Namma Metro: ಬಿಡದಿಗೆ ಮೆಟ್ರೋ ರೈಲು, ಮೊದಲ ಹೆಜ್ಜೆ ಇಟ್ಟ ಬಿಎಂಆರ್ಸಿಎಲ್
ಬೆಂಗಳೂರು, ಜುಲೈ 21: ರಾಮನಗರಕ್ಕೆ ನಮ್ಮ ಮೆಟ್ರೋ ರೈಲು ಸಂಚಾರ ನಡೆಸಲಿದೆ ಎಂಬ ಮಾತು ಹಲವು ದಿನಗಳಿಂದ ಕೇಳಿ ಬರುತ್ತಿದೆ. ಬಿಡದಿಗೆ ಮೆಟ್ರೋ ರೈಲು ಸಂಪರ್ಕ ಕಲ್ಪಿಸುವ ಕುರಿತು ಬಿಎಂಆರ್ಸಿಎಲ್ ಮೊದಲ ಹೆಜ್ಜೆ ಇಟ್ಟಿದೆ. ಇದಕ್ಕಾಗಿ ವರದಿ ತಯಾರು ಮಾಡಲು ಟೆಂಡರ್ ಸಹ ಕರೆದಿದೆ.
ಬಿಎಂಆರ್ಸಿಎಲ್ ಜುಲೈ 9ರಂದು 1.59 ಕೋಟಿ ರೂ.ಗಳ ಟೆಂಡರ್ ಕರೆದಿದೆ. ಒಟ್ಟು ಮೂರು ಮಾರ್ಗದಲ್ಲಿ ನಮ್ಮ ಮೆಟ್ರೋ ಯೋಜನೆಯನ್ನು ವಿಸ್ತರಣೆ ಮಾಡಲು ಕಾರ್ಯಸಾಧ್ಯತೆಯ ಅಧ್ಯಯನ ವರದಿಯನ್ನು ತಯಾರು ಮಾಡಲು ಹೈದರಾಬಾದ್ ಮೂಲದ ಕಂಪನಿಗೆ ಟೆಂಡರ್ ನೀಡಿದೆ.

ಈ ವರ್ಷದ ಫೆಬ್ರವರಿಯಲ್ಲಿ ಬಿಎಂಆರ್ಸಿಎಲ್ 50 ಕಿ. ಮೀ. ಮಾರ್ಗದಲ್ಲಿ ನಮ್ಮ ಮೆಟ್ರೋ ಯೋಜನೆ ವಿಸ್ತರಣೆ ಮತ್ತು 68 ಕಿ. ಮೀ. ನೂತನ ಮಾರ್ಗ ನಿರ್ಮಾಣದ ಕುರಿತು ಕಾರ್ಯಸಾಧ್ಯತೆಯ ಅಧ್ಯಯನ ವರದಿಯನ್ನು ತಯಾರು ಮಾಡಲು ಟೆಂಡರ್ ಆಹ್ವಾನಿಸಿತ್ತು. ಈಗ ಟೆಂಡರ್ ಅಂತಿಮಗೊಳಿಸಲಾಗಿದೆ.
ಬಿಡದಿಗೆ ನಮ್ಮ ಮೆಟ್ರೋ ರೈಲು?; ಬಿಎಂಆರ್ಸಿಎಲ್ ವರದಿ ಪ್ರಕಾರ ವಿಸ್ತರಿತ ಮಾರ್ಗದಲ್ಲಿ ಚಲ್ಲಘಟ್ಟ-ಬಿಡದಿ (15 ಕಿ. ಮೀ.), ಸಿಲ್ಕ್ ಇನ್ಸಿಟಿಟ್ಯೂಟ್-ಹಾರೋಹಳ್ಳಿ (24 ಕಿ. ಮೀ.), ಬೊಮ್ಮಸಂದ್ರ-ಅತ್ತಿಬೆಲೆ (11 ಕಿ. ಮೀ) ಮಾರ್ಗವಿದೆ. ಕಾಳೇನ ಅಗ್ರಹಾರ-ಕಾಡುಗೋಡಿ ಟ್ರೀ ಪಾರ್ಕ್ ವಯಾ ಜಿಗಣಿ, ಅನೇಕಲ್, ಅತ್ತಿಬೆಲೆ, ಸರ್ಜಾಪುರ ಮತ್ತು ವರ್ತೂರು (52.41 ಕಿ. ಮೀ.) ಹೊಸ ಮಾರ್ಗ ಸೇರಿದೆ.
ಜೂನ್ 29ರಂದು ಹೈದರಾಬಾದ್ ಮೂಲದ ಕಂಪನಿ ತುಮಕೂರಿಗೆ ನಮ್ಮ ಮೆಟ್ರೋ ರೈಲು ಯೋಜನೆ ವಿಸ್ತರಣೆ ಮಾಡುವ ಕುರಿತು 52.41 ಕಿ. ಮೀ. ಕಾರ್ಯಸಾಧ್ಯತೆಯ ಅಧ್ಯಯನ ವರದಿಯನ್ನು ತಯಾರು ಮಾಡಲು ಪ್ರತ್ಯೇಕ ಟೆಂಡರ್ ಪಡೆದಿತ್ತು.
ಯಾವುದೇ ಯೋಜನೆಯ ಮೇಲೆ ಹೂಡಿಕೆ ಮಾಡುವ ಮೊದಲು ಕಾರ್ಯಸಾಧ್ಯತೆಯ ಅಧ್ಯಯನ ವರದಿಯನ್ನು ತಯಾರು ಮಾಡಲಾಗುತ್ತದೆ. ಯೋಜನೆಯ ಪ್ರಾಥಮಿಕ ಅಧ್ಯಯನ, ತಾಂತ್ರಿಕ, ಸಾಮಾಜಿಕ, ಆರ್ಥಿಕ ಮುಂತಾದ ಅಂಶಗಳು ಈ ವರದಿಯಲ್ಲಿ ಸೇರಿರುತ್ತವೆ. ಈ ವರದಿ ಅಂತಿಮಗೊಂಡರೆ ಯೋಜನೆಯ ಡಿಪಿಆರ್ ತಯಾರು ಮಾಡಲಾಗುತ್ತದೆ.
ಕರ್ನಾಟಕ ಸರ್ಕಾರ ಕಾರ್ಯಸಾಧ್ಯತೆಯ ಅಧ್ಯಯನ ವರದಿಯ ಅನ್ವಯ ಬಿಡದಿಗೆ ನಮ್ಮ ಮೆಟ್ರೋ ಯೋಜನೆ ವಿಸ್ತರಣೆ ಮಾಡಲು ಒಪ್ಪಿಗೆ ನೀಡಲಿದೆ. ಈ ವರದಿಗೆ ಒಪ್ಪಿಗೆ ಸಿಕ್ಕಿದರೆ ಬಿಎಂಆರ್ಸಿಎಲ್ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರು ಮಾಡಲು ಪ್ರತ್ಯೇಕ ಟೆಂಡರ್ ಕರೆಯಲಿದೆ.
2023ರ ನವೆಂಬರ್ನಲ್ಲಿ ಬಿಡದಿ ಟೊಯೋಟಾ ಘಟಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಪಾಲ್ಗೊಂಡಿದ್ದರು. ಆಗ ಅವರು ಬಿಡದಿ ತನಕ ನಮ್ಮ ಮೆಟ್ರೋ ರೈಲು ಯೋಜನೆ ವಿಸ್ತರಣೆ ಮಾಡುವ ಕುರಿತು ಮಾತನಾಡಿದ್ದರು.
ಬೆಂಗಳೂರು ನಗರದ ಹೊರವಲಯಕ್ಕೂ ಕೈಗಾರಿಕೆ, ಹೂಡಿಕೆಗಳನ್ನು ಆಕರ್ಷಿಸಲು ಸರ್ಕಾರ ಪ್ರಯತ್ನ ನಡೆಸುತ್ತಿದೆ. ಬಿಡದಿಯನ್ನು ಕೈಗಾರಿಕಾ ಹಬ್ ಆಗಿ ಪರಿವರ್ತನೆ ಮಾಡಿ ಬೆಂಗಳೂರು ನಗರದ ಮೇಲಿರುವ ಒತ್ತಡ ಕಡಿಮೆ ಮಾಡಲು ಮುಂದಾಗಿದೆ. ಇದೇ ಮಾದರಿಯಲ್ಲಿ ಬಿಎಂಆರ್ಸಿಎಲ್ ಸಹ ಹೊರ ವಲಯಕ್ಕೆ ಮೆಟ್ರೋ ಸಂಪರ್ಕ ವಿಸ್ತರಣೆ ಮಾಡುವ ಚಿಂತನೆ ನಡೆಸುತ್ತಿದೆ.
ನಮ್ಮ ಮೆಟ್ರೋ ಯೋಜನೆ ವಿಸ್ತರಣೆ ಮಾಡಲು ಬಿಎಂಆರ್ಸಿಎಲ್ ಈಗಾಗಲೇ ಎರಡು ಪ್ಯಾಕೇಜ್ಗಳನ್ನು ಘೋಷಣೆ ಮಾಡಿದೆ. ಮೊದಲ ಹಂತದಲ್ಲಿ 50 ಕಿ. ಮೀ. ಉದ್ದದ ಮೂರು ಕಾರಿಡಾರ್, 2ನೇ ಹಂತದಲ್ಲಿ ಒಟ್ಟು 60 ಕಿ. ಮೀ. ಪ್ಯಾಕೇಜ್ ನಿರ್ಮಾಣ ಸೇರಿದೆ.
ಬೆಂಗಳೂರು ನಗರದಿಂದ ಪ್ರತಿನಿತ್ಯ ಸಾವಿರಾರು ಜನರು ಬಿಡದಿಗೆ ಪ್ರಯಾಣಿಸುತ್ತಾರೆ. ಈಗಾಗಲೇ ಸರ್ಕಾರ ಬಿಡದಿ ಯೋಜನಾ ಪ್ರಾಧಿಕಾರವನ್ನು ಬದಲಾವಣೆ ಮಾಡಿ, ಬೃಹತ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಎಂದು ಮರುನಾಮಕರಣ ಮಾಡಿದೆ. ಇದರ ಜೊತೆಗೆ ಬಿಡದಿಯ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸುತ್ತಿದೆ.
ಬಿಡದಿಯಲ್ಲಿ ಬೃಹತ್ ಕೈಗಾರಿಕಾ ಪ್ರದೇಶವಿದೆ. ಸುಮಾರು 1 ಲಕ್ಷಕ್ಕೂ ಅಧಿಕ ಜನರು ಇಲ್ಲಿ ಕೆಲಸ ಮಾಡುತ್ತಿದ್ದು, ಬೆಂಗಳೂರಿನಿಂದ ಪ್ರತಿದಿನ ಸಂಚಾರ ನಡೆಸುವ ಜನರ ಅನುಕೂಲಕ್ಕಾಗಿ ಮೆಟ್ರೋ ಮಾರ್ಗವನ್ನು ವಿಸ್ತರಿಸುವಂತೆ ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರವನ್ನು ಒತ್ತಾಯಿಸಿದ್ದರು.
ನಮ್ಮ ಮೆಟ್ರೋ ಸಂಪರ್ಕ ಬಿಡದಿಗೆ ಅಗತ್ಯವಿದೆಯೇ? ಅಥವಾ ಇಲ್ಲವೇ? ಎಂಬುದರ ಕುರಿತು ಸಮೀಕ್ಷೆಯನ್ನು ನಡೆಸಲಾಗುತ್ತದೆ. ನಂತರ ರಾಜ್ಯ ಸರ್ಕಾರಕ್ಕೆ ಬಿಎಂಆರ್ಸಿಎಲ್ ಪ್ರಸ್ತಾವನೆ ಕಳುಹಿಸಲಿದೆ. ಸರ್ಕಾರ ಬಳಿಕ ತನ್ನ ತೀರ್ಮಾನವನ್ನು ಕೈಗೊಳ್ಳಲಿದೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು vs ದೆಹಲಿ ಮೆಟ್ರೋ: ಲಗೇಜ್ ಶುಲ್ಕದ ವ್ಯತ್ಯಾಸಗಳ ಚರ್ಚೆ, ನೆಟ್ಟಿಗರ ಮಿಶ್ರ ಪ್ರತಿಕ್ರಿಯೆ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications