ಒಂದು ಲಕ್ಷಕ್ಕೂ ಅಧಿಕ ಪುಸ್ತಕಗಳು ಆ್ಯಪ್ನಲ್ಲಿ ಲಭ್ಯ!
ಬೆಂಗಳೂರು, ಆ. 24: ಇಡೀ ದೇಶದಲ್ಲಿ ಮಾದರಿ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆಯನ್ನು ಹೊಂದಿದ ಮೊದಲ ರಾಜ್ಯ ಕರ್ನಾಟಕ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಸೋಮವಾರ ನಗರದ ಜಕ್ಕೂರಿನ ಎಂಸಿಇಎಸಿಎಚ್ ಬಡಾವಣೆಯ ಡಾ. ಶಿವರಾಮ ಕಾರಂತ ನಗರದ 2ನೇ ಹಂತದಲ್ಲಿ ಶಾಖಾ ಗ್ರಂಥಾಲಯಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಇಂದಿನ ಅವಶ್ಯಕತೆಗಳಿಗೆ ಅನುಗುಣವಾಗಿ ಡಿಜಿಟಲ್ ಗ್ರಂಥಾಲಯಗಳನ್ನು ರಾಜ್ಯಾದ್ಯಂತ ಸ್ಥಾಪಿಸಲು ಕ್ರಮ ವಹಿಸಲಾಗಿದೆ ಎಂದರು.
Recommended Video
ಕಳೆದ ಆರು ತಿಂಗಳ ಅವಧಿಯಲ್ಲಿ ರಾಜ್ಯದೆಲ್ಲೆಡೆ 272 ಡಿಜಿಟಲ್ ಗ್ರಂಥಾಲಯಗಳು ಕಾರ್ಯಾರಂಭ ಮಾಡಿದ್ದು, ಇಡೀ ದೇಶದಲ್ಲಿ ಇದು ಅಭೂತ ಪ್ರಯತ್ನವಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಡಿಜಿಟಲ್ ಮೊಬೈಲ್ ಆ್ಯಪ್
ಕೋವಿಡ್ ಸೃಷ್ಟಿಸಿದ ಸಾಮಾಜಿಕ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಷ್ಟ್ರದಲ್ಲಿಯೇ ಮೊದಲ ಕ್ರಮವಾಗಿ ಕರ್ನಾಟಕ ರಾಜ್ಯದ ಸಾರ್ವಜನಿಕ ಗ್ರಂಥಾಲಯ ಇಲಾಖೆ ಡಿಜಿಟಲ್ ಗ್ರಂಥಾಲಯ ಮೊಬೈಲ್ ಆ್ಯಪ್ನ್ನು ಬಿಡುಗಡೆ ಮಾಡಲಾಗಿದೆ. ಈಗಾಗಲೇ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಈ ಆ್ಯಪ್ ಬಳಸುತ್ತಿದ್ದಾರೆ. ಒಂದು ಲಕ್ಷಕ್ಕೂ ಮೀರಿದ ಪುಸ್ತಕಗಳು ಈ ಆ್ಯಪ್ನಲ್ಲಿ ಲಭ್ಯವಿವೆ ಎಂದರು.
ಈ ತನಕ 15 ಲಕ್ಷ ಜನರು ಇದರ ಉಪಯೋಗ ಪಡೆದಿದ್ದಾರೆ ಅವರು ವಿವರಿಸಿದರು.
6841 ಗ್ರಂಥಾಲಯಗಳು
ಪುಸ್ತಕ ಸಂಸ್ಕೃತಿ ಬೆಳೆಸಲು ರಾಜ್ಯಾದ್ಯಂತ 6841 ಗ್ರಂಥಾಲಯಗಳು ಕಾರ್ಯನಿರ್ವಹಿಸುತ್ತಿವೆ. ಇದು ದೇಶದಲ್ಲಿಯೇ ಮಾದರಿ ಗ್ರಂಥಾಲಯ ವ್ಯವಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ವರ್ಗದ ಜನರ ಜ್ಞಾನಾರ್ಜನೆಗೆ ಉಪಯೋಗವಾಗುವಂತೆ ಗ್ರಂಥಾಲಯಗಳನ್ನು ಅವಶ್ಯಕ ಸೇವೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದರು.
ಪ್ರತ್ಯೇಕ ವಿಭಾಗಗಳು
ಸ್ಥಳೀಯ ಕ್ಷೇಮಾಭಿವೃದ್ಧಿ ಸಂಘದವರು ಉಚಿತವಾಗಿ ನೀಡಿದ ಈ ನಿವೇಶನದಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗುವುದು. ಈ ಕಟ್ಟಡವು 3 ಅಂತಸ್ತಿನಿಂದ ಕೂಡಿದ್ದು, ಅದರಲ್ಲಿ ಮಹಿಳೆಯರಿಗೆ, ಹಿರಿಯ ನಾಗರೀಕರಿಗೆ ಅನುಕೂಲವಾಗುವಂತೆ ವಿವಿಧ ವಿಭಾಗಗಳನ್ನು ಸೃಜಿಸಲಾಗುವುದು. ಶಿವರಾಮ ಕಾರಂತರಿಗೆ ಮಕ್ಕಳೆಂದರೆ ಬಲುಮೆಚ್ಚುಗೆ ಇರುವುದರಿಂದ ಮಕ್ಕಳಿಗಾಗಿ ಈ ಗ್ರಂಥಾಲಯದಲ್ಲಿ ವಿಶೇಷ ವಿಭಾಗ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ ಪ್ರತ್ಯೇಕ ವಿಭಾಗವಿರಲಿದೆ ಎಂದು ಸುರೇಶ್ ಕುಮಾರ್ ಹೇಳಿದರು.
ಸಾರ್ವಜನಿಕರ ಉಪಯೋಗಕ್ಕೆ
ಈ ಕಟ್ಟಡವನ್ನು ಸಾಧ್ಯವಾದಷ್ಟು ತ್ವರಿತವಾಗಿ ನಿರ್ಮಾಣ ಮಾಡಿ ಸಾರ್ವಜನಿಕ ಉಪಯೋಗಕ್ಕೆ ಅರ್ಪಿಸಲಾಗುವುದು ಎಂದು ಹೇಳಿದ ಸಚಿವರು, ಈ ಕುರಿತು ಹೆಚ್ಚಿನ ಗಮನ ಹರಿಸಲು ಇಲಾಖೆಯ ನಿರ್ದೇಶಕರಿಗೆ ಸೂಚಿಸಿದರು. ಸ್ಥಳೀಯರ ಬೇಡಿಕೆಯಂತೆ ಈ ಗ್ರಂಥಾಲಯದ ಮುಂದೆ ಡಾ. ಶಿವರಾಮ ಕಾರಂತರ ಪ್ರತಿಮೆ ಸ್ಥಾಪನೆಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದರು. ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕ ಕೆ. ಎ. ಮುನಿಂದ್ರ ಕುಮಾರ್, ನಾಡಿನ ಹಿರಿಯ ಹಾಗೂ ಪ್ರಸಿದ್ಧ ಕಲಾವಿದರಾದ ಬಿ.ಕೆ.ಎಸ್. ವರ್ಮಾ, ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ. ಸತೀಶ ಕುಮಾರ ಎಸ್. ಹೊಸಮನಿ ಭಾಗವಹಿಸಿದ್ದರು.