ರಾಮಮಂದಿರ ನಿಧಿ ಸಂಗ್ರಹ ಮಾಡುತ್ತಿದ್ದ ವಾಹನದ ಮೇಲೆ ಕಲ್ಲು ತೂರಿದ ದುಷ್ಕರ್ಮಿಗಳು !
ಬೆಂಗಳೂರು: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹ ಮಾಡುತ್ತಿದ್ದ ವಾಹನದ ಮೇಲೆ ಸುದ್ದುಗುಂಟೆ ಪಾಳ್ಯದ ಬಿಸ್ಮಿಲ್ಲಾ ನಗರದಲ್ಲಿ ದುಷ್ಕರ್ಮಿಗಳು ಕಲ್ಲು ತೂರಿದ್ದು, ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಆರ್ ಎಸ್ ಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಸುದ್ದುಗುಂಟೆಪಾಳ್ಯ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ನೂರಾರು ಆರ್ ಎಸ್ ಎಸ್ ಕಾರ್ಯಕರ್ತರು ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಘೋಷಣೆ ಕೂಗಿದರು.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಿಸಲು ಹಿಂದೂ ಕಾರ್ಯಕರ್ತರು ಜನವರಿ 15 ರಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಇದರ ಭಾಗವಾಗಿ ಶುಕ್ರವಾರ ಹಿಂದೂ ಕಾರ್ಯಕರ್ತರು ಗುರಪ್ಪನ ಪಾಳ್ಯದ ಬಿಸ್ಲಿಲ್ಲಾ ನಗರದಲ್ಲಿ ನಿಧಿ ಸಂಗ್ರಹ ವಾಹನ ಚಾಲನೆ ಮಾಡುತ್ತಿದ್ದರು. ಈ ವೇಳೆ ಯಾರೋ ದುಷ್ಕರ್ಮಿಗಳು ಕಲ್ಲು ತೂರಿ ಹಲ್ಲೆಗೆ ಯತ್ನಿಸಿದ್ದಾಗಿ ಆರ್ಎಸ್ಎಸ್ ಕಾರ್ಯಕರ್ತರು ಆರೋಪಿಸಿದ್ದಾರೆ. ಕಲ್ಲು ತೂರಿದ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸುವಂತೆ ಆಗ್ರಹಿಸಿ ನೂರಾರು ಆರ್ಎಸ್ಎಸ್ ಕಾರ್ಯಕರ್ತರು ಸುದ್ದುಗುಂಟೆ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಠಾಣೆಗೆ ಡಿಸಿಪಿ ಶ್ರೀನಾಥ್ ಜೋಷಿ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದರು.

ರಾಮ ಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹಿಸುತ್ತಿದ್ದ ವಾಹನದ ಮೇಲೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದುಗುಂಟೆ ಪಾಳ್ಯ ಪೊಲೀಸರು ದೂರು ಸ್ವೀಕರಿಸಿ ತನಿಖೆ ನಡೆಸುತ್ತಿದ್ದಾರೆ.












Click it and Unblock the Notifications