ನಲಪಾಡ್ ನ್ಯಾಯಾಂಗ ಬಂಧನ ಮೇ 25ರ ತನಕ ವಿಸ್ತರಣೆ
ಬೆಂಗಳೂರು, ಮೇ 11 : ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ನ್ಯಾಯಾಂಗ ಬಂಧನದ ಅವಧಿಯನ್ನು ಮೇ 25ರ ತನಕ ವಿಸ್ತರಣೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಮೊಹಮ್ಮದ್ ನಲಪಾಡ್ ಮತ್ತು ಇತರ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಮೇ 11ರಂದು ಅಂತ್ಯಗೊಂಡಿತು. ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು 1ನೇ ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಲಾಯಿತು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರು ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನವನ್ನು ಮೇ 25ರ ತನಕ ವಿಸ್ತರಣೆ ಮಾಡಿ ಆದೇಶ ನೀಡಿದರು. ಫೆ.19ರಂದು ಮೊಹಮ್ಮದ್ ನಲಪಾಡ್ ಪೊಲೀಸರು ಮುಂದೆ ಶರಣಾಗಿದ್ದರು. ಫೆ.21ರಂದು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ವಿದ್ವತ್ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಮೊಹಮ್ಮದ್ ನಲಪಾಡ್, ಅರುಣ್ ಬಾಬು, ಶ್ರೀ ಕೃಷ್ಣ, ಮಂಜುನಾಥ್, ಆಶ್ರಫ್, ಬಾಲಕೃಷ್ಣ, ಅಭಿಷೇಕ್, ನಾಸಿರ್ ವಿರುದ್ಧ ಸಿಸಿಬಿ ಪೊಲೀಸರು 600 ಪುಟಗಳ ಜಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ.
ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಫೆ.17ರಂದು ಯು.ಬಿ.ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು. ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸುವಾಗ ಕೃಷ್ಣ ಎಂಬ ಆರೋಪಿಯನ್ನು ಇನ್ನೂ ಹುಡುಕಬೇಕಾಗಿದೆ ಎಂದು ಹೇಳಿದ್ದಾರೆ.
ಹಲ್ಲೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಮೊಹಮ್ಮದ್ ನಲಪಾಡ್ ಸೇರಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿರುವುದರಿಂದ ಜಾಮೀನು ಸಿಗುವ ನಿರೀಕ್ಷೆ ಇತ್ತು. ಆದರೆ, ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿದೆ.












Click it and Unblock the Notifications