ಸಚಿವರ ಶಾಲೆಗೆ ದಿಢೀರ್ ಭೇಟಿ: ಕಾಮಗಾರಿ ಪರಿಶೀಲನೆ
ಬೆಂಗಳೂರು.ಜೂ.15: ''ಭವಿಷ್ಯದ ಬುನಾದಿಯಾಗಿರುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು'' ಎಂದು ಬುಧವಾರದಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕೃಷ್ಣಾನಂದ ನಗರದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಈ ಸ್ಥಳಕ್ಕೆ ಭೇಟಿ ನೀಡಿದ ಸಚಿವರು ಕಾಮಗಾರಿಗಳ ಪ್ರಗತಿ, ಗಡುವು ಕುರಿತು ಪರಿಶೀಲಿಸಿ, ತ್ವರಿತಗತಿಯಲ್ಲಿ ಕೆಲಸ ಪೂರ್ಣಗೊಳಿಸುವಂತೆ ಸೂಚಿಸಿದರು.
ಶಿಕ್ಷಣಕ್ಕೆ ಪ್ರಾಧಾನ್ಯತೆ ನೀಡಿದರೆ ದೇಶ ಅಭಿವೃದ್ಧಿಯಾಗುತ್ತದೆ. ತಂತ್ರಜ್ಞಾನ ಅಳವಡಿಸಿಕೊಂಡು ಗುಣಮಟ್ಟದ ಶಿಕ್ಷಣ ನೀಡುವುದರಿಂದ ನಾಡಿಗೆ ಮಹತ್ತರ ಕೊಡುಗೆ ನೀಡುವಂತೆ ಮಕ್ಕಳನ್ನು ರೂಪಿಸಬಹುದು ಎಂದು ಶಿಕ್ಷಕರನ್ನು ಉದ್ದೇಶಿಸಿ ಅವರು ಕರೆ ನೀಡಿದರು.
ಶೈಕ್ಷಣಿಕ ಪ್ರಗತಿ ಬಗ್ಗೆ ಮಾಹಿತಿ ಪಡೆದ ಸಚಿವ:
ಬುಧವಾರ ಮಧ್ಯಾಹ್ನ ಶಾಲೆಗೆ ದೀಢೀರ್ ಭೇಟಿ ನೀಡಿದರು. ಶಾಲೆಗಳು ಆರಂಭವಾದ ಬಳಿಕ ಮೊದಲ ಭಾರಿಗೆ ಶಾಲೆಯೊಂದಕ್ಕೆ ಭೇಟಿ ನೀಡಿರುವ ಅವರು, ತರಗತಿಗಳಲ್ಲಿ ಪಾಠ, ಕಲಿಕೆ ಕುರಿತು ಮಕ್ಕಳೊಂದಿಗೆ ಮಾತನಾಡಿದರು. ಮಕ್ಕಳ ಹಾಜರಾತಿ, ಶಿಕ್ಷಣದ ಗುಣಮಟ್ಟ, ಶೈಕ್ಷಣಿಕ ಚಟುವಟಿಕೆ ಕುರಿತು ಶಾಲಾ ಸಿಬ್ಬಂದಿ ಯನ್ನು ವಿಚಾರಿಸಿದರು. ಮಕ್ಕಳಿಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳು ಮುಖ್ಯ. ಶಾಲಾ ಆವರಣದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ನಿಗದಿತ ಸಮಯದಲ್ಲೇ ಮುಗಿಸುವಂತೆ ಸೂಚಿಸಿದ್ದೇನೆ ಎಂದು ಆಡಳಿತ ಮಂಡಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಸದಸ್ಯ ಮಹದೇವ್, ಪುಟ್ಟಣ್ಣ, ಸಹಾಯಕ ಇಂಜಿನಿಯರ್ ರಂಗನಾಥ್ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.