ವಾಲ್ಮೀಕಿ ಜಯಂತಿಗೆ ಸಿಎಂ ಗೈರು: ವಿಧಾನಸೌಧದ ಎದುರು ಪ್ರತಿಭಟನೆ
ಬೆಂಗಳೂರು, ಅಕ್ಟೋಬರ್ 24: ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸಿದೆ ಎಂದು ನಾಯಕ ಸಮಾಜದ ಮುಖಂಡರು ವಿಧಾನಸೌಧದ ಬೃಹತ್ ಮೆಟ್ಟಿಲು ಬಳಿ ಧರಣಿ ನಡೆಸಿದ ಘಟನೆ ಬುಧವಾರ ನಡೆಯಿತು.
ಎರಡನೇ ವರ್ಷದ ಕಾರ್ಯಕ್ರಮ ಸಂಪೂರ್ಣ ನೀರಸವಾಗಿದ್ದು, ಬ್ಯಾಂಕ್ವೆಟ್ ಹಾಲ್ನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಗೈರು ಹಾಜರಾಗಿದ್ದುದು ನಾಯಕ ಸಮುದಾಯಕ್ಕೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಕುಮಾರಸ್ವಾಮಿ ಹಾಗೂ ಡಿಸಿಎಂ ಪರಮೇಶ್ವರ್ ವಿರುದ್ಧ ಘೋಷಣೆ ಕೂಗಿದ ಮುಖಂಡರು ಕಾರ್ಯಕ್ರಮದ ವೇದಿಕೆ ಮೇಲೆ ಅಳವಡಿಸಿರುವ ಸಿಎಂ ಭಾವಚಿತ್ರ ತೆರವುಗೊಳಿಸುವಂತೆ ಒತ್ತಾಯಿಸಿದರು. ನಂತರ ಪೊಲೀಸ್ ಅಧಿಕಾರಿಗಳು ಮನವೊಲಿಸಿ, ಧರಣಿ ಕೊನೆಗೊಳಿಸಿದರು.

ಅನಾರೋಗ್ಯದಿಂದ ಬಳಲುತ್ತಿರುವ ಸಿಎಂ ಕುಮಾರಸ್ವಾಮಿ ಅವರು ಕಾರ್ಯಕ್ರಮಕ್ಕೆ ಕೊನೆ ಘಳಿಗೆಯಲ್ಲಿ ಬರಲಿಲ್ಲ. ಇನ್ನು ಡಿಸಿಎಂ ಪರಮೇಶ್ವರ್ ಜಮಖಂಡಿ ಕ್ಷೇತ್ರದ ಉಪ ಚುನಾವಣೆ ನಿಮಿತ್ತ ಪ್ರಚಾರ ಕಾರ್ಯಕ್ಕೆ ತೆರಳಿದ್ದರಿಂದ ಅವರೂ ಇತ್ತ ಸುಳಿಯಲಿಲ್ಲ.
ಈ ಬಾರಿಯ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಸರ್ಕಾರ ಘೋಷಿಸಿತ್ತಾದರೂ ಲಂಡನ್ನಲ್ಲಿ ನಡೆಯುವ ಸಮಾರಂಭದಲ್ಲಿ ಈ ಮೊದಲೇ ಕಾರ್ಯಕ್ರಮ ನಿಗದಿಯಾಗಿದ್ದರಿಂದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಸಮಾರಂಭಕ್ಕೆ ಗೈರು ಹಾಜರಾಗಿದ್ದರು. ಹೀಗಾಗಿ ಸರ್ಕಾರದ ಅಧಿಕೃತ ಕಾರ್ಯಕ್ರಮದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ಮಾತ್ರ ಭಾಗವಹಿಸಿದ್ದರು.












Click it and Unblock the Notifications