ಹಿಂದೂ ಕಾರ್ಯಕರ್ತ ಪ್ರವೀಣ್ ಹತ್ಯೆಯ ಹಿಂದೆ ಪಿಎಫ್ಐ ಕೈವಾಡ: ನಳಿನ್ ಕುಮಾರ್ ಕಟೀಲ್ ಆರೋಪ
ಬೆಂಗಳೂರು, ಜುಲೈ 28: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಪಿಎಫ್ಐ ಕೈವಾಡ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ. ಹತ್ಯೆಯ ಆರೋಪಿಗಳನ್ನು ಗುರುತಿಸಿ ಬಂಧಿಸುವ ಕಾರ್ಯವನ್ನು ಪೊಲೀಸರು ಮಾಡುತ್ತಿದ್ದಾರೆ ಎಂದು ಹೇಳಿದರು.
ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಹತ್ಯೆಯ ಹಿಂದೆ ಪಿಎಫ್ಐ ಕೈವಾಡ ಕಂಡುಬರುತ್ತಿದೆ ಎಂದು ಆರೋಪಿಸಿದರು. ಪಿಎಫ್ಐ ನಿಯಂತ್ರಿಸುವ ಇಲ್ಲವೇ ಸಂಪೂರ್ಣವಾಗಿ ನಿಷೇಧ ಮಾಡುವ ವಿಚಾರ ಕೇಂದ್ರ ಸರ್ಕಾರಕ್ಕಿದೆ. ಅದಕ್ಕೆ ಅಗತ್ಯ ಪ್ರಕ್ರಿಯೆಗಳನ್ನು ಕೇಂದ್ರ ಕೈಗೊಳ್ಳಲಿದೆ. ಪಿಎಫ್ಐ ನಿಷೇಧಿಸುವಂತೆ ನಾನೂ ಕೂಡ ಒತ್ತಾಯಿಸುತ್ತೇನೆ" ಎಂದು ಅವರು ಹೇಳಿದರು.
ಯುವಮೋರ್ಚಾದ ಜವಾಬ್ದಾರಿಯುತ, ಸರಳ ಸಜ್ಜನಿಕೆ ಪ್ರವೀಣ್ ನೆಟ್ಟಾರು ಹತ್ಯೆಯಾಗಿದೆ. ಪ್ರವೀಣ್ ಹತ್ಯೆಯ ಹಿಂದಿರುವ ಶಕ್ತಿಗಳನ್ನು ಮಟ್ಟ ಹಾಕುವ ಕೆಲಸ ಮಾಡಬೇಕಿದೆ. ಆ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಹತ್ಯೆಯಾಗಿರುವ ಪ್ರವೀಣ್ ನೆಟ್ಟಾರು ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ನಾನು ಗುರುವಾರ ಭೇಟಿ ನೀಡಲಿದ್ದೇವೆ. ಬಿಜೆಪಿ ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳುವುದಲ್ಲದೆ, ಅವರ ಕುಟುಂಬಕ್ಕೆ ಬೇಕಾದ ಅಗತ್ಯಗಳನ್ನು ಪೂರೈಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದೆ. ಸರ್ಕಾರ ಪ್ರವೀಣ್ ಕುಟುಂಬಸ್ಥರ ಬೇಡಿಕೆಗಳನ್ನು ಈಡೇರಿಸಲಿದೆ ಎಂದು ತಿಳಿಸಿದರು.
ಕಾರ್ಯಕರ್ತರ ಆಕ್ರೋಶದ ಬಗ್ಗೆ ಪ್ರತಿಕ್ರಿಯೆ
ಬುಧವಾರ ನಳಿನ್ ಕುಮಾರ್ ಕಟೀಲ್ ಅವರ ಕಾರಿಗೆ ದಿಗ್ಭಂದನ ವಿಧಿಸಿ ಘೇರಾವ್ ಹಾಕಿದ್ದ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರವೀಣ್ ಹತ್ಯೆಯ ಕೋಪವನ್ನು ಹೊರಹಾಕುವ ಸಂದರ್ಭದಲ್ಲಿ ಕಾರ್ಯಕರ್ತರಿಂದ ಆಕ್ರೋಶ ವ್ಯಕ್ತವಾಗಿದೆ ಎಂದು ಸಮರ್ಥನೆ ಮಾಡಿಕೊಂಡರು.
ಇದು ದೇಶದೆಲ್ಲೆಡೆ ಇರುವ ಜಿಹಾದಿ ಮಾನಸಿಕತೆ ವಿರುದ್ಧ ನಡೆಯುತ್ತಿರುವ ಹೋರಾಟ. ಜಿಹಾದಿ ಹೆಸರಿನಲ್ಲಿ ಕೋಮುಗಲಭೆ ಹಾಗೂ ಅಶಾಂತಿ ನಿರ್ಮಿಸಲು ಯತ್ನಿಸಲಾಗುತ್ತಿದೆ. ಇದರ ವಿರುದ್ಧ ದೇಶವ್ಯಾಪಿ ಹೋರಾಟ ನಡೆಯಬೇಕಿದೆ ಎಂದು ಪ್ರಶ್ನೆಗಳಿಗೆ ಉತ್ತರ ನೀಡುವ ಸಂದರ್ಭದಲ್ಲಿ ಹೇಳಿಕೆ ನೀಡಿದರು.

ರಾಜೀನಾಮೆ ಕೊಟ್ಟವರ ಜೊತೆ ಮಾತನಾಡುತ್ತೇವೆ
ಪ್ರವೀಣ್ ಹತ್ಯೆ ಖಂಡಿಸಿ ಪಕ್ಷಕ್ಕೆ ಹಲವರು ರಾಜೀನಾಮೆ ನೀಡುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ನಳಿನ್ ಕುಮಾರ್ ಕಟೀಲ್, ರಾಜೀನಾಮೆ ಕೊಟ್ಟವರನ್ನು ಕರೆದು ಮಾತನಾಡಿ ಸಮಸ್ಯೆ ಬಗೆಹರಿಸಲಾಗುವುದು ಎಂದರು. ರಾಜ್ಯದಲ್ಲಿ ಕಠಿಣ ಕಾನೂನು ಜಾರಿ ಮಾಡುವ ಅವಶ್ಯಕತೆ ಇದೆ. ಕೇಂದ್ರ ಸರ್ಕಾರ ನರೇಂದ್ರ ಮೋದಿ ನೇತೃತ್ವದಲ್ಲಿ ಭಯೋತ್ಪಾದನೆ ನಿಯಂತ್ರಣಕ್ಕೆ ಕೈಗೊಂಡ ತೀರ್ಮಾನದ ಮಾದರಿಯಲ್ಲೇ ಇಲ್ಲಿ ನಿರ್ಧಾರಗಳನ್ನು ಕೈಗೊಳ್ಳಬೇಕಿದೆ. ನಮ್ಮ ರಾಜ್ಯ ಸರ್ಕಾರ ಅದೇ ಮಾದರಿಯ ನಿರ್ಣಯಗಳನ್ನು ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.
ಪ್ರವೀಣ್ ಹತ್ಯೆಯಾಗುತ್ತಿದ್ದಂತೆ ಬಿಜೆಪಿ ಪಕ್ಷ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದರು. ಪಕ್ಷದ ಹಲವು ಪದಾಧಿಕಾರಿಗಳು, ಕಾರ್ಯಕರ್ತರು, ಮುಖಂಡರು ರಾಜೀನಾಮೆ ನೀಡಿದ್ದರು.












Click it and Unblock the Notifications