ಬೆಂಗಳೂರು ಮಳೆ: ಸಂತ್ರಸ್ತ 1500 ಕುಟುಂಬಗಳಿಗೆ ಸಚಿವ ಗೋಪಾಲಯ್ಯ ಫುಡ್ ಕಿಟ್ ವಿತರಣೆ
ಬೆಂಗಳೂರು.ಮೇ.18; ಮಳೆಯಿಂದ ತೊಂದರೆ ಗೊಳಗಾಗಿರುವವರಿಗೆ ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 1500 ಕ್ಕೂ ಅಧಿಕ ಕುಟುಂಬಗಳಿಗೆ ಕ್ಷೇತ್ರದ ಶಾಸಕರೂ ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಇಂದು ಸಂಜೆ ದಿನಸಿ ಪದಾರ್ಥಗಳ ಕಿಟ್ ಗಳನ್ನು ವಿತರಿಸಿದರು.
ಮಹಾಲಕ್ಷ್ಮಿ ಲೇ ಔಟ್ ಕ್ಷೇತ್ರ ವ್ಯಾಪ್ತಿಯ ಕಮಲಾನಗರ, ವೃಷಭಾವತಿ ನಗರ, ನಂದಿನಿ ಬಡಾವಣೆ, ಕಂಠೀರವ ನಗರ,ಜೆ.ಸಿ.ನಗರ, ಕೆರೆಯಂಗಳ ಮತ್ತು ಚಂದ್ರಪ್ಪ ನಗರದ ಸುಮಾರು 800ಕ್ಕೂ ಅಧಿಕ ಕುಟುಂಬಗಳಿಗೆ ದಿನಸಿ ಕಿಟ್ ಗಳನ್ನು ವಿತರಿಸಿ ಆತ್ಮಸ್ಥೈರ್ಯ ತುಂಬಿದರು.
ಬೆಂಗಳೂರಿನಲ್ಲಿ ಮಳೆ ಇನ್ನೂ ಮುಂದುವರಿಯುವ ಸಾಧ್ಯತೆಗಳ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆಯಲ್ಲದೆ ಮುಂದಿನ 24 ಗಂಟೆಗಳಲ್ಲಿ 12 ಮಿಲಿಮೀಟರ್ ಗೂ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಎಚ್ಚರಿಕೆ ನೀಡಿದೆ .ಈ ಹಿನ್ನೆಲೆಯಲ್ಲಿ ಜಾಗೃತಿ ವಹಿಸಬೇಕೆಂದು ನಾಗರೀಕರಿಗೆ ಸಚಿವ ಕೆ.ಗೋಪಾಲಯ್ಯ ಮನವಿ ಮಾಡಿದರು.
ಕೊಳಚೆ ನಿರ್ಮೂಲನ ಮಂಡಳಿಯಿಂದ 1500 ಮನೆ ಮಂಜೂರು
ಮಳೆಯಿಂದ ತೊಂದರೆ ಗೊಳಗಾಗಿರುವವರಿಗೆ ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 800 ಕ್ಕೂ ಅಧಿಕ ಕುಟುಂಬಗಳಿಗೆ ಮುಖ್ಯಮಂತ್ರಿಗಳು ಈಗಾಗಲೇ ಪ್ರಕಟಿಸಿರುವಂತೆ ತಲಾ 25 ಸಾವಿರ ರೂ ಪರಿಹಾರ ಮತ್ತು ಆಹಾರ ಪದಾರ್ಥಗಳನ್ನು ತಲುಪಿಸಲಾಗುವುದು ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಮಂಗಳವಾರ ಇಡೀ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ನೀರು ನುಗ್ಗಿ ತೊಂದರೆಗೊಳಗಾದ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಅನೇಕ ಬಡಾವಣೆಗಳ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಮಹಾಲಕ್ಷ್ಮಿ ಲೇಔಟ್ ಕ್ಷೇತ್ರಕ್ಕೆ ಕೊಳಚೆ ನಿರ್ಮೂಲನಾ ಮಂಡಳಿಯಿಂದ ಸಿಎಂ ಮತ್ತು ವಸತಿ ಸಚಿವ ವಿ.ಸೋಮಣ್ಣ ಅವರು 1500 ಮನೆಗಳನ್ನು ಮಂಜೂರು ಮಾಡಿದ್ದಾರೆ. ಈ ಭಾಗದಲ್ಲಿ ರೆವಿನ್ಯೂ ಬಡಾವಣೆ ಮತ್ತು ಕೊಳಚೆ ಪ್ರದೇಶಗಳಲ್ಲಿ ಕಳೆದ 40 ವರ್ಷಗಳಿಂದ ಸಾವಿರಾರು ಕುಟುಂಬಗಳು ನೆಲೆಸಿವೆ. ಅವರನ್ನು ತೆರವುಗೊಳಿಸಿ ಹೊಸ ಮನೆ ನಿರ್ಮಾಣಮಾಡಲು ಸಾಧ್ಯ ವಾಗುತ್ತಿಲ್ಲ. ಅಂಥಹ ಪರಿಸ್ಥಿತಿ ಇದೆ ಎಂದರು.
ನಿನ್ನೆ ರಾತ್ರಿಯಿಂದಲೂ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಜೊತೆಗೆ ತೊಂದರೆಗೊಳಗಾದ ಜನರನ್ನು ರಕ್ಷಿಸುವ ಕೆಲಸ ಮಾಡಲಾಗಿದೆ. ಅವರಿಗೆ ಅಗತ್ಯ ಸೌಲಭ್ಯಗಳನ್ನು ಕೂಡ ನೀಡಲಾಗಿದೆ. ಈಗಾಗಲೇ ಸಿಎಂ ಅವರು ಘೋಷಿಸಿರುವಂತೆ ಪ್ರತಿ ಕುಟುಂಬಕ್ಕೆ ತಲಾ 25 ಸಾವಿರ ರೂ ಪರಿಹಾರ ನೀಡಲಾಗುವುದು ಎಂದರು.
ಸರಿ ಸುಮಾರು 850 ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿ ಆಹಾರ ಪದಾರ್ಥಗಳು, ಎಲೆಕ್ಟ್ರಾನಿಕ್ ವಸ್ತುಗಳು ಹಾಳಾಗಿದ್ದು, ಅಡಿಗೆ ಮಾಡಿಕೊಳ್ಳಲು ಜನರು ಪರಿತಪಿಸಬೇಕಾದ ಸ್ಥಿತಿ ನಿರ್ಮಾಣ ವಾಗಿತ್ತು. ಈ ಎಲ್ಲ ಕುಟುಂಬಗಳಿಗೆ ತಕ್ಷಣವೇ ಬೆಳಗಿನ ತಿಂಡಿ ಮತ್ತು ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಕ್ಷೇತ್ರ ವ್ಯಾಪ್ತಿಯ ಹಲವೆಡೆ ಕೈ ಗೊಂಡಿರುವ ಒಳಚರಂಡಿ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಮುಗಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ, ಆದಷ್ಟು ಶೀಘ್ರವೇ ತಡಗೋಡೆ ನಿರ್ಮಾಣ ಕಾಮಗಾರಿ ಮುಗಿಯಲಿದೆ ಎಂದರು.