ಕಾಂಗ್ರೆಸ್ ಮತ್ತು ಬಿಜೆಪಿ ಹೊಂದಾಣಿಕೆ ವಿಚಾರ: ಸಂಸದ ಪ್ರತಾಪ್ ವಿರುದ್ಧ ಸಿಎಂ ಕಿಡಿ
ಬೆಂಗಳೂರು ಜೂನ್ 14: ಕಾಂಗ್ರೆಸ್ ಮತ್ತು ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ಹೇಳಿಕೆ ನೀಡಿದ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರಿಗೆ ರಾಜಕೀಯ ಪ್ರಬುದ್ಧತೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಪ್ರತಾಪ್ ಸಿಂಹ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಬೆಂಗಳೂರು ರಸ್ತೆ ತಾವೇ ಮಾಡಿಸಿದ್ದು ಎನ್ನುತ್ತಾರೆ. ಅವರು ಬೆಂಗಳೂರು ರಸ್ತೆಗೆ ಸಂಸದರೇ ಎಂದು ಪ್ರಶ್ನಿಸಿದ ಮುಖ್ಯ ಮಂತ್ರಿಗಳು ನನ್ನ ರಾಜಕೀಯ ಜೀವನದಲ್ಲಿ ವಿರೋಧ ಪಕ್ಷದವರೊಂದಿಗೆ ಮಾತೂ ಆಡುವುದಿಲ್ಲ ಅಧಿಕಾರದಲ್ಲಿದ್ದಾಗ ಅವರ ಮನೆಗೂ ಹೋಗುವುದಿಲ್ಲ. ಅವರು ಬಂದರೆ ಸೌಜನ್ಯಕ್ಕಾಗಿ ಮಾತನಾಡುತ್ತೇನೆ ಆದರೆ ರಾಜಕೀಯ ಮಾತನಾಡುವುದಿಲ್ಲ' ಎಂದರು.

ಕಾಂಗ್ರೆಸ್ ಮತ್ತು ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ಸಂಸದ ಪ್ರತಾಪ್ ಸಿಂಹ ಅವರು ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ ಯಾರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಹೇಳಬೇಕು. ಯಾರು ಎಂದು ಅವರಿಗೆ ಗೊತ್ತಿರಬೇಕಲ್ಲ ಮಾಹಿತಿ ಇದ್ದರೆ ಹೇಳಲಿ. ರಾಜ್ಯಪಾಲರಿಗೆ ದೂರು ಕೊಡುವುದಾದರೆ ಕೊಡಲಿ ಎಂದ ಮುಖ್ಯಮಂತ್ರಿಗಳು ಪೇ ಸಿಎಂ ಕುರಿತು ತನಿಖೆ ಮಾಡಿಸಲು ಹೇಳಿರಲಿಲ್ಲ. ತನಿಖೆಯನ್ನು ಯಾವಾಗ , ಯಾರಿಂದ ಎಷ್ಟು ಹೊತ್ತಿಗೆ ಮಾಡಿಸಬೇಕು ಎನ್ನುವುದು ನಮಗೆ ಸೇರಿದ್ದು ಎಂದರು.
ಅಧಿಕೃತ ಸಭೆಯಲ್ಲ- ಸಿಎಂ
ನಿನ್ನೆ ನಡೆದ ಬಿಬಿಎಂಪಿ ಸಭೆಯಲ್ಲಿ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೆವಾಲ ಅವರು ಭಾಗಿಯಾಗಿರುವ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅದು ಅಧಿಕೃತ ಸಭೆಯಲ್ಲ. ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ಕರೆದಿದ್ದ ಸಭೆಯಲ್ಲಿ ಪ್ರಾಸಂಗಿಕವಾಗಿ ಬಿಬಿಎಂಪಿ ಚುನಾವಣೆ ಬಗ್ಗೆಯೂ ಮಾತನಾಡಿದ್ದಾರೆ. ಹೆಬ್ಬಾಳ ಫ್ಲೈ ಓವರ್ ನೋಡಲು ಹೋಗುತ್ರಿದ್ದ ಸಂದರ್ಭದಲ್ಲಿ ಕುಳಿತಿದ್ದಾರೆ. ಉಪಮುಖ್ಯಮಂತ್ರಿಗಳು ಶಾಸಕರನ್ನು ಭೇಟಿ ಮಾಡಿದ್ದು, ಕಾನೂನು ಅಭಿಪ್ರಾಯ ಪಡೆಯಲು ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದರು.
ಪ್ರತಾಪ್ ಸಿಂಹ ಹೇಳಿದ್ದೇನು?
ರಾಜ್ಯದ ಕೆಲವು ಬಿಜೆಪಿ ನಾಯಕರು ಸಿದ್ದರಾಮಯ್ಯ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಗಂಭೀರವಾದ ಆರೋಪ ಮಾಡಿದ್ದರು. ಮೈಸೂರು ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ತಮ್ಮ ಪಕ್ಷದ ನಾಯಕರ ವಿರುದ್ಧವೇ ಕಿಡಿಕಾರಿದರು.

"ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ನ ಕೆಲವು ನಾಯಕರು ಪರಸ್ಪರ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ. ಯಾರ ಮೇಲೆ ಯಾರೂ ಆರೋಪ ಮಾಡದಂತೆ ಒಪ್ಪಂದ ಮಾಡಿಕೊಂಡಿರುವಂತೆ ವರ್ತಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಜೊತೆ ಬಿಜೆಪಿಯ ಹಿರಿಯ ನಾಯಕರೇ ಶಾಮೀಲಾಗಿರಬಹುದು" ಎಂದು ಪ್ರತಾಪ್ ಸಿಂಹ ಆರೋಪ ಮಾಡಿದ್ದಾರೆ.
"ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಪರಸ್ಪರ ಹೊಂದಾಣಿಕೆ ಮಾಡಿಕೊಂಡಿರುವಂತೆ ಕಾಣುತ್ತದೆ. ಬಿಜೆಪಿ ಅಧಿಕಾರಕ್ಕೆ ಬಂದಾಗ ಅರ್ಕಾವತಿ ಹಗರಣ, ಡಿ ನೋಟಿಫಿಕೇಶನ್, ಕೆಂಪಣ್ಣ ಆಯೋಗದ ವರದಿ ಮುಂತಾದ ಪ್ರಕರಣಗಳನ್ನು ಮುಂದಿಟ್ಟು ಕಾಂಗ್ರೆಸ್ ನಾಯಕರನ್ನು ಹೆದರಿಸುವ ಕೆಲಸ ಮಾಡುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಆಡಳಿತದ ಅವಧಿಯಲ್ಲಿ ಕೇಳಿ ಬಂದಿರುವ ಆರೋಪಗಳ ಬಗ್ಗೆ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳುವ ಬೆದರಿಕೆ ಹಾಕುತ್ತಾರೆ. ಅವರ ವಿರುದ್ಧ ಇವರು ತನಿಖೆ ಮಾಡಲ್ಲ, ಇವರ ವಿರುದ್ಧ ಅವರೂ ತನಿಖೆ ಮಾಡಲ್ಲ, ಇದನ್ನು ನೋಡುತ್ತಿದ್ದರೆ, ಎರಡೂ ಪಕ್ಷದ ಹಿರಿಯ ನಾಯಕರು ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎನ್ನುವ ಅನುಮಾನ ಮೂಡುತ್ತಿದೆ" ಎಂದು ಹೇಳಿದ್ದಾರೆ.
ಮಾತು ಮುಂದುವರೆಸಿದ ಅವರು, "ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿ ಬಿಜೆಪಿಯವರನ್ನು ಹೆದರಿಸುತ್ತದೆ. ನಮ್ಮವರು ಅಧಿಕಾರಕ್ಕೆ ಬಂದಾಗ ನಿಮ್ಮನ್ನು ಹೆದರಿಸುತ್ತಾರೆ. ಇದೆಲ್ಲವೂ ಹೊಂದಾಣಿಕೆ ರಾಜಕಾರಣ ಇರಬಹುದೇ" ಎಂದು ಪ್ರಶ್ನೆ ಮಾಡಿದ್ದಾರೆ. "ನಿನಗೆ ತುರಿಕೆಯಾದರೆ ನಾನು ನಿನ್ನ ಬೆನ್ನು ಕೆರೆಯುತ್ತೇನೆ, ನನಗೆ ತುರಿಕೆಯಾದಾಗ ನೀನು ನನ್ನ ಬೆನ್ನು ಕೆರಿ ಎನ್ನುವಂತಹ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎನಿಸುತ್ತದೆ. ನಮ್ಮ ಪಕ್ಷದ ಕಾರ್ಯಕರ್ತರು ಎಂದೂ ಹೀಗೆ ಹೊಂದಾಣಿಕೆ ರಾಜಕಾರಣ ಮಾಡಲ್ಲ, ಕೆಲವು ಹಿರಿಯ ನಾಯಕರೇ ಇಂತ ಕೆಲಸ ಮಾಡೋದು" ಎಂದು ಅಸಮಾಧಾನ ಹೊರಹಾಕಿದ್ದಾರೆ.












Click it and Unblock the Notifications