ನಳಿನ್ ಕುಮಾರ್ ಕಟೀಲ್ ಕಾಮಿಡಿ ಪಾತ್ರ: ಸಿದ್ದರಾಮಯ್ಯ ಲೇವಡಿ
ಬೆಂಗಳೂರು, ಸೆಪ್ಟೆಂಬರ್ 9: ಡಿಕೆ ಶಿವಕುಮಾರ್ ಅವರ ಬಂಧನದ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈವಾಡವಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ನಳಿನ್ ಕುಮಾರ್ ಕಟೀಲ್ ಒಬ್ಬ ಕಾಮಿಡಿ ಪಾತ್ರ. ಅವರನ್ನು ಅವರ ಪಕ್ಷದವರೇ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಕಟೀಲ್ ಅವರು ಆರೋಪಿಸಿದಂತೆ ಕೇಂದ್ರದ ತನಿಖಾ ಸಂಸ್ಥೆಗಳ ಮೇಲೆ ತಮಗೆ ಅಧಿಕಾರವಿದ್ದದ್ದೇ ಆದರೆ ಪ್ರಧಾನಿ ಮೋದಿ ಅವರಿಗೇನು ಕೆಲಸ? ಅವರು ರಾಜೀನಾಮೆ ನೀಡಿ ಹೋಗಲು ಹೇಳಿ ಎಂದು ತೀಕ್ಷ್ಣ ಉತ್ತರ ನೀಡಿದ್ದಾರೆ.
ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿರುವ ಅವರು, ತಮಗೆ ಅಧಿಕಾರವಿದ್ದಿದ್ದರೆ ಇವಿಎಂ ರದ್ದುಪಡಿಸಿ ಬ್ಯಾಲೆಟ್ ಪೇಪರ್ ಚುನಾವಣೆಯನ್ನು ಪುನಃ ಆರಂಭಿಸುತ್ತಿದ್ದೆ ಎಂದಿದ್ದಾರೆ. ಇವಿಎಂ ಬಗ್ಗೆ ಪುನಃ ಅನುಮಾನ ವ್ಯಕ್ತಪಡಿಸಿರುವ ಅವರು ಮುಂದಿನ ಚುನಾವಣೆಯಲ್ಲಿ ಇವಿಎಂ ಬಳಕೆ ನಿಲ್ಲಿಸಬೇಕು. ಈ ಸಂಬಂಧ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಮುಂಚೂಣಿಯಲ್ಲಿರಲಿದೆ ಎಂಬುದನ್ನು ತಿಳಿಸಿದ್ದಾರೆ.
ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆದ ದಿನದಿಂದ ವರ್ಗಾವಣೆ ಮತ್ತು ದ್ವೇಷ ರಾಜಕಾರಣ ಬಿಟ್ಟು ಬೇರೇನು ಮಾಡುತ್ತಿಲ್ಲ. ಪ್ರವಾಹದಿಂದ ಎಲ್ಲವನ್ನೂ ಕಳೆದುಕೊಂಡವರ ಬದುಕು ಬೀದಿಗೆ ಬಂದಿದೆ, ಈಶ್ವರಪ್ಪನವರು ಈ ನಿರಾಶ್ರಿತರಿಗೆ ಹತ್ತು ಸಾವಿರ ರೂಪಾಯಿ ಕೊಟ್ಟಿರುವುದೇ ಹೆಚ್ಚು ಎನ್ನುತ್ತಾರೆ. ಇಂಥವರಿಗೆ ಜನರ ಬಗ್ಗೆ ಕಾಳಜಿ, ಕರುಣೆ ಏನಾದರೂ ಇದೆಯೇ? ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಹುಳಿ ಹಿಂಡುವ ಕೆಲಸ
ಒಬ್ಬ ಸಂಸದರಿಗೆ, ಅದರಲ್ಲೂ ಒಂದು ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರಿಗೆ ಇ.ಡಿ, ಐ.ಟಿ ಇಲಾಖೆ ಯಾರ ಅಧೀನದಲ್ಲಿ ಬರುತ್ತದೆ ಎಂಬ ಕನಿಷ್ಟ ಜ್ಞಾನವಾದರೂ ಬೇಡವೇ? ಇದುವರೆಗೂ ಬಿಜೆಪಿ ಬೇರೆ ಬೇರೆ ಕೋಮುಗಳ ನಡುವೆ ಬೆಂಕಿಹಚ್ಚಿ ತನ್ನ ಸ್ವಾರ್ಥ ಸಾಧಿಸಿಕೊಳ್ಳುತ್ತಿತ್ತು, ಈಗ ತನ್ನ ಎದುರಾಳಿ ನಾಯಕರ ನಡುವೆ ಹುಳಿ ಹಿಂಡುವ ಹೀನ ಕಾರ್ಯಕ್ಕೆ ಇಳಿದಿದೆ ಎಂದು ಕಿಡಿಕಾರಿದ್ದಾರೆ.

ಕಟೀಲ್ ಕಾಮಿಡಿ ಪಾತ್ರ
ರಾಜ್ಯದ ಬಿಜೆಪಿ ನಾಟಕ ಮಂಡಳಿಗೆ ಕಾಮಿಡಿ ಪಾತ್ರದ ಅಗತ್ಯ ಇತ್ತು, ಅದಕ್ಕಾಗಿ ನಳಿನ್ ಕುಮಾರ್ ಕಟೀಲ್ ಅವರನ್ನು ಪಕ್ಷಕ್ಕೆ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಅವರನ್ನು ಅವರ ಪಕ್ಷದವರೂ ಸೇರಿದಂತೆ ಯಾರೂ ಸೀರಿಯಸ್ಸಾಗಿ ತಗೊಳ್ತಿಲ್ಲ, ಅದಕ್ಕಾಗಿ ಬಾಯಿಗೆ ಬಂದ ಹಾಗೆ ಮಾತಾಡ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ

ಮೋದಿಗೆ ರಾಜೀನಾಮೆ ಕೊಡಲು ಹೇಳಿ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೇ, ನೀವು ಆರೋಪಿಸಿದಂತೆ CBI,IT,ED ಮೇಲೆ ನನ್ನ ನಿಯಂತ್ರಣ ಇರುವುದು ನಿಜವೇ ಆಗಿದ್ದರೆ 56 ಇಂಚು ಎದೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೇನು ಕೆಲಸ? ರಾಜೀನಾಮೆ ಕೊಟ್ಟು ಮನೆಗೆ ಹೋಗಲು ಹೇಳಿ ಎಂದು ಟೀಕಿಸಿದ್ದಾರೆ.

ಇವಿಎಂ ರದ್ದುಗೊಳಿಸುತ್ತಿದ್ದೆ
ಇವಿಎಂ ಬಗ್ಗೆ ಸಾಕಷ್ಟು ಅನುಮಾನಗಳಿವೆ. ನನಗೆ ಅಧಿಕಾರವಿದ್ದರೆ ಇವಿಎಂ ರದ್ದುಪಡಿಸಿ, ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಯುವಂತೆ ಮಾಡುತ್ತಿದ್ದೆ. ಮುಂಬರುವ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸಬೇಕು. ಎಲ್ಲ ಪಕ್ಷಗಳು ಇದಕ್ಕೆ ಸಹಕಾರ ನೀಡಿದರೆ, ಕಾಂಗ್ರೆಸ್ ಪಕ್ಷ ಇದರ ನೇತೃತ್ವ ವಹಿಸಿಕೊಳ್ಳಲು ಸಿದ್ಧವಿದೆ ಎಂದಿದ್ದಾರೆ.

ಆರ್ಥಿಕತೆ ಅಧೋಗತಿಗೆ
ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು ಜಿ.ಡಿ.ಪಿ ಕುಸಿಯುತ್ತಲೇ ಇದೆ, ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ಕೇವಲ ಭಾಷಣದಲ್ಲಿ ಕಾಲ ಕಳೆಯುತ್ತಿರುವ ಪ್ರಧಾನಿಗಳು ಆಡಳಿತವನ್ನು ಮರೆತೇ ಬಿಟ್ಟಿದ್ದಾರೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಆರ್ಥಿಕ ಶಿಸ್ತು ಕಾಪಾಡಿದ್ದರು. ಮೋದಿಯವರ ಆಡಳಿತದಲ್ಲಿ ದೇಶದ ಆರ್ಥಿಕತೆ ಅಧೋಗತಿ ತಲುಪಿದೆ ಎಂದು ಆರೋಪಿಸಿದ್ದಾರೆ.

ಯಡಿಯೂರಪ್ಪ ತನಿಖಾ ಪ್ರಹಸನ
ನಮ್ಮ ಸರ್ಕಾರದ ಜನಪರ ಯೋಜನೆಗಳನ್ನು ಸ್ಥಗಿತಗೊಳಿಸಲು ಯಡಿಯೂರಪ್ಪ ಅವರು ಹೊಸ ತಂತ್ರಗಳ ಹುಡುಕಾಟದಲ್ಲಿದ್ದಾರೆ. ತನಿಖಾ ಪ್ರಹಸನ ಇದರಲ್ಲೊಂದು. ತನಿಖೆಯನ್ನು ಬೇಡ ಎನ್ನುವುದಿಲ್ಲ, ತನಿಖೆಯ ನೆಪದಲ್ಲಿ ಯೋಜನೆಗಳನ್ನು ನಿಲ್ಲಿಸಿದರೆ ಬೀದಿಗಿಳಿಯುವ ಜನರ ಜತೆ ನಾನೂ ಇರುತ್ತೇನೆ ಎನ್ನುವುದು ತಿಳಿದಿರಲಿ ಎಂದು ಎಚ್ಚರಿಕೆ ನೀಡಿದ್ದಾರೆ.












Click it and Unblock the Notifications