ತಿಂಗಳಲ್ಲಿ 2 ಬಾರಿ ಬೃಹತ್ ಆರೋಗ್ಯ ಮೇಳದಲ್ಲಿ ಬಿಪಿಎಲ್ ಕಾರ್ಡ್ ವಿತರಣೆ: ಸಚಿವ ಗೋಪಾಲಯ್ಯ
ಬೆಂಗಳೂರು ಮಾರ್ಚ್ 6: ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದಂತೆ ರಾಜ್ಯದಲ್ಲಿ ಜನಜೀವನ ಸಹಜ ಸ್ಥಿತಿಯತ್ತ ಮರಳಿದೆ. ಆದರೂ ಜನರ ಆರೋಗ್ಯದ ಹಿತದೃಷ್ಟಿಯಿಂದ ಬೆಂಗಳೂರಿನ ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರತಿವಾರ ಆರೋಗ್ಯ ತಪಾಸಣೆಗೆ ಸ್ಥಳೀಯ ಶಾಸಕರು ಸೂಚಿಸಿದ್ದಾರೆ. ಇನ್ನು ಮುಂದೆ ಪ್ರತಿ ತಿಂಗಳು ಎರಡು ಬಾರಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ಸ್ಥಳೀಯ ಶಾಸಕರೂ ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಮಹಾಲಕ್ಷ್ಮಿ ಎಜುಕೇಷನಲ್ ಟ್ರಸ್ಟ್, ಅಟಲ್ ಸೇವಾ ಕೇಂದ್ರ, ರೋಟರಿ ಬೆಂಗಳೂರು ಮಾಲ್ಗುಡಿ ಮತ್ತು ಇತರೆ ಸಂಸ್ಥೆಗಳ ಆಶ್ರಯದಲ್ಲಿ ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಸವೇಶ್ವರ ನಗರದ ಅರಬಿಂದೋ ವಿದ್ಯಾಮಂದಿರ ಆವರಣದಲ್ಲಿ ಇಂದು ಹಮ್ಮಿಕೊಂಡಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಕೊರೊನಾ ಸಂದರ್ಭದಲ್ಲಿ ಈ ರೀತಿಯ ಆರೋಗ್ಯ ತಪಾಸಣೆ ಶಿಬಿರಗಳನ್ನು ಆಯೋಜಿಸಲು ಸಾಧ್ಯವಾಗಲಿಲ್ಲ.ಇದೀಗ ಕೊರೊನಾ ಸಂಪೂರ್ಣ ಹತೋಟಿಯಲ್ಲಿರುವುದರಿಂದ ಕ್ಷೇತ್ರದಾದ್ಯಂತ ನಿರಂತರವಾಗಿ ಶಿಬಿರಗಳನ್ನು ಆಯೋಜಿಸಿ ತಪಾಸಣೆ, ಚಿಕಿತ್ಸೆ ಮತ್ತು ಔಷಧಿ ವಿತರಣೆ ಮಾಡಲಾಗುವುದು ಎಂದರು.
ಕೇವಲ ಆರೋಗ್ಯ ತಪಾಸಣೆ ಅಲ್ಲದೆ ಬಡವರಿಗೆ ಬಿಪಿಎಲ್ ಕಾರ್ಡ್ಗಳ ವಿತರಣೆ, ವಿವಿಧ ಪಿಂಚಣಿ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವು ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದರು.
ಕುರುಬರಹಳ್ಳಿಯ ಸಾಯಿಬಾಬಾ ಮಂದಿರ ಸಮೀಪ ಮಾರ್ಚ್ 13 ರಂದು ಬೃಹತ್ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಬಿಪಿ.ಶುಗರ್, ಗರ್ಭ ಕೋಶದ ಸಮಸ್ಯೆ ಇರುವವರು ತಪಾಸಣೆ ಮಾಡಿಸಿಕೊಂಡು ಉಚಿತ ಔಷಧಿ ಮಾತ್ರೆ ಪಡೆದುಕೊಳ್ಳಬಹುದಾಗಿದೆ ಎಂದರು.
Recommended Video
ಕೇವಲ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಜನರಲ್ಲದೆ ರಾಜ್ಯದ ಯಾವುದೇ ಮೂಲೆಯಿಂದ ಜನರು ಬಂದು ಈ ಶಿಬಿರದಲ್ಲಿ ಭಾಗವಹಿಸಿ ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬಹುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಉಪಮೇಯರ್ ಶ್ರೀಮತಿ ಹೇಮಲತಾ ಕೆ.ಗೋಪಾಲಯ್ಯ , ಹರೀಶ್, ಬೆಂಗಳೂರು ಜಿಲ್ಲಾ ಉತ್ತರ ಘಟಕದ ಬಿಜೆಪಿ ಉಪಾಧ್ಯಕ್ಷ ಜಯರಾಮ್, ಬಿ.ಜಯಸಿಂಹ, ಬಿ.ಎಂ.ಶ್ರೀನಿವಾಸ್ ಇತರರು ಉಪಸ್ಥಿತರಿದ್ದರು.