ)ದ ಮಾನ್ಯತೆ ಕಳೆದುಕೊಂಡಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ಮರಳಿ ಮಾನ್ಯತೆ ನೀಡುವಂತೆ ರಾಜ್ಯ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಮನವಿ ಮಾಡಿದ್ದಾರೆ.
ಮುಕ್ತ ವಿವಿ ವಿದ್ಯಾರ್ಥಿಗಳ ಮೇಲೆ ಯುಜಿಸಿ ಚಪ್ಪಡಿಕಲ್ಲು
ವಿಧಾನಸೌಧದಲ್ಲಿ ಇಂದು (ಸೋಮವಾರ) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಮಾನ್ಯತೆ ನೀಡುವ ಕುರಿತಂತೆ ಕೇಂದ್ರ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ನೇತೃತ್ವದಲ್ಲಿ ಕೂಡಲೇ ಸಭೆ ಕರೆಯುವಂತೆ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಕೇಂದ್ರ ಸಚಿವರಿಗೆ ಬರೆದಿರುವ ಪತ್ರವನ್ನು ಬಿಡುಗಡೆಮಾಡಿ ಯು.ಜಿ.ಸಿ ಆದೇಶದಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಮಾನ್ಯತೆಗಾಗಿ ವಿಶೇಷ ಕಾನೂನನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದ್ದು, ಅದರ ಪ್ರತಿಯನ್ನು ಸಹ ಕೇಂದ್ರ ಸಚಿವರಿಗೆ, ವಿಶ್ವವಿದ್ಯಾಲಯದ ಧನಸಹಾಯ ಆಯೋಗಕ್ಕೂ ನೀಡಲಾಗಿದೆ.
ಆದರೆ, ಯು.ಜಿ.ಸಿ. ರಾಜ್ಯ ಸರ್ಕಾರದ ಮನವಿಯನ್ನು ಪುರಸ್ಕರಿಸಿಲ್ಲ. ಈ ಗೊಂದಲ ನಿವಾರಣೆಗಾಗಿ ಕೇಂದ್ರ ಮಾನವ ಸಂಪನ್ಮೂಲ ಸಚಿವರ ಸಭೆ ಕರೆದು ಈ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮುಚ್ಚುವ ಬದಲು ಪರ್ಯಾಯದ ಕ್ರಮದ ಬಗ್ಗೆಯು ಪರಾಮರ್ಶಿಸಲು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದ್ದು, ಒಂದು ತಿಂಗಳ ಒಳಗಾಗಿ ಸರ್ಕಾರಕ್ಕೆ ವರದಿ ನೀಡಲಿದೆ ಎಂದರು.
ಕಲಬುರಗಿಯಲ್ಲಿರುವ ಗುಲ್ಬರ್ಗ ವಿಶ್ವವಿದ್ಯಾಲಯಕ್ಕೆ ಬಸವೇಶ್ವರ ವಿಶ್ವವಿದ್ಯಾಲಯವೆಂದು ಹಾಗೂ ಕೇಂದ್ರೀಯ ವಿಶ್ವವಿದ್ಯಾಲಯಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ವಿಶ್ವವಿದ್ಯಾಲಯವೆಂದು ನಾಮಕರಣ ಮಾಡಲು ಕೇಂದ್ರ ಸಚಿವರಿಗೆ ಮನವಿ ಮಾಡಿರುವುದಾಗಿ ಸಚಿವ ಬಸವರಾಜ ರಾಯರೆಡ್ಡಿ ಅವರು ತಿಳಿಸಿದರು.
ಧಾರವಾಡದಲ್ಲಿ ಆರಂಭವಾಗಿರುವ ಐ.ಐ.ಟಿ. ಗೆ ರಾಜ್ಯ ಸರ್ಕಾರ 500 ಎಕರೆ ಜಮೀನು ನೀಡಿದ್ದು, ರಾಜ್ಯದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ಅಧ್ಯಯನ ಮಾಡಲು ಕನಿಷ್ಠ ಶೇ 25ರಷ್ಟು ಸೀಟುಗಳ ಮೀಸಲಾತಿ ಸೌಲಭ್ಯ ಕಲ್ಪಿಸಬೇಕು ಎಂಬ ರಾಜ್ಯದ ಮನವಿಗೆ ಕೇಂದ್ರ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಇದು ಸೇರಿದಂತೆ ಉನ್ನತ ಶಿಕ್ಷಣದ ಹಲವು ವಿಷಯಗಳ ಕುರಿತಂತೆ ಕೇಂದ್ರ ಸಚಿವ ಪ್ರಕಾಶ ಜಾವಡೇಕರ್ ಕರೆಯುವ ಸಭೆಯಲ್ಲಿ ಪ್ರಸ್ತಾಪಿಸಲಾಗುವುದು ಎಂದು ಅವರು ತಿಳಿಸಿದರು.