ಬೆಂಗಳೂರಿನ ಈ ಭಾಗದಲ್ಲಿ ಹೊಸದಾಗಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ
ಬೆಂಗಳೂರಿನಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಇದರೊಂದಿಗೆ ಬೆಂಗಳೂರಿನಲ್ಲಿ ಈಗಾಗಲೇ ಇರುವ ಕಾಮಗಾರಿಗಳ ಅಭಿವೃದ್ಧಿ ಕಾರ್ಯವೂ ನಡೆದಿದೆ. ಇದೀಗ ಬೆಂಗಳೂರಿನ ಪ್ರಮುಖ ಪ್ರದೇಶದಲ್ಲಿ ಸ್ಮಾರ್ಟ್ ಪಾರ್ಕಿಂಗ್ ಅಭಿವೃದ್ಧಿಗೆ ಗ್ರೇಟರ್ ಬೆಂಗಳೂರು ಆಡಳಿತದ ನಗರ ಪಾಲಿಕೆಯೊಂದು ಮುಂದಾಗಿದೆ. ಅದರ ವಿವರ ಇಲ್ಲಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಬದಲಿಗೆ ಗ್ರೇಟರ್ ಬೆಂಗಳೂರು ಆಡಳಿತ ರಚನೆಯಾದ ಮೇಲೆ ಐದು ಮಹಾನಗರ ಪಾಲಿಕೆಯ ಆಯುಕ್ತರು ಆಯಾ ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದಾರೆ. ಅದೇ ರೀತಿ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲೂ ಕೆಲವೊಂದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ಬೆಂಗಳೂರಿನ ಕೃಷ್ಣರಾಜೇಂದ್ರ ಮಾರುಕಟ್ಟೆಯ ನೆಲ ಮಹಡಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಮಾಡಲು ಟೆಂಡರ್ ಕರೆಯಲಾಗಿದೆ. ಈ ಸಂಬಂಧ ಸ್ಥಳ ಪರಿಶೀಲನೆ ನಡೆಸಿ ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ಸೂಚನೆ ನೀಡಿದ್ದಾರೆ.
ನಗರದ ಕೆ.ಆರ್. ಮಾರುಕಟ್ಟೆಯ ಸುತ್ತಮುತ್ತಲಿನ ಪ್ರದೇಶ ಸ್ವಚ್ಛತೆ ಕಾಪಾಡಲು ನೀಲನಕ್ಷೆ ಸಿದ್ಧಪಡಿಸಲು ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ಅಧಿಕಾರಿಗಳಿಗೆ ಭಾನುವಾರ ಸೂಚನೆ ನೀಡಿದ್ದಾರೆ.
ಕೆ.ಆರ್. ಮಾರುಕಟ್ಟೆಗೆ ಭಾನುವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಕೆ.ಆರ್. ಮಾರುಕಟ್ಟೆಯಲ್ಲಿ ಹೆಚ್ಚು ಹಸಿ ತ್ಯಾಜ್ಯ ಉತ್ಪತ್ತಿ ಆಗಲಿದ್ದು, ಅದನ್ನು ನಾವು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಈ ನಿಟ್ಟಿನಲ್ಲಿ ಸಮಗ್ರ ಯೋಜನೆ ರೂಪಿಸಿ ನೀಲನಕ್ಷೆ ಸಿದ್ದಪಡಿಸಿ ಹಂತ-ಹಂತವಾಗಿ ಅದನ್ನು ಅನುಷ್ಠಾನಗೊಳಿಸಲು ಕ್ರಮವಹಿಸುವಂತೆ ಸೂಚನೆ ನೀಡಿದ್ದಾರೆ.
ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಸುಮಾರು 70 ಟನ್ ತ್ಯಾಜ್ಯ ಉತ್ಪತ್ತಿಯಾಗಲಿದ್ದು, ಅದನ್ನು ಮೂರು ಪಾಳಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡಲಾಗುತ್ತಿದೆ. ಎಲ್ಲಿಯೂ ತ್ಯಾಜ್ಯ ಬಿಸಾಡದಂತೆ ನೋಡಿಕೊಂಡು ಸದಾ ಸ್ವಚ್ಛತೆಯಿರುವಂತೆ ನೋಡಿಕೊಳ್ಳಬೇಕು. ತ್ಯಾಜ್ಯ ಸಂಗ್ರಹಿಸುವ ಸ್ಥಳದಲ್ಲಿ ಸ್ವಚ್ಚವಾಗಿರುವಂತೆ ನೋಡಿಕೊಳ್ಳಬೇಕು. ಮಾರುಕಟ್ಟೆ ಮುಂಭಾಗ ಪಾದಚಾರಿ ಮಾರ್ಗಗಳನ್ನು ಅತಿಕ್ರಮಣ ಮಾಡಿಕೊಂಡು ವ್ಯಾಪಾರ ಮಾಡುತ್ತಿದ್ದು, ಅದಕ್ಕೆಲ್ಲಾ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಯಿತು.
ಅಧಿಕಾರಿಗಳ ಜೊತೆ ಸಭೆ: ಕೆ.ಆರ್. ಮಾರುಕಟ್ಟೆಯಲ್ಲಿ ಸ್ವಚ್ಚತೆ ಸೇರಿದಂತೆ ಇನ್ನಿತರೆ ವಿಷಗಳ ಕುರಿತು ಚರ್ಚಿಸಲು ಕೇಂದ್ರ ನಗರ ಪಾಲಿಕೆಯ ಇಂಜಿನಿಯರ್ ಗಳು, ಕಂದಾಯ ಅಧಿಕಾರಿಗಳು, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಅಧಿಕಾರಿಗಳ ಜೊತೆ ಕೂಡಲೇ ಸಭೆ ಏರ್ಪಡಿಸಲು ಮುಖ್ಯ ಎಂಜಿನಿಯರ್ಗೆ ಸೂಚನೆ ನೀಡಲಾಗಿದೆ.
ಈ ವೇಳೆ ಮುಖ್ಯ ಎಂಜಿನಿಯರ್ ವಿಜಯ್ ಕುಮಾರ್ ಹರಿದಾಸ್, ಸಹಾಯಕ ಕಾರ್ಯಪಾಲಕ ಎಂಜಿನಿಯರು, ಕಂದಾಯ ಅಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.












Click it and Unblock the Notifications