ಬೆಂಗಳೂರು ಗ್ರಾ.: ಮಳೆಯಿಂದ ಹದಗೆಟ್ಟ ರಸ್ತೆಗಳ ಶೀಘ್ರ ದುರಸ್ತಿಗೆ ಸಂಸದ ಬಚ್ಚೇಗೌಡ ಸೂಚನೆ
ಬೆಂಗಳೂರು ಗ್ರಾ., ಸೆ. 28: ಜಿಲ್ಲೆಯಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಬಹುತೇಕ ಗ್ರಾಮಗಳ ರಸ್ತೆಗಳು ಹದಗೆಟ್ಟಿದ್ದು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ದುರಸ್ತಿಗೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ಎನ್.ಬಚ್ಚೇಗೌಡ ಅವರು ಸೂಚಿಸಿದ್ದಾರೆ.
ದಿಶಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, "ಜಿಲ್ಲೆಯಲ್ಲಿ ಮಳೆಯಿಂದಾಗಿ ಹದಗೆಟ್ಟ ರಸ್ತೆಗಳು, ಸೇತುವೆಗಳ ದುರಸ್ತಿ ಹಾಗೂ ಕೆರೆ ಅಭಿವೃದ್ಧಿಗಾಗಿ 26 ಕೋಟಿ ರೂ. ಅನುದಾನ ಮಂಜೂರು ಮಾಡುವಂತೆ ಸರ್ಕಾರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ವತಿಯಿಂದ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರದಲ್ಲೇ 12 ಕೋಟಿ ರೂ. ಅನುದಾನ ಬಿಡುಗಡೆಯಾಗಲಿದ್ದು ರಸ್ತೆ ಸೇತುವೆ ಅಭಿವೃದ್ಧಿಗಾಗಿ ಪ್ರತಿ ತಾಲ್ಲೂಕಿಗೆ 2.5 ಕೋಟಿ ರೂ. ಹಾಗೂ ಕೆರೆ ಅಭಿವೃದ್ಧಿಗಾಗಿ 50 ಲಕ್ಷ ರೂ. ಅನುದಾನ ನಿಗದಿಗೊಳಿಸಲಾಗುವುದು" ಎಂದು ಮಾಹಿತಿ ನೀಡಿದ್ದಾರೆ.
ಯಶವಂತಪುರ ಸಿ.ವಿ.ರಾಮನ್ ರಸ್ತೆ ಬಂದ್: ಪರ್ಯಾಯ ಮಾರ್ಗ ಹೀಗಿದೆ ನೋಡಿ
"ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರರು, ನಾಲ್ಕು ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಮಳೆಯಿಂದ ಹಾಳಾದ ರಸ್ತೆಗಳ ಮಾಹಿತಿಯನ್ನು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಂದ ಸಂಗ್ರಹಿಸಬೇಕು. ಬಳಿಕ ಕ್ರಿಯಾ ಯೋಜನೆ ಸಿದ್ಧಪಡಿಸಿ ಆಯಾ ತಾಲ್ಲೂಕು ವಿಧಾನಸಭಾ ಕ್ಷೇತ್ರದ ಶಾಸಕರ ಅನುಮೋದನೆ ಪಡೆದು ಜಿಲ್ಲಾ ಪಂಚಾಯತಿಗೆ ವಾರದೊಳಗೆ ಪ್ರಸ್ತಾವನೆ ಸಲ್ಲಿಸಿರೆ ಅನುದಾನ ಬಿಡುಗಡೆಗೆ ಕ್ರಮ ವಹಿಸಲಾಗುವುದು" ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
"ಮನೆ ಮನೆಗೆ ಗಂಗೆ ಯೋಜನೆಯಡಿ ಪ್ರತಿ ಮನೆಗಳಿಗೆ ನೀರು ಕಲ್ಪಿಸಲು ಹಾಗೂ ಜಲಜೀವನ್ ಮಿಷನ್, ಅಟಲ್ ಭೂಜಲ, ಯೋಜನೆಯಡಿ ಚೆಕ್ ಡ್ಯಾಂ ನಿರ್ಮಾಣ, ಕೆರೆಗಳಲ್ಲಿ ಹೂಳೆತ್ತುವಿಕೆ ಸೇರಿದಂತೆ ಅಂತರ್ಜಲ ಹೆಚ್ಚಿಸುವ ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಕೈಗೊಂಡು ಪೂರ್ಣಗೊಳಿಸಬೇಕು" ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.
"ನಿಗಮ, ಮಂಡಳಿಗಳ ವಿವಿಧ ಯೋಜನೆಗಳಡಿ ಸಾಲ, ಸಹಾಯಧನ, ಇನ್ನಿತರ ಸೌಲಭ್ಯಗಳಿಗೆ ಫಲಾನಿಭವಿಗಳನ್ನು ಆಯ್ಕೆ ಮಾಡುವಾಗ ನೈಜತೆಯನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಬೇಕು. ಇಲ್ಲದಿದ್ದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು" ಎಂದು ಎಚ್ಚರಿಸಿದ್ದಾರೆ.
"ಜಿಲ್ಲೆಯ 30 ರಿಂದ 40 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮ ಖಾತೆ ಪ್ರಕರಣಗಳ ಕುರಿತಂತೆ ದೂರುಗಳು ಬಂದಿದ್ದು, ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಇ-ಸ್ವತ್ತು ತಂತ್ರಾಂಶದಲ್ಲಿ ಇದುವರೆಗೆ ನಡೆದ ಅಕ್ರಮ ಇ-ಖಾತೆ ಪ್ರಕರಣಗಳ ಸಮೀಕ್ಷೆ ನಡೆಸಿ ಮಾಹಿತಿಯನ್ನು ಜಿಲ್ಲಾ ಪಂಚಾಯಿತಿಗೆ ಹದಿನೈದು ದಿನಗಳೊಳಗಾಗಿ ಸಲ್ಲಿಸಬೇಕು. ಅಕ್ರಮ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಿಸಿದ ಪಿಡಿಓಗಳನ್ನು ಅಮಾನತುಗೊಳಿಸಬೇಕು" ಎಂದು ಜಿಪಂ ಸಿಇಓಗೆ ಆದೇಶಿಸಿದ್ದಾರೆ.
"ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಮಗಳಲ್ಲಿ ಅವಶ್ಯವಿರುವ ರಸ್ತೆ, ನೀರು, ಶಾಲೆ, ಅಂಗನವಾಡಿ, ಗ್ರಂಥಾಲಯ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಂದಾಜು ವೆಚ್ಚದೊಂದಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ, ಸಲ್ಲಿಸಿ ಅನುಮೋದನೆ ಪಡೆದು ಶೀಘ್ರವಾಗಿ ಕಾಮಗಾರಿಗಳನ್ನು ಕೈಗೊಂಡು ಪೂರ್ಣಗೊಳಿಸಬೇಕು" ಎಂದು ತಾಕೀತು ಮಾಡಿದ್ದಾರೆ.