ಹೊಸ ವಾಹನ ಖರೀದಿಸಬೆಕಾದರೆ ಹೊಸ ರೂಲ್ಸು ಪಾಲಿಸಲೇಬೇಕು !
ಬೆಂಗಳೂರು, ಡಿಸೆಂಬರ್ 1: ರಾಜಧಾನಿ ಬೆಂಗಳೂರಿನಲ್ಲಿ ಹೊಸ ಪಾರ್ಕಿಂಗ್ ವ್ಯವಸ್ಥೆ ಜಾರಿ ಮಾಡಲು ಸರ್ಕಾರ ಗಂಭೀರ ಚಿಂತನೆ ನಡಸಿದೆ. ಹೊಸ ವಾಹನ ಖರೀದಿ ಮಾಡುವರು ಕಡ್ಡಾಯವಾಗಿ ಪಾರ್ಕಿಂಗ್ ಗೆ ಸ್ಥಳಾವಕಾಶವಿದೆ ಎಂಬ ಬದ್ಧತಾ ಪ್ರಮಾಣ ಪತ್ರವನ್ನು ಸಲ್ಲಿಸಬೆಕು. ಇಂತದ್ದೊಂದು ನಿಯಮ ಜಾರಿಗೆ ತರುವ ನಿಟ್ಟಿನಲ್ಲಿ ಅದರ ಸಾಧಕ ಭಾದಕ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲು ಸರ್ಕಾರ ಮುಂದಾಗಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಹೊಸ ಪಾರ್ಕಿಂಗ್ ನೀತಿ ತರಲು ನಿರ್ಧರಿಸಲಾಗಿದೆ. ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್, ರಾಜಧಾನಿ ಬೆಂಗಳೂರಲ್ಲಿ ಸಂಚಾರ ದಟ್ಟಣೆ ಹೆಚ್ಚುತ್ತಿದ್ದು, ಭವಿಷ್ಯದ ದೃಷ್ಟಿಯಿಂದ ಅವೈಜ್ಞಾನಿಕ ವಾಹನ ನಿಲುಗಡೆ ತಪ್ಪಿಸಬೇಕಿದೆ. ಹೀಗಾಗಿ ಹೊಸ ಪಾರ್ಕಿಂಗ್ ನೀತಿ ಜಾರಿಗೆ ತರುವ ಸಂಬಂಧ ಅದರ ಸಾಧಕ ಭಾದಕಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗುತ್ತಿದೆ ಎಂದರು.
ಬೆಂಗಳೂರಿನಲ್ಲಿ ದಿನೇ ದಿನೇ ವಾಹನಗಳ ಹೆಚ್ಚುತ್ತಿದೆ. ಪಾರ್ಕಿಂಗ್ ಸಮಸ್ಯೆ ಉಲ್ಭಣಿಸುತ್ತಿದ್ದು ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿದ್ದಾರೆ. ಒಂದು ಕಠಿಣ ಪಾರ್ಕಿಂಗ್ ನೀತಿ ತರಲಾಗುತ್ತಿದ್ದು, ಇದರ ಅನ್ವಯ ಹೊಸ ವಾಹನ ಖರೀದಿಸುವ ಸಾರ್ವಜನಿಕರು ಪಾರ್ಕಿಂಗ್ ಮಾಡಲು ಸ್ಥಳಾವಕಾಶವಿದೆ ಎಂಬ ಬದ್ಧತಾ ಪತ್ರಕ್ಕೆ ಸಹಿ ಹಾಕಿದರೆ ಮಾತ್ರ ವಾಹನ ಖರೀದಿಗೆ ಅವಕಾಶ ನೀಡಲಾಗುತ್ತದೆ. ನಗರದಲ್ಲಿಪಾರ್ಕಿಂಗ್ ವ್ಯವಸ್ಥೆ ಸರಿಯಿಲ್ಲ. ಬಹುತೇಕ ಕಡೆ ವಾಹನಗಳನ್ನು ರಸ್ತೆಯಲ್ಲೇ ನಿಲ್ಲಿಸುತ್ತಾರೆ. ಇದರಿಂದ ಜನ ತೊಂದರೆ ಅನುಭವಿಸುತ್ತಿದ್ದು, ಸರ್ಕಾರಕ್ಕೆ ಸಾಕಷ್ಟು ದೂರುಗಳು ಬಂದಿವೆ. ಸಮಸ್ಯೆ ಪರಿಹರಿಸುವ ಭಾಗವಾಗಿ ಹೊಸ ಪಾರ್ಕಿಂಗ್ ನೀತಿ ಕಟ್ಟು ನಿಟ್ಟಾಗಿ ಜಾರಿಗೆ ತರಲಾಗುತ್ತದೆ ಎಂದು ಅವರು ತಿಳಿಸಿದರು.

ರಸ್ತೆಯಲ್ಲಿಯೇ ವಾಹನ ನಿಲ್ಲಿಸುವ ಪರಿಪಾಠಕ್ಕೆ ಕಡಿವಾಣ ಹಾಕಲಾಗುತ್ತದೆ. ಆದರೆ ಕೆಲವು ಕಡೆ ಮನೆ ಮುಂದೆ, ರಸ್ತೆ ಬದಿ ವಾಹನ ನಿಲ್ಲಿಸುತ್ತಾರೆ. ಸಾರ್ವಜನಿಕ ಪ್ರದೇಶದಲ್ಲಿ ಬೆಳಗ್ಗೆ ವಾಹನ ನಿಲ್ಲಿಸಿದರೆ ಸಂಜೆ ನಂತರವೇ ತೆರೆಯಲಾಗುತ್ತದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಸಮಸ್ಯೆಯಾಗುತ್ತಿದ್ದು, ನಗರದಲ್ಲಿ ಪ್ರಸ್ತುತ 85 ಕಡೆ ಸ್ಮಾರ್ಟ್ ಪಾರ್ಕಿಂಗ್ ಕೇಂದ್ರ ಸ್ಥಾಪಿಸಲಾಗಿದೆ. ಇದೇ ರೀತಿ ಎಲ್ಲಾ ಕಡೆ ಶುಲ್ಕ ಸಂಗ್ರಹ ಸ್ಮಾರ್ಟ್ ಪಾರ್ಕಿಂಗ್ ಕೇಂದ್ರ ತೆರೆಯುವ ಅಗತ್ಯವಿದೆ ಎಂದು ಹೇಳಿದರು. ಮುಖ್ಯ ಕಾರ್ಯದರ್ಶಿಗಳು ಅಧ್ಯಯನ ನಡೆಸಿ ವರದಿ ನೀಡಲಿದ್ದು, ಅದರ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ವಿಶ್ವನಾಥ್ ವಿವರಿಸಿದರು.

ಬಿ ಟ್ರ್ಯಾಕ್ : ರಾಜಧಾನಿಯ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಬಿ ಟ್ರ್ಯಾಕ್ ಯೋಜನೆ ಈಗಾಗಲೇ ಜಾರಿಗೆ ತರಲಾಗಿದೆ. ಅಪಘಾತ ರಹಿತ ವೈಜ್ಞಾನಿಕ ಸಿಗ್ನಲ್ ನಿರ್ವಹಣೆಗಾಗಿ ಸರ್ಕಾರ ನೂರಾರು ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ. ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ 85 ಲಕ್ಷ ದಾಟಿದೆ. ಹೀಗಾಗಿ ಸಂಚಾರ ದಟ್ಟಣೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಜತೆಗೆ ಪಾರ್ಕಿಂಗ್ ಸಮಸ್ಯೆಯೂ ದಿನೇ ದಿನೇ ಹೆಚ್ಚುತ್ತಿದೆ. ಇದೀಗ ಪಾರ್ಕಿಂಗ್ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮುಂದಾಗಿದೆ.












Click it and Unblock the Notifications