ಮೈಸೂರು ಅತ್ಯಾಚಾರ ಪ್ರಕರಣ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ
ಬೆಂಗಳೂರು, ಆಗಸ್ಟ್ 26: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಯುವತಿ ಮತ್ತು ಯುವಕ ಆ ಸಮಯದಲ್ಲಿ ಅಲ್ಲಗೆ ಹೋಗಿದ್ದೇ ತಪ್ಪು, ಯುವತಿ ಸಂಜೆ 7.30 ಕ್ಕೆ ಅಲ್ಲಿಗೆ ಹೋಗಬಾರದಿತ್ತು ಎಂದು ಬೇಜವಾಬ್ದಾರಿಯುತವಾದ ಹೇಳಿಕೆಯನ್ನು ನೀಡಿದ್ದಾರೆ.
ಮಹಾತ್ಮಾ ಗಾಂಧೀಜಿಯವರು ಮಧ್ಯರಾತ್ರಿಯಲ್ಲಿ ಮಹಿಳೆ ಒಂಟಿಯಾಗಿ ಓಡಾಡುವಂತಾದಾಗ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಂತಾಗುತ್ತದೆ ಎಂದು ತಿಳಿಸಿದ್ದರು.
ಆದರೆ ಗೃಹ ಸಚಿವರು ಸಂಜೆ ನಂತರ ಮಹಿಳೆಯರು ಮನೆಯಿಂದ ಹೊರಗೆ ಬಂದಿದ್ದೇ ತಪ್ಪು ಎಂಬಂತಹ ಹೇಳಿಕೆ ನೀಡಿದ್ದು, ಗೃಹ ಸಚಿವರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.
ಮೈಸೂರು ಘಟನೆಯಂತಹ ವಿಚಾರಗಳಲ್ಲಿ ಕಾಂಗ್ರೆಸ್ ರಾಜಕೀಯ ಮಾಡಬಾರದು. ಇದು ರಾಜಕೀಯ ಮಾಡುವ ಘಟನೆಯೂ ಅಲ್ಲ. ಕಾಂಗ್ರೆಸ್ ಅವಧಿಯಲ್ಲಿ ಎಲ್ಲವೂ ಸುಖವಾಗಿತ್ತಾ? ಇಂತಹ ಘಟನೆಗಳು ಆಗಿರಲಿಲ್ವಾ? ಅವರ ಅವಧಿಯಲ್ಲೂ ನಡೆದಿತ್ತು.
ಬಿಜೆಪಿ ಸರ್ಕಾರ ಇದೆ ಎಂಬ ಕಾರಣಕ್ಕೆ ಆರೋಪಮಾಡುತ್ತಿದ್ದಾರೆ. ರಾಜಕೀಯ ಲಾಭ ಪಡೆಯುವುದು ಸರಿಯಲ್ಲ ಎಂದುಕಾಂಗ್ರೆಸ್ ವಿರುದ್ಧ ಆರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಪ್ರಕರಣದ ಸಂಬಂಧ ಈಗಾಗಲೇ ಎಫ್ಐಆರ್ ದಾಖಲಾಗಿದೆ. ಪೊಲೀಸರು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಈ ಪ್ರಕರಣವನ್ನು ತುಂಬಾ ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.
ಈಗಾಗಲೇ ವಿದ್ಯಾರ್ಥಿನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಬೇಧಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಬೆಂಗಳೂರಿನಿಂದ ಹಿರಿಯ ಅಧಿಕಾರಿ ಪ್ರತಾಪ್ ರೆಡ್ಡಿಯವರನ್ನು ಮೈಸೂರಿಗೆ ಕಳುಹಿಸಲಾಗಿದೆ. ಬೇರೆ ಬೇರೆ ತಂಡಗಳನ್ನು ರಚಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಮೈಸೂರು ಪ್ರಮುಖ ಪ್ರವಾಸಿ ತಾಣ, ಸಾವಿರಾರು ಜನ ಪ್ರವಾಸಿಗರು ಅಲ್ಲಿಗೆ ಬರುತ್ತಾರೆ, ಈ ಘಟನೆ ದುರದೃಷ್ಟಕರ, ತಲೆತಗ್ಗಿಸುವಂಥದ್ದು, ಪೊಲೀಸರು ತಕ್ಷಣವೇ ಕಾರ್ಯೋನ್ಮುಖವಾಗಿದ್ದಾರೆ. ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಸೇರಿಸುವುದರಿಂದ ಎಲ್ಲವನ್ನೂ ನಿಭಾಯಿಸಿದ್ದಾರೆ.
ಘಟನೆ ನಡೆದು 24 ಗಂಟೆಯೊಳಗೆ ಎಫ್ಐಆರ್ ದಾಖಲಾಗಿದೆ. ವಿದ್ಯಾರ್ಥಿನಿ ಮೂಲತಃ ಮಹಾರಾಷ್ಟ್ರದವರು ಎನ್ನುವ ಮಾಹಿತಿ ಲಭ್ಯವಾಗಿದೆ ಎಂದರು.ಅತ್ಯಾಚಾರ ಆಗಿರುವುದು ಮೈಸೂರಿನಲ್ಲಿ. ಆದರೆ ಈ ಕಾಂಗ್ರೆಸ್ಸಿನವರು ನನ್ನನ್ನು ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡುವ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ವಿವಾದಾಕ್ಕೆ ಸಿಲುಕಿದ್ದಾರೆ.
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ನವರು ಈ ಘಟನೆಯಿಂದ ರಾಜಕೀಯ ಲಾಭ ಗಳಿಸಲು ಯತ್ನಿಸುತ್ತಿದ್ದಾರೆ.
Recommended Video
ಅತ್ಯಾಚಾರ ಆಗಿದ್ದು ಅಲ್ಲಿ, ಆದರೆ ಕಾಂಗ್ರೆಸ್ನವರು ನನ್ನನ್ನು ರೇಪ್ ಮಾಡ್ತಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ಅಲ್ಲಿ ಆಗಿರುವುದು ಅಮಾನುಷವಾದ ಕೆಲಸ. ಅದನ್ನು ಮಾನವೀಯ ದೃಷ್ಟಿಯಿಂದ ನೋಡಿ, ಡಿಟೆಕ್ಟ್ ಮಾಡಿ ಅನ್ನಬೇಕು. ಕಾಂಗ್ರೆಸ್ನವರು ಹಾಗೆ ಮಾಡದೇ ವಿನಾಕಾರಣ ನನ್ನ ಮೇಲೆ ಹರಿಹಾಯುತ್ತಿದ್ದಾರೆ. ಈ ಪ್ರಕರಣದಲ್ಲೂ ರಾಜಕೀಯ ಮಾಡಲು ಹೋಗಬಾರದು ಎಂದು ಗೃಹ ಸಚಿವರು ಹೇಳಿದ್ದಾರೆ.