Namma metro: ಮೆಟ್ರೋ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಸಿದ್ಧತೆ-ವೆಚ್ಚದ ಮಾಹಿತಿ, ವಿವರ
ಬೆಂಗಳೂರು, ಫೆಬ್ರವರಿ, 19: ಸಿಎಂ ಸಿದ್ದರಾಮಯ್ಯನವರು ಈ ಬಾರಿ ಬೆಂಗಳೂರಿಗೆ ಭರ್ಜರಿ ಬಜೆಟ್ ಘೋಷಣೆ ಮಾಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇನ್ನು "ಬೆಂಗಳೂರಿಗೆ ಹೊಸ ರೂಪ ನೀಡುವ ನಿಟ್ಟಿನಲ್ಲಿ ಬಜೆಟ್ನಲ್ಲಿ ಪ್ರಮುಖ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಇದಕ್ಕೆ ಪೂರಕವಾಗಿ ಸಧ್ಯದಲ್ಲೇ ಪಾಲಿಕೆ ಬಜೆಟ್ ಮಂಡನೆ ಆಗಲಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಹಾಗೆಯೇ ಇದೆ ವೇಳೆ ಮೆಟ್ರೋ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣದ ಬಗ್ಗೆ ಏನು ಹೇಳಿದ್ದಾರೆ ಎಂದು ಇಲ್ಲಿ ತಿಳಿಯಿರಿ.
ಬೆಂಗಳೂರು ವಿವಿಯ ಜ್ಞಾನಭಾರತಿ ಬಿಪೆಡ್ ಮೈದಾನದಲ್ಲಿ ಭಾನುವಾರ ನಡೆದ "ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ" ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರ, "ಬೆಂಗಳೂರಿನ ಹೊಸ ಯೋಜನೆಗಳಿಗೆ ಸಂಪನ್ಮೂಲ ಕ್ರೋಡೀಕರಿಸಲು ನಮ್ಮದೇ ಆದ ಯೋಜನೆಗಳಿವೆ. ಬೆಂಗಳೂರಿನಲ್ಲಿ ಇನ್ಮುಂದೆ ಮೆಟ್ರೋ ಹೋಗುವ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣಕ್ಕೂ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ," ಎಂದು ಹೇಳಿದರು.

ಯಶವಂತಪುರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಟನಲ್ ರಸ್ತೆ ಮಾಡಲು ಫೀಸಿಬಲ್ ವರದಿ ಸಿದ್ಧಪಡಿಸಲಾಗುತ್ತಿದೆ. ಸುಮ್ಮನಹಳ್ಳಿ, ಗೊರಗೊಂಟೆ ಪಾಳ್ಯ ಸೇರಿದಂತೆ ಇತರ ಮಾರ್ಗಗಳಲ್ಲಿ ಈ ಯೋಜನೆಗೆ ಸಿದ್ಧತೆ ಮಾಡುತ್ತಿದ್ದೇವೆ. ಇದುವರೆಗೂ 12 ಕ್ಷೇತ್ರಗಳಲ್ಲಿ ಈ ಕಾರ್ಯಕ್ರಮ ಮಾಡಿದ್ದು, 20 ಸಾವಿರ ಅಹವಾಲುಗಳು ದಾಖಲಾಗಿವೆ. ಸಿಎಂ ಕೂಡ ಎರಡು ಬಾರಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅವರ ಕಾರ್ಯಕ್ರಮದಲ್ಲೂ ಸಾವಿರಾರು ಮಂದಿ ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ಈ ಅರ್ಜಿಗಳ ವಿಲೇವಾರಿಗೆ ಪ್ರತ್ಯೇಕವಾಗಿ ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ.
ನೀವು ನಿಮ್ಮ ಸಮಸ್ಯೆ ತೆಗೆದುಕೊಂಡು ನಮ್ಮ ಮನೆ ಬಾಗಿಲಿಗೆ ಸುತ್ತ ಬಾರದು ಎಂದು ನಾನೇ ನಿಮ್ಮ ಮನೆ ಬಾಗಿಲಿಗೆ ಬಂದು ನಿಮ್ಮ ಸಮಸ್ಯೆ ಆಲಿಸುತ್ತಿದ್ದೇನೆ. ನಮ್ಮ ಸರ್ಕಾರ ಸದಾ ನಿಮ್ಮ ಜೊತೆ ಇರಲಿದೆ. ನಿಮ್ಮ ಎಲ್ಲಾ ಸಮಸ್ಯೆ ಒಂದೇ ದಿನದಲ್ಲಿ ಬಗೆಹರಿಸಲು ಆಗುವುದಿಲ್ಲ. ಆದರೆ ಹಂತ ಹಂತವಾಗಿ ಬಗೆಹರಿಸುತ್ತೇವೆ ಎಂದು ಹೇಳಿದರು.












Click it and Unblock the Notifications