ಕೆಜಿ ಹಳ್ಳಿ, ಡಿಜೆ ಹಳ್ಳಿ ಹಿಂಸಾಚಾರದ ಬಗ್ಗೆ ಸಚಿವರು ಹೇಳಿದ ಮಾತು
ಬೆಂಗಳೂರು, ಆಗಸ್ಟ್.12: ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಮತ್ತು ದೇವರ ಜೀವನಹಳ್ಳಿ(ಡಿ.ಜೆ.ಹಳ್ಳಿ)ಯಲ್ಲಿ ನಡೆದ ದಾಂಧಲೆ ನಡೆಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
Recommended Video
ಮಂಗಳವಾರ ರಾತ್ರಿ ಖುದ್ದು ಬೆಂಗಳೂರು ಪೊಲೀಸ್ ಕಮಿಷನರ್ ಜೊತೆ ಕಂದಾಯ ಸಚಿವ ಆರ್.ಅಶೋಕ್ ಕೂಡ ರೌಂಡ್ಸ್ ನಡೆಸಿದ್ದರು. ಗಲಭೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದ ಕಂದಾಯ ಸಚಿವ ಆರ್.ಅಶೋಕ್ ಬುಧವಾರ ಬೆಳಗ್ಗೆ ದಾಂಧಲೆ ಕುರಿತು ಸಿಎಂಗೆ ಸಂಪೂರ್ಣ ಮಾಹಿತಿ ನೀಡಿದರು.
ಬೆಂಗಳೂರು: ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ದಾಂಧಲೆಯ ಹಿಂದು-ಮುಂದು
ದಾಂಧಲೆಗೆ ಪ್ರಚೋದನೆ ನೀಡಿದವರು, ಗಲಭೆ ಸೃಷ್ಟಿಸಿದ ಪುಂಡರನ್ನು ಕೂಡಲೇ ಬಂಧಿಸುವಂತೆ ಕಂದಾಯ ಸಚಿವ ಆರ್ ಅಶೋಕ್ ಹಾಗೂ ಡಿಜಿಪಿ ಪ್ರವೀಣ್ ಸೂದ್ ಅವರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು.
ಅನಿವಾರ್ಯ ಸಂದರ್ಭದಲ್ಲಿ ಪೊಲೀಸರಿಂದ ಶಿಸ್ತುಕ್ರಮ
ಕಾಡುಗೊಂಡನಹಳ್ಳಿ ಮತ್ತು ದೇವರಜೀವನಹಳ್ಳಿ ದಾಂಧಲೆಗೆ ಸಂಬಂಧಿಸಿದಂತೆ ಕಾನೂನು ಅಡಿಯಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುವುದಕ್ಕೆ ಸರ್ಕಾರವು ಶಕ್ತವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ನಡೆಸಿದ ಸಭೆ ಬಳಿಕ ಅವರು ಮಾತನಾಡಿದರು. ಪೊಲೀಸರು ಮೊದಲು ಸಮಾಧಾನ ಮಾಡುವ ಕೆಲಸ ಮಾಡಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಅನಿವಾರ್ಯವಾಗಿ ನಂತರ ಕಾರ್ಯಪ್ರವೃತ್ತರಾಗಿದ್ದಾರೆ.
ನಿಷ್ಪಕ್ಷಪಾತ ತನಿಖೆ ನಡೆಸಲು ಪೊಲೀಸರಿಗೆ ಸೂಚನೆ
ಇಂತಹ ಘಟನೆ ರಾಜ್ಯದಲ್ಲಿ ಮೊದಲ ಪ್ರಕರಣವಾಗಿದ್ದು, ಇಡೀ ಪ್ರದೇಶದಲ್ಲಿ ಕರ್ಪ್ಯೂ ಜಾರಿಗೊಳಿಸಲಾಗಿದೆ. ಜೊತೆಗೆ ಸೂಕ್ತ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ನಿಷ್ಪಕ್ಷಪಾತ ತನಿಖೆ ನಡೆಸಲು ಪೊಲೀಸರಿಗೆ ಅಧಿಕಾರ ನೀಡಲಾಗಿದೆ. ನಮ್ಮ ಕ್ರಮ ಆರೋಪಿಗಳ ನೆನಪಿನಲ್ಲಿ ಉಳಿಯಲಿದೆ. ಗೂಂಡಾ ಕಾಯ್ದೆಯಡಿ ಆರೋಪಿಗಳನ್ನು ಬಂಧಿಸುತ್ತೇವೆ. ಇವರೆಲ್ಲ ಸಮಾಜ ದ್ರೋಹಿಗಳಾಗಿದ್ದು, ಶಾಸಕರ ಮೇಲೆ ದಾಳಿ ಸರಿಯಲ್ಲ ಎಂದಿದ್ದಾರೆ.
ಪೊಲೀಸರ ಕ್ರಮದ ಬಗ್ಗೆ ಕಂದಾಯ ಸಚಿವರ ಮೆಚ್ಚುಗೆ
ಮಂಗಳವಾರಿ ರಾತ್ರಿ ನಡೆದ ದಾಂಧಲೆಯಲ್ಲಿ ಏಕಾಏಕಿ 3,000ಕ್ಕೂ ಹೆಚ್ಚು ಜನರು ಸೇರಿದ್ದಾರೆ. 15 ಜೀಪ್ ಗಳಿಗೆ ಬೆಂಕಿ ಹಚ್ಚಿ ಸುಟ್ಟಿದ್ದಾರೆ. ಯಾರೇ ಆಗಿದ್ದರೂ ಕಾನೂನು ಕೈಗೆತ್ತಿಕೊಂಡಿರುವುದು ಸೂಕ್ತ ನಡೆಯಲ್ಲ. ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದ್ದು, ಯಾವ ರೀತಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎನ್ನುವುದನ್ನು ಸರ್ಕಾರವೇ ತೀರ್ಮಾನಿಸಲಿದೆ. ಪೊಲೀಸರು ಸರಿಯಾದ ಸಂದರ್ಭದಲ್ಲಿ ಸರಿಯಾದ ರೀತಿಯ ಕ್ರಮವನ್ನೇ ತೆಗೆದುಕೊಂಡಿದ್ದಾರೆ ಎಂದು ಸಚವ ಆರ್.ಅಶೋಕ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಕಂದಾಯ ಸಚಿವರ ಭೇಟಿ
ತಮ್ಮ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡುವಂತೆ ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಿದ್ದಾರೆ. ಬುಧವಾರ ಮಧ್ಯಾಹ್ನ ಕಂದಾಯ ಸಚಿವ ಆರ್.ಅಶೋಕ್ ರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಿದ್ದಾರೆ. ಏಕೆಂದರೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸೋದರಳಿಯ ನವೀನ್, ಒಂದು ಸಮುದಾಯದ ವಿರುದ್ಧ ಪೋಸ್ಟ್ ಹಾಕಿದ್ದಾರೆ ಎಂಬ ಆರೋಪವಿದೆ. ಈ ಹಿನ್ನೆಲೆ ರಾತ್ರಿ 8 ಗಂಟೆಯ ಹೊತ್ತಿಗೆ ಕಾವಲ್ ಬೈರಸಂದ್ರದಲ್ಲಿ ಇರುವ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಎದುರು ಉದ್ರಕ್ತರ ಗುಂಪು ಗಲಾಟೆ ಶುರು ಮಾಡಿತ್ತು.