ಸಿದ್ದರಾಮಯ್ಯ V/s ಡಿಕೆ ಶಿವಕುಮಾರ್: ಸಿದ್ದರಾಮಯ್ಯ ಮತ ಹಾಕಿದ್ದೇನೆ ಎಂದು ಬಹಿರಂಗಪಡಿಸಿದ ಕೆಎನ್ ರಾಜಣ್ಣ!
ಬೆಂಗಳೂರು ಮೇ 15: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ಗೆ ಈಗ ಮುಖ್ಯಮಂತ್ರಿ ಆಯ್ಕೆ ವಿಚಾರವೇ ದೊಡ್ಡ ಕಗ್ಗಂಟಾಗಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಯಾರು ಸಿಎಂ ಆಗಬೇಕು ಎಂಬ ಪ್ರಶ್ನೆ ಎದ್ದಿದ್ದು, ತಡರಾತ್ರಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಗಿದೆ.
ಬೆಂಗಳೂರಿನ ಹೋಟೆಲ್ನಲ್ಲಿ ಭಾನುವಾರ ತಡರಾತ್ರಿ ಆರಂಭವಾದ ಸಭೆ ಮಧ್ಯರಾತ್ರಿ 1.30ರವರೆಗೆ ನಡೆಯಿತು. ಇದರಲ್ಲಿ ಹೊಸದಾಗಿ ಆಯ್ಕೆಯಾದ ಎಲ್ಲಾ 135 ಶಾಸಕರು ಭಾಗವಹಿಸಿದ್ದರು. ಮುಂದಿನ ಸಿಎಂ ಯಾರಾಗಬೇಕು ಎಂದು ಗುಪ್ತ ಮತದಾನ ಮಾಡಿರುವ ಶಾಸಕರು ಸುಮ್ಮನಿದ್ದರೇ ಮಧುಗಿರಿ ಶಾಸಕ ಕೆಎನ್ ರಾಜಣ್ಣ ಮಾತ್ರ ತಾವು ಸಿದ್ದರಾಮಯ್ಯಗೆ ಬೆಂಬಲ ನೀಡಿರುವುದಾಗಿ ತಿಳಿಸಿದ್ದಾರೆ.

ಮತದಾನ ನಡೆಯುತ್ತಿರುವಾಗ ಮತ ಚಲಾಯಿಸಿ ಬಂದ ಕೆಎನ್ ರಾಜಣ್ಣ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ್ದು, "ನಾನು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದೆ. ಆದರೆ, ಯಾರು ಮತ ಚಲಾಯಿಸಿದ್ದಾರೋ ಗೊತ್ತಿಲ್ಲ. ಆದರೆ, ನನ್ನ ಮತ ನಾನು ಸಿದ್ದರಾಮಯ್ಯ ಅವರಿಗೆ ಹಾಕಿದ್ದೇನೆ. ಹೆಚ್ಚು ಶಾಸಕರು ಸಿದ್ದರಾಮಯ್ಯ ಅವರಿಗೆ ಮತ ಹಾಕಿರುವ ಸಾಧ್ಯತೆಯಿದೆ" ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭಾನುವಾರ ತಡರಾತ್ರಿ ಸಭೆ ನಡೆಸಿದ್ದು, ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕದ ಮುಂದಿನ ಮುಖ್ಯಮಂತ್ರಿಯ ಹೆಸರನ್ನು ಶೀಘ್ರದಲ್ಲೇ ಘೋಷಿಸುತ್ತಾರೆ. ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಕರ್ನಾಟಕದ ನೂತನ ಸಿಎಂ ಆಯ್ಕೆಯ ನಂತರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಯೋಜನೆಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಣದೀಪ್ ಸಿಂಗ್ ಸುರ್ಜೇವಾಲಾ, "ನಾವು ನಮ್ಮ ಮೊದಲ ಐದು ಗ್ಯಾರೆಂಟಿಗಳನ್ನು ಮೊದಲ ಕ್ಯಾಬಿನೆಟ್ನಲ್ಲಿಯೇ ಜಾರಿಗೊಳಿಸುತ್ತೆವೆ" ಎಂದು ಹೇಳಿದ್ದಾರೆ.
ಕರ್ನಾಟಕ ಮುಖ್ಯಮಂತ್ರಿ ಹೆಸರನ್ನು ಆಯ್ಕೆ ಮಾಡಲು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡುವ ನಿರ್ಣಯವನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್ಪಿ) ಸರ್ವಾನುಮತದಿಂದ ಅಂಗೀಕರಿಸಿದ ನಂತರ ಸಭೆಯನ್ನು ಕರೆಯಲಾಗಿತ್ತು. "ಕಾಂಗ್ರೆಸ್ ಶಾಸಕಾಂಗ ಪಕ್ಷದ ಹೊಸ ನಾಯಕನನ್ನು ನೇಮಿಸಲು ಎಐಸಿಸಿ ಅಧ್ಯಕ್ಷರಿಗೆ ಈ ಮೂಲಕ ಅಧಿಕಾರವಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷವು ಸರ್ವಾನುಮತದಿಂದ ನಿರ್ಣಯಿಸುತ್ತದೆ" ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.












Click it and Unblock the Notifications