Bengaluru Roads: ಬೆಂಗಳೂರಿಗಿಂತ ಹಿಂದುಳಿದ ದೇಶಗಳ ರಸ್ತೆಗಳೇ ಬೆಸ್ಟ್: ಡಿಕೆಶಿಗೆ ತೇಜಸ್ವಿ ಸೂರ್ಯ ಟಾಂಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಿಬಿಎಂಪಿ ವ್ಯಾಪ್ತಿಯಲ್ಲಿ ಸೋಮವಾರ ವಿವಿಧ ರಸ್ತೆಗಳ ಡಾಂಬರೀಕರಣ ಹಾಗೂ ಕಾಮಗಾರಿಗಳ ಭೂಮಿ ಪೂಜೆ ಹಾಗೂ ಚಾಲನೆ ನೀಡಿದ್ದಾರೆ. ಸುಗಮ ಸಂಚಾರಕ್ಕಾಗಿ ಮುಖ್ಯರಸ್ತೆಗಳು, ಒಳ ಮುಖ್ಯರಸ್ತೆಗಳಲ್ಲಿ ಡಾಂಬರೀಕರಣ, ಒಳಚರಂಡಿ ವ್ಯವಸ್ಥೆ ಹಾಗೂ ಪಾದಚಾರಿ ಮಾರ್ಗಗಳ ಸುಧಾರಣೆಗೆ ಒತ್ತು ನೀಡಲಾಗುತ್ತಿದೆ. ಈ ಮೂಲಕ ಬ್ರ್ಯಾಂಡ್ ಬೆಂಗಳೂರಿನ ಪರಿಕಲ್ಪನೆಯನ್ನ ಸಾಕಾರಗೊಳಿಸಲಾಗುತ್ತಿದೆ ಎಂದು ಹೇಳಿದ್ದರು. ಈ ಬಗ್ಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ವ್ಯಂಗ್ಯವಾಡಿದ್ದಾರೆ.
ಜಗತ್ತಿನ ಬೇರೆಲ್ಲಿಯೂ ಇಂತಹ ಅಬ್ಬರದಿಂದ ನಿಯಮಿತ ಗುಂಡಿ ದುರಸ್ತಿ ಕೆಲಸ ಪ್ರಾರಂಭವಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಬೆಂಗಳೂರಿನಲ್ಲಿ ಗುಂಡಿಗಳನ್ನು ಸರಿಪಡಿಸಲು ಮತ್ತು ಅವುಗಳನ್ನು ಪದೇ ಪದೇ ರಿಲೇ ಮಾಡಲು ಖರ್ಚು ಮಾಡುವ ಸಾರ್ವಜನಿಕ ಹಣವು ಮನಸ್ಸಿಗೆ ಮುದ ನೀಡುತ್ತದೆ. ಭಾರತಕ್ಕಿಂತ ಬಹಳ ಹಿಂದುಳಿದ ದೇಶಗಳಲ್ಲಿರುವ ನಗರಗಳು ಸಹ ರಸ್ತೆಗಳನ್ನು ನಿರ್ವಹಿಸುವಲ್ಲಿ ಬೆಂಗಳೂರಿಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ ಎಂದು ತೇಜಸ್ವಿ ಸೂರ್ಯ ಟಾಂಗ್ ನೀಡಿದ್ದಾರೆ.

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಮಾಗಡಿ ರಸ್ತೆಯ ಸುಮನಹಳ್ಳಿ ಜಂಕ್ಷನ್ನಲ್ಲಿ ರಸ್ತೆ ದುರಸ್ತಿ ಕಾಮಗಾರಿಗೆ ಚಾಲನೆ ನೀಡಿದ ಡಿಕೆ ಶಿವಕುಮಾರ್ ಅವರು ಈ ಮೂಲಕ ಬ್ರ್ಯಾಂಡ್ ಬೆಂಗಳೂರಿನ ಪರಿಕಲ್ಪನೆಯನ್ನು ಸಾಕಾರಗೊಳಿಸಲಾಗುತ್ತಿದೆ ಎಂದಿದ್ದಾರೆ. ಇನ್ನು ಬಿಬಿಎಂಪಿ ಅನುದಾನದ ಅಡಿಯಲ್ಲಿ, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 10 ಕೋಟಿ ರೂ. ವೆಚ್ಚದ ಆರ್ಟೀರಿಯಲ್, ಸಬ್ ಆರ್ಟೀರಿಯಲ್ ರಸ್ತೆಗಳ ಚರಂಡಿ, ಪಾದಚಾರಿ ಮಾರ್ಗ, ಮೈಕ್ರೋಸರ್ಫೇಸಿಂಗ್ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಮಿನರ್ವ ಸರ್ಕಲ್ ಬಳಿ ಭೂಮಿಪೂಜೆ ನೆರವೇರಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಯಶವಂತಪುರ ಜಂಕ್ಷನ್, ಸೋಪ್ ಪ್ಯಾಕ್ಟರಿ ಹಾಗೂ ಸುಮ್ಮನಹಳ್ಳಿ ಜಂಕ್ಷನ್ ನಲ್ಲಿ ರಸ್ತೆಗಳ ಡಾಂಬರೀಕರಣ, ಕಾಮಗಾರಿಗಳ ಭೂಮಿ ಪೂಜೆ, ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆ ಅಡಿಯಲ್ಲಿ ಅಂದಾಜು 9 ಕೋಟಿ ರೂಪಾಯಿ ವೆಚ್ಚದಲ್ಲಿ ಗಾಂಧಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಡಿಎನ್ಆರ್ ಅಪಾರ್ಟ್ಮೆಂಟ್ ಹತ್ತಿರ ಸುಗಮ ಸಂಚಾರ ಬೆಂಗಳೂರು ಇಎಸ್ಸಿಆರ್ಒಡಬ್ಲ್ಯು ಅನುದಾನದ ಅಡಿಯಲ್ಲಿ, ಆರ್ಟೀರಿಯಲ್, ಸಬ್ ಆರ್ಟೀರಿಯಲ್ ರಸ್ತೆಗಳ ಚರಂಡಿ, ಪಾದಚಾರಿ ಮಾರ್ಗ, ಮೈಕ್ರೋಸರ್ಫೇಸಿಂಗ್ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.

ಬಿಬಿಎಂಪಿ ಅನುದಾನದ ಅಡಿಯಲ್ಲಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆರ್ಟೀರಿಯಲ್, ಸಬ್ ಆರ್ಟೀರಿಯಲ್ ರಸ್ತೆಗಳ ಚರಂಡಿ, ಪಾದಚಾರಿ ಮಾರ್ಗ, ಮೈಕ್ರೋಸರ್ಫೇಸಿಂಗ್ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಮಿಷನ್ ರಸ್ತೆಯಲ್ಲಿ ಭೂಮಿಪೂಜೆ ನಡೆದಿದೆ. ಬೆಂಗಳೂರು ನಗರದ ರಸ್ತೆ ಸಂಚಾರ ಸಮಸ್ಯೆಗಳಿಗೆ ಕಡಿವಾಣ ಹಾಕಲು ಬಿಬಿಎಂಪಿ ವ್ಯಾಪ್ತಿಯ ವಿವಿಧ ರಸ್ತೆಗಳ ಡಾಂಬರೀಕರಣ, ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಗಿದ್ದು, ಇದರ ಭಾಗವಾಗಿ ಬಸವನಗುಡಿ ವಿಧಾನಸಭಾ ಕ್ಷೇತ್ರದ ವಿದ್ಯಾಪೀಠ ಸರ್ಕಲ್ ಬಳಿ ರಸ್ತೆ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.
ʻಬ್ರ್ಯಾಂಡ್ ಬೆಂಗಳೂರು ಯೋಜನೆʼಯಡಿ ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೈಸೂರು ರಸ್ತೆಯ ಆರ್ವಿ ಇಂಜಿನಿಯರಿಂಗ್ ಕಾಲೇಜು ಹತ್ತಿರ, 75 ಕೋಟಿ ರೂಪಾಯಿ ವೆಚ್ಚದಲ್ಲಿ ಒಟ್ಟು 10 ಆರ್ಟೀರಿಯಲ್, ಸಬ್ ಆರ್ಟೀರಿಯಲ್ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ, ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಮಾಗಡಿ ರಸ್ತೆಯ ಸುಮನಹಳ್ಳಿ ಜಂಕ್ಷನ್ನಲ್ಲಿ ರಸ್ತೆ ದುರಸ್ತಿ ಕಾಮಗಾರಿಗೆ ಚಾಲನೆ, ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಯಶವಂತಪುರ ಸರ್ಕಲ್ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೂ ಡಿಸಿಎಂ ಡಿಕೆ ಶಿವಕುಮಾರ್ ಅಬ್ಬರದ ಚಾಲನೆ ನೀಡಿದ್ದಾರೆ.
ಬೆಂಗಳೂರು ನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಡಿಕೆ ಶಿವಕುಮಾರ್ ಅವರು ಸ್ವಚ್ಛ ಬೆಂಗಳೂರು, ಜಲ ಸಮೃದ್ಧ ಬೆಂಗಳೂರನ್ನು ನಿರ್ಮಿಸಲು ಕೆಲ ಪ್ರಮುಖ ನಿರ್ಣಯಗಳನ್ನು ಕೈಗೊಂಡಿದ್ದಾರೆ. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಗೆ ಬರುವ ಎಲ್ಲಾ ಹಳ್ಳಿಗಳಿಗೆ BWSSBಯಿಂದ ಕುಡಿಯುವ ನೀರು ಪೂರೈಸಲು ಈ ಸಭೆಯಲ್ಲಿ ಚಿಂತನೆ ನಡೆಸಲಾಗಿದೆ. ನಗರ ಜಿಲ್ಲೆ ವ್ಯಾಪ್ತಿಯ ಎಲ್ಲ ಕೆರೆಗಳಿಗೆ ಕಲುಷಿತ ನೀರು ಮಿಶ್ರವಾಗದಂತೆ ಕ್ರಮ ವಹಿಸಲು ಸೂಚನೆ ನೀಡಿದ್ದಾರೆ. ಕಲುಷಿತ ನೀರನ್ನು ಸಂಸ್ಕರಿಸಿ ಕೆರೆಗಳಿಗೆ ಪುನಃ ಹರಿಸುವ ಜವಾಬ್ದಾರಿ BWSSBಗೆ ವಹಿಸಲು ನಿರ್ಣಯ ಕೈಗೊಳ್ಳಲಾಗಿದೆ. ಜಿಲ್ಲೆ ವ್ಯಾಪ್ತಿಯ ಯಾವುದೇ ಹಳ್ಳಿಗೆ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಡಿಸಿ ಹಾಗೂ ಸಿಇಒ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ. ಕಟ್ಟಡ ಭಗ್ನ ಅವಶೇಷಗಳ ವಿಲೇವಾರಿ ಮಾಡುವ ಲಾರಿಗಳಿಗೆ ಜಿಪಿಎಸ್ ಅಳವಡಿಸಲು ಬಿಬಿಎಂಪಿಗೆ ಸೂಚನೆ ಕೊಡಲಾಗಿದೆ. ನಿರ್ದಿಷ್ಟ ಜಾಗದಲ್ಲೇ ತ್ಯಾಜ್ಯ ವಿಲೇವಾರಿಗೆ ಕಣ್ಗಾವಲು ಇಡಲು ಬಿಬಿಎಂಪಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಸದ ಮೇಲೆ ಸೆಸ್ಗೆ ಬಿಜೆಪಿ ವಿರೋಧ
ಕಸದ ಮೇಲೆ ಸೆಸ್ ವಿಧಿಸುವ ನಿರ್ಣಯ ಕೈಗೊಂಡಿರುವ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಕಸದ ಸೆಸ್ ನೆಪದಲ್ಲಿ ಮತ್ತೊಂದು ಲೂಟಿ! ಹಾಲು, ಕರೆಂಟು, ಪೆಟ್ರೋಲ್, ಡಿಸೇಲ್, ಆಸ್ತಿ ತೆರಿಗೆ, ನೋಂದಣಿ ಮತ್ತು ಮುದ್ರಾಂಕ ಶುಲ್ಕ ಹೀಗೆ ಎಲ್ಲದರ ಬೆಲೆ ಹೆಚ್ಚಿಸಿ ಜನಸಾಮಾನ್ಯರನ್ನ ಲೂಟಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಈಗ ಕಸದ ಮೇಲೂ ದುಬಾರಿ ಸೆಸ್ ಹಾಕುವ ಮೂಲಕ ಜನಸಾಮಾನ್ಯರ ಜೇಬಿಗೆ ಮತ್ತೊಮ್ಮೆ ಕತ್ತರಿ ಹಾಕುತ್ತಿದೆ. ಒಟ್ಟಿನಲ್ಲಿ ಈ ಲೂಟಿಕೋರ ಕಾಂಗ್ರೆಸ್ ಸರ್ಕಾರ ತೊಲಗುವವರೆಗೂ ಕನ್ನಡಿಗರಿಗೆ ನೆಮ್ಮದಿಯಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರನ್ನು ಗುಂಡಿಯೂರು, ಗಾರ್ಬೇಜ್ ಸಿಟಿಯನ್ನಾಗಿ ಮಾರ್ಪಡಿಸಿ, ಜಾಗತಿಕ ಮಟ್ಟದಲ್ಲಿ ಐಟಿಸಿಟಿ ಗೌರವ ಹಾಳು ಮಾಡಿದ ಸಿದ್ದರಾಮಯ್ಯನವರೇ ಸ್ವಲ್ಪ ಕಣ್ಣು ತೆರೆಯಿರಿ! ಪಾರ್ಟ್ ಟೈಮ್ ಡಿಸಿಎಂ ಡಿಕೆ ಶಿವಕುಮಾರ್ ಅವರೇ ನಿಮ್ಮ ಕನಸಿನ ಬ್ರ್ಯಾಂಡ್ ಬೆಂಗಳೂರು, ಅಲ್ಲಲ್ಲ! ಬ್ಯಾಡ್ ಬೆಂಗಳೂರು ದರ್ಶನವಾಗುತ್ತದೆ. ಕಳಪೆ ನಿರ್ವಹಣೆ ಕಣ್ಣಿಗೆ ರಾಚುತ್ತಿದೆ. ಮಹಾನಗರ ಮುಳುಗುತ್ತಿದೆ. ಕಾಂಗ್ರೆಸ್ ಸರ್ಕಾರದ ಬಂಡವಾಳ ಬಯಲಾಗುತ್ತಿದೆ. ಈಗಲಾದರೂ ಎಚ್ಚೆತ್ತುಕೊಳ್ಳಿ ಎಂದು ಹೇಳಿದ್ದಾರೆ












Click it and Unblock the Notifications