ಸಿದ್ದರಾಮಯ್ಯರನ್ನು ಸುಳ್ಳು ಸ್ಲೋಗನ್ಗಳ ಸೃಷ್ಟಿಕರ್ತ ಎಂದು ಜರಿದ ಎಚ್ಡಿಕೆ
ಬೆಂಗಳೂರು, ಡಿಸೆಂಬರ್ 8: ವಿಧಾನ ಪರಿಷತ್ ಚುನಾವಣೆ ವೇಳೆಯಲ್ಲಿ ಮಾಜಿ ಸಿಎಂಗಳಾದ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ನಡುವಿನ ಪರಸ್ಪರ ವಾಕ್ಸಮರ ಮುಂದುವರೆದಿದೆ.
ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದರು. ಈಗ ಮತ್ತೆ ಎಚ್ಡಿಕೆ ಸರಣಿ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
"ಸುಳ್ಳು ಸ್ಲೋಗನ್ಗಳ ಸೃಷ್ಟಿಕರ್ತ, ಟರ್ಮಿನೇಟರ್, ಸಿದ್ದಕಲೆಯ ನಿಪುಣಾಗ್ರೇಸರು ಈಗ "ಜೆಡಿಎಫ್' ಎಂಬ ಹೊಸ ಜಪ ಮಾಡಿಕೊಂಡು ತಮ್ಮ ಜಾತ್ಯತೀತ ತತ್ವಾದರ್ಶಗಳಿಗೆ ಮಂಡ್ಯದಲ್ಲಿ ಎಳ್ಳುನೀರು ಬಿಟ್ಟಿದ್ದಾರೆ. ಸಹಕಾರ ಸಚಿವರ ಸಹಾಯಕನನ್ನು ಗೆಲ್ಲಿಸಿಕೊಳ್ಳಲು ಜಾತಿ ಸಹಕಾರದ ಮೊರೆ ಹೋಗಿದ್ದಾರೆ. ಅಯ್ಯೋ, ಎಂಥಾ ದುರ್ವಿಧಿ," ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.

"ಮತ ಫಸಲಿಗಾಗಿ ಜಾತಿ ರಾಜಕೀಯ ಮಾಡುತ್ತಿರುವ ನಕಲಿ ಜಾತ್ಯತೀತ ಶೂರನ ಅಸಲಿ ರೂಪ ಕಳಚಿದೆ. ಸಮುದಾಯದ ಅಧ್ಯಕ್ಷರೊಬ್ಬರು, ನೀವು ಮತ ಹಾಕುವುದು ಕಾಂಗ್ರೆಸ್ ಪಕ್ಷಕ್ಕಲ್ಲ, ನಮ್ಮ ಸಮುದಾಯದ ಸಿದ್ದಕಲಾಕೋವಿದನಿಗೆ ಎಂದು ಮಂಡ್ಯದಲ್ಲಿ ಮನೆ ಮನೆಗೂ ಹೋಗಿ ಪ್ರಚಾರ ಮಾಡುತ್ತಿದ್ದಾರೆ. ಹೇಳುವುದು ಒಂದು, ಮಾಡುವುದು ಮತ್ತೊಂದು," ಎಂದು ಪರೋಕ್ಷವಾಗಿ ಸಿದ್ದರಾಮಯ್ಯರನ್ನು ಕುಟುಕಿದ್ದಾರೆ.
"ಅವರಿಗೆ ಜೆಡಿಎಸ್ ಫೋಬಿಯಾ ಕಾಡುತ್ತಿದ್ದು, ಚುನಾವಣೆ ಬಂದರೆ ಜೆಡಿಎಸ್ ಚಳಿ- ಜ್ವರ ಹತ್ತುತ್ತದೆ. ಈ ಜ್ವರ ಬಿಡಿಸಿಕೊಳ್ಳಲು ಸಿದ್ದಸೂತ್ರದಾರ ಬಳಸುವ ಹೊಸ ಔಷಧವೇ ʼJDFʼ. ಅವರನ್ನು ಉಳಿಸುವ ಟಾನಿಕ್ ಹೆಸರೇ ಜೆಡಿಎಸ್ ಕುಟುಂಬ ರಾಜಕಾರಣ. ಹಾಗಾದರೆ, ಅವರದ್ದು SCF (ಸಿದ್ದಸೂತ್ರದಾರ ಕಾಂಗ್ರೆಸ್ ಫ್ಯಾಮಿಲಿ) ಅಲ್ಲವೆ?," ಎಂದು ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಬಾಣ ಹೂಡಿದ್ದಾರೆ.

"ಅಲ್ಲದೆ ಜೆಡಿಎಸ್, ಬಿಜೆಪಿ ಬಿ ಟೀಂ ಎಂದು ಭಜನೆ ಮಾಡುವವರು, ಸಹಕಾರ ಸಚಿವರ ಸಹಾಯಕನನ್ನು ಅಭ್ಯರ್ಥಿ ಮಾಡಿದ್ದು ಯಾರಿಗೆ ಸಹಕಾರ ನೀಡಲಿಕ್ಕೆ? ಜಾತ್ಯತೀತತೆಯ ಮುಖವಾಡ ಹಾಕಿಕೊಂಡು ಬಿಜೆಪಿಯನ್ನು ಬೈಯ್ಯುವವರು ಅದೇ ಪಕ್ಷದ ಸಚಿವರ ಪಿಎಗೆ ವಿಧಾನ ಪರಿಷತ್ ಟಿಕೆಟ್ ಕೊಟ್ಟಿದ್ದರ ಒಳ ಲೆಕ್ಕ ಏನು? ಇದು ಯಾರ ಲೆಕ್ಕ ಚುಕ್ತಾ ಮಾಡಲಿಕ್ಕೆ? ಇದೆಂಥಾ ಒಳ ಒಪ್ಪಂದ?," ಎಂದು ಪ್ರಶ್ನಿಸಿದ್ದಾರೆ.
"ಜಾತ್ಯತೀತತೆಯ ಜಗಜಟ್ಟಿ ಮೈಸೂರಿನಲ್ಲಿ ಮಾಡಿದ ಜಾತಿ ರಾಜಕಾರಣ ಗೊತ್ತಿದೆ. ʼಸಂದೇಶ ಸನ್ನಿಧಿʼಯಲ್ಲಿ ಕೂತು ಕಾಂಗ್ರೆಸ್ ಮತದಾರರ 2ನೇ ಪ್ರಾಶಸ್ತ್ಯದ ಮತಗಳು ಬಿಜೆಪಿಗೇ ಹೋಗಬೇಕು, ಜೆಡಿಎಸ್ಗಲ್ಲ ಎಂದು ಫರ್ಮಾನು ಹೊರಡಿಸಿದ ʼಚಾಮುಂಡೇಶ್ವರಿ ಕ್ಷೇತ್ರ ತಿರಸ್ಕೃತʼ ಸುಳ್ಳು ಸ್ಲೋಗನ್ಗಳ ಸೃಷ್ಟಿಕರ್ತನ ನಾಟಕದ ಪರದೆ ಜಾರಿಬಿದ್ದಿದೆ," ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ರಾಜಕೀಯ ಆರಂಭಿಸಿದ ಮಾತೃಪಕ್ಷವನ್ನೇ ಕ್ರೂರವಾಗಿ ಮುಳುಗಿಸಲು ಹೊರಟ ಆ ನಾಯಕರು, ಕೈ ಹಿಡಿದ ಸ್ವಪಕ್ಷವನ್ನೂ ಸ್ವಾಹಾ ಮಾಡುತ್ತಿದ್ದಾರೆ. ʼವಿನಾಶಕಾಲೇ ವಿಪರೀತ ಸುಳ್ಳು!ʼ. ಆ ಸುಳ್ಳುಗಳೇ ಅವರನ್ನು ಸುಡುತ್ತವೆ. ಆಟ ಈಗ ಆರಂಭ ಎಂದು ಹೆಸರು ಬಳಸದೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.












Click it and Unblock the Notifications