ಅನಂತ ಕುಮಾರ್ ನಿಧನ: ಇಂದು ಸಂಜೆ ಮೋದಿ ಬೆಂಗಳೂರಿಗೆ
ಬೆಂಗಳೂರು, ನವೆಂಬರ್ 12: ಕೇಂದ್ರ ಸಚಿವ ಅನಂತ ಕುಮಾರ್ ಅನಾರೋಗ್ಯದಿಂದ ಸೋಮವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಅವರ ಅಂತಿಮ ದರ್ಶನವನ್ನು ಪಡೆಯಲು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು( ನವೆಂಬರ್ 12) ಸಂಜೆ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಸೋಮವಾರ ಬೆಳಗ್ಗೆಯೇಪ್ರಧಾನಿ ಮೋದಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿ ಅನಂತ ಕುಮಾರ್ ಅಂತಿಮ ದರ್ಶನವನ್ನು ಪಡೆಯಲಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ತಿಳಿಸಿದ್ದರು. ಆದರೆ ಇದೀಗ ಬೆಂಗಳೂರಿಗೆ ಬರುವ ಸಮಯ ಬದಲಾಗಿದ್ದು ಸೋಮವಾರ ಸಂಜೆ ಅನಂತಕುಮಾರ್ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಸಚಿವ ಅನಂತ ಕುಮಾರ್ ನವೆಂಬರ್ 12ರಂದು ಬೆಳಗಿನ ಜಾವ ನಿಧನರಾಗಿದ್ದಾರೆ, ಅವರು ಶ್ವಾಸಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದರು, ಲಂಡನ್ಗೆ ತೆರಳಿ ಚಿಕಿತ್ಸೆ ಪಡೆದರೂ ಕೂಡ ಗುಣಮುಖರಾಗಲು ಸಾಧ್ಯವಾಗಿಲ್ಲ, ಅವರಿಗೆ 59 ವರ್ಷ ವಯಸ್ಸಾಗಿತ್ತು. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವರು ತೆರಳಿ ಅನಂತ ಕುಮಾರ್ ಅಂತಿಮ ದರ್ಶನ ಪಡೆದಿದ್ದಾರೆ.

ಸೋಮವಾರ ರಾಜ್ಯಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು ಮೂರು ದಿನಗಳ ಕಾಲ ಶೋಕಾಚರಣೆಗೆ ಸರ್ಕಾರ ಆದೇಶಿಸಿದೆ. ಮೋದಿ ಬರಲಿರುವ ಹಿನ್ನೆಲೆಯಲ್ಲಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. 1ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ನವೆಂಬರ್ 13ರಂದು ಮಧ್ಯಾಹ್ನ 1 ಗಂಟೆಗೆ ಅನಂತ ಕುಮಾರ್ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿವೆ.












Click it and Unblock the Notifications