ಎಲ್ಲ ಭಾರತೀಯ ಭಾಷೆಗಳಲ್ಲಿಯೂ ವೈದ್ಯಕೀಯ ವಿಜ್ಞಾನ ಕಲಿಕೆ
ಬೆಂಗಳೂರು, ಫೆ. 9: ವೈವಿಧ್ಯಮಯವಾದ ಭಾರತೀಯ ಭಾಷೆಗಳ ಸಂರಕ್ಷಣೆ ಮತ್ತು ಬೆಳವಣೆಗೆಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಬದ್ಧವಾಗಿದೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಹೇಳಿದರು>
ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನಲ್ಲಿ ಆಯೋಜಿಸಿರುವ ಎರಡು ದಿನಗಳ ''ಭಾಷಾ ಭಾರತ ಬಲಿಷ್ಠ ಭಾರತ'' ರಾಷ್ಟ್ರಮಟ್ಟದ ಭಾರತೀಯ ಭಾಷೆಗಳ ದುಂಡುಮೇಜಿನ ಪರಿಷತ್ತನ್ನು ದೆಹಲಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಸಚಿವರು ಮಾತನಾಡಿದರು.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಾಷಾ ವೈವಿಧ್ಯತೆಯನ್ನು ಗೌರವಿಸುತ್ತದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ. ನೀಟ್ (NEET) ಜೆಇಇ (JEE) ಸೇರಿದಂತೆ ರಾಷ್ಟ್ರ ಮಟ್ಟದ ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತಮ್ಮ ಮಾತೃಭಾಷೆಯಲ್ಲಿಯೇ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದರು.
ಇತ್ತೀಚೆಗೆ ಮಂಡಿಸಲಾದ ಕೇಂದ್ರ ಬಜೆಟ್ ನಲ್ಲಿ ಭಾರತೀಯ ಭಾಷಾ ಅನುವಾದ ಯೋಜನೆಗಳಿಗಾಗಿ ಅನುದಾನ ಹಂಚಿಕೆ ಮಾಡಲಾಗಿದೆ. ವೈದ್ಯಕೀಯ ಸೇರಿದಂತೆ ವಿಜ್ಞಾನ ಸಂಬಂಧಿತ ವಿಷಯಗಳು ಎಲ್ಲ ಭಾರತೀಯ ಭಾಷೆಗಳಲ್ಲೂ ದೊರೆಯುವಂತೆ ಮಾಡಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಸಚಿವರು ತಿಳಿಸಿದರು.
ಭಾರತವು ವೈವಿಧ್ಯತೆಯಲ್ಲಿ ಏಕತೆಯನ್ನು ಹೊಂದಿರುವ ದೇಶವಾಗಿದೆ. ಬಹುಭಾಷೆ, ಬಹುಸಂಸ್ಕೃತಿಯ ಸಮ್ಮಿಲನವಿರುವ ರಾಷ್ಟ್ರ ನಮ್ಮದು. ಪ್ರತಿಯೊಂದು ಭಾಷೆಗೂ ಅದರದ್ದೇ ಆದ ಸೊಗಡು ಇದೆ. ಪ್ರತಿಯೊಂದು ರಾಜ್ಯಕ್ಕೂ ಅದರದ್ದೇ ಆದ ವೈಶಿಷ್ಟವಿದೆ. ಸರ್ಕಾರಗಳ ಆಡಳಿತವು ಆಯಾ ಭಾಷೆಯಲ್ಲಿಯೇ ಇದ್ದರೆ ಸ್ಥಳೀಯರಿಗೆ ಅನುಕೂಲವಾಗುತ್ತದೆ. 1956ರಲ್ಲಿ ಭಾಷಾಧಾರಿತ ರಾಜ್ಯಗಳ ಪುನರ್ವಿಂಗಡಣೆ ಮಾಡಿದ್ದು ಸಹ ಇದೇ ಉದ್ದೇಶದಿಂದ ಎಂದು ಅವರು ಹೇಳಿದರು.
Recommended Video
ಭಾರತೀಯ ಭಾಷೆಗಳ ಮಧ್ಯೆ ಹೆಚ್ಚಿನ ಸಮನ್ವಯತೆ ಸಾಧಿಸಲು ಹಾಗೂ ಭಾರತೀಯರ ಮಾತೃಭಾಷೆಗಳ ಮಹತ್ವವನ್ನು ಹೆಚ್ಚಿಸುವ ಉದ್ದೇಶದಿಂದ ಈ ಸಮ್ಮೇಳನವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯವಾಗಿದೆ ಎಂದ ಸಚಿವರು ಇದಕ್ಕಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ ಎಸ್ ನಾಗಾಭರಣ ಮತ್ತು ಅವರ ತಂಡಕ್ಕೆ ಅಭಿನಂದನೆ ತಿಳಿಸಿದರು.