ಕಾಂಗ್ರೆಸ್ಸಿನಿಂದ ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ಉಚ್ಚಾಟನೆ
ಬೆಂಗಳೂರು, ಫೆಬ್ರವರಿ 18: ಶಾಂತಿನಗರ ಕ್ಷೇತ್ರದ ಶಾಸಕ ಎನ್.ಎ ಹ್ಯಾರೀಸ್ ಅವರ ಪುತ್ರ, ಬೆಂಗಳೂರು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ನಲಪಾಡ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.
ವಿದ್ವತ್ ಎಂಬ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ನಲಪಾಡ್ ಅವರು ಆರೋಪಿ ನಂಬರ್ 01 ಆಗಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಶಾಂತಿನಗರ ಶಾಸಕ ಹ್ಯಾರೀಸ್ ಪುತ್ರನ ಮೇಲೆ ಹಲ್ಲೆ ಪ್ರಕರಣ
ಈ ಹಿನ್ನೆಲೆಯಲ್ಲಿ ಮೊಹಮ್ಮದ್ ನಲಪಾಡ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಪಕ್ಷದ ಯಾವುದೇ ಚಟುವಟಿಕೆಯಲ್ಲಿ ಮೊಹಮ್ಮದ್ ಅವರು ಪಾಲ್ಗೊಳ್ಳುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅವರು ನೀಡಿದ ಆದೇಶದಲ್ಲಿ ಹೇಳಲಾಗಿದೆ.
ಡಾಲರ್ಸ್ ಕಾಲೋನಿ ನಿವಾಸಿ, ಉದ್ಯಮಿ ಲೋಕನಾಥ್ ಅವರ ಪುತ್ರ ವಿದ್ವತ್ ಅವರು ಇತ್ತೀಚೆಗೆ ಸಿಂಗಪುರದಲ್ಲಿ ಪದವಿ ಪಡೆದು, ಬೆಂಗಳೂರಿಗೆ ವಾಪಸ್ ಆಗಿದ್ದರು. ಯುಬಿ ಸಿಟಿಯ ಫರ್ಜ್ ಕೆಫೆಯಲ್ಲಿ ಸ್ನೇಹಿತರ ಜತೆ ಇದ್ದ ವಿದ್ವತ್ ಹಾಗೂ ಹ್ಯಾರೀಸ್ ಪುತ್ರ ಮೊಹಮ್ಮದ್ ಮತ್ತು ಸಂಗಡಿಗರಿಗೆ ಜಗಳವಾಗಿದೆ. ಮೊಹಮ್ಮದ್ ಕಡೆಯವರು ವಿದ್ವತ್ ಹಾಗೂ ಅವರ ಸೋದರನಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.