Get Updates
Get notified of breaking news, exclusive insights, and must-see stories!

ಶಾಸಕ ವಿನಯ್ ಕುಲಕರ್ಣಿ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಮನವಿ: ನ್ಯಾಯಮೂರ್ತಿ ಹೇಳಿದ್ದೇನು?

ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ಸೆಷನ್ಸ್‌ ನ್ಯಾಯಾಲಯ ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗದಿಪಡಿಸಿರುವಲ್ಲಿ ಸಾಕಷ್ಟು ದೋಷಗಳಿವೆ ಎಂದು ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಶಾಸಕ ವಿನಯ ಕುಲಕರ್ಣಿ ಪರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದರು.

'ನನ್ನ ವಿರುದ್ಧ ಹೊರಿಸಲಾಗಿರುವ ದೋಷಾರೋಪಣೆ ಮತ್ತು ಬೆಂಗಳೂರು ಸಿಟಿ ಸಿವಿಲ್‌ ಕೋರ್ಟ್‌ನ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣಾ ನ್ಯಾಯಾಲಯದ ನ್ಯಾಯ ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು' ಎಂದು ವಿನಯ ಕುಲಕರ್ಣಿ ಸಲ್ಲಿಸಿರುವ ಕ್ರಿಮಿನಲ್‌ ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಸೋಮವಾರ ವಿಚಾರಣೆ ನಡೆಸಿದರು.

MLA Vinay Kulkarni Appeals to High Court for Fast-tracking the Case

ವಿಚಾರಣೆ ವೇಳೆ ವಿನಯ ಕುಲಕರ್ಣಿ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಸುದೀರ್ಘ ವಾದ ಮಂಡಿಸಿ, 'ಪ್ರಾಸಿಕ್ಯೂಷನ್‌ ಸಂಗ್ರಹಿಸಿರುವ ಸಾಕ್ಷ್ಯಗಳಲ್ಲಿ ಭಾರತೀಯ ದಂಡ ಸಂಹಿತೆ ಕಲಂ 201ರ (ಅಪರಾಧ ಪುರಾವೆ ಕಣ್ಮರೆಯಾಗುವಂತೆ ಮಾಡುವುದು ಅಥವಾ ಅಪರಾಧ ತೆರೆಯಲು ತಪ್ಪು ಮಾಹಿತಿ ನೀಡುವುದು) ಅನುಸಾರ ಕೊಲೆಗೆ ಬಳಸಲಾಗಿದೆ ಎಂಬ ಆಯುಧವನ್ನೇ ವಶಪಡಿಸಿಕೊಂಡಿಲ್ಲ. ಅಪರಾಧ ನಡೆದಿದ್ದ ಸ್ಥಳದಲ್ಲಿ ರಕ್ತದ ಕಲೆ, ಚಪ್ಪಲಿ, ಮೆಣಸಿನ ಪುಡಿ, ಚಾಪೆ, ಒಂದು ಸ್ಯಾಮ್‌ಸಂಗ್ ಫೋನ್‌ ಅನ್ನು ಮಹಜರು ಮಾಡಲಾಗಿದೆಯೇ ಹೊರತಾಗಿ ಬೇರಾವುದೇ ಸಾಕ್ಷ್ಯಗಳಿಲ್ಲ. ಹೀಗಾಗಿ, ಅರ್ಜಿದಾರರ ವಿರುದ್ಧ ವಿಚಾರಣಾ ನ್ಯಾಯಾಲಯ ದೋಷಾರೋಪ ಹೊರಿಸಿರುವ ಕ್ರಮ ನ್ಯಾಯಬದ್ಧವಾಗಿಲ್ಲ' ಎಂದು ವಿವರಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ದೀಕ್ಷಿತ್ ಅವರು, 'ಅಪರಾಧಿಕ ಪ್ರಕರಣಗಳಲ್ಲಿ ಸಾಂದರ್ಭಿಕ ಪುರಾವೆಗಳಿಂದಲೂ ಕೇಸನ್ನು ತೀರ್ಮಾನಿಸಬಹುದಲ್ಲವೇ?, ಜನಪ್ರತಿನಿಧಿಗಳ ವಿರುದ್ಧದ ಅಪರಾಧಿಕ ಪ್ರಕರಣಗಳು ಗಂಭೀರ ಎಂಬ ಕಾರಣಕ್ಕಾಗಿಯೇ, ಸುಪ್ರೀಂ ಕೋರ್ಟ್‌, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವನ್ನು ನಿಯೋಜಿಸಿದೆ. ಇಂತಹ ಪ್ರಕರಣಗಳಲ್ಲಿ ಮೆರಿಟ್‌ ಮೇಲಿನ ವಾದ ಆಲಿಸುವುದರಿಂದ ಉಳಿದ ಆರೋಪಿಗಳ ವಿರುದ್ಧದ ವಿಚಾರಣೆ ವಿಳಂಬವಾಗುತ್ತದೆ ಅಲ್ಲವೇ?' ಎಂದು ಕಾಳಜಿ ವ್ಯಕ್ತಪಡಿಸಿದರು.

'ಆರೋಪಿಯ ಹಕ್ಕುಗಳು ಬಹಳ ಮೌಲ್ಯಯುತವಾದವು ಎಂಬುದೇನೊ ಸರಿ. ಆದರೆ, ಕ್ರಿಮಿನಲ್ ಪ್ರಕರಣಗಳ ವಿಲೇವಾರಿ ಶೀಘ್ರ ಮುಗಿಯದೇ ಹೋದರೆ, ಸಮಾಜದಲ್ಲಿ ಯಾರೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ. ಹೀಗೇ ಆದರೆ ಶ್ರೀಸಾಮಾನ್ಯರ ಗತಿಯೇನು? ಒಳ್ಳೆಯ ಸಮಾಜ ನಿರ್ಮಾಣವಾಗಬೇಕು ಎಂದಾಗ ಎಲ್ಲಿಂದಲಾದರೂ ಅದನ್ನು ಸರಿಪಡಿಸುವ ಅದರಲ್ಲೂ, ನ್ಯಾಯಾಂಗದ ಪಾತ್ರ ಹಿರಿದಲ್ಲವೇ? ಎಂದು ಪ್ರಶ್ನಿಸಿದರು.

'ಈ ಪ್ರಕರಣವನ್ನು ಆದಷ್ಟು ಬೇಗ ಇತ್ಯರ್ಥಗೊಳಿಸುತ್ತೇನೆ' ಎಂದು ಹೇಳಿದರು. ನಾಗೇಶ್‌ ಅವರು ತಮ್ಮ ವಾದ ಮುಂದುವರಿಸಲು ಮತ್ತಷ್ಟು ಸಮಯ ಕೋರಿದ ಕಾರಣ ವಿಚಾರಣೆಯನ್ನು ಇದೇ 19ಕ್ಕೆ ಮುಂದೂಡಿದರು.

ಏನಿದು ಪ್ರಕರಣ?

ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2016ರ ಜೂನ್‌ 15ರಂದು ಯೋಗೀಶ್‌ಗೌಡ ಗೌಡರ್ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಸಿಸಿಎಚ್‌-82ರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಟ್ಟು 21 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಪಡಿಸಿ 2024ರ ಜನವರಿ 29ರಿಂದ ಫೆಬ್ರುವರಿ 1ರವರೆಗೆ ನಿಯಮಿತವಾಗಿ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಆದೇಶಿಸಿತ್ತು.

ಪ್ರಕರಣದ ಆರೋಪಿಯೂ ಆದ ವಿನಯ ಕುಲಕರ್ಣಿ, ದೋಷಾರೋಪ ನಿಗದಿ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಅಂತೆಯೇ ಪ್ರಕರಣಕ್ಕೆ ಸಂಬಂಧಿಸಿದಂತೆ 2020ರ ನವೆಂಬರ್‌ನಲ್ಲಿ ವಿನಯ ಕುಲಕರ್ಣಿ ಅವರನ್ನು ಬಂಧಿಸಿ, ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಒಂಬತ್ತು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+