NGO steals voter data: ಸಿಎಂ ಬೊಮ್ಮಾಯಿ, ಅಧಿಕಾರಿಗಳ ವಿರುದ್ಧ ದೂರು ಸಲ್ಲಿಸಿದ ಕಾಂಗ್ರೆಸ್
ಬೆಂಗಳೂರು, ನವೆಂಬರ್ 18: ಸರ್ಕಾರೇತರ ಸಂಸ್ಥೆಯೊಂದು ನಿಯಮ ಉಲ್ಲಂಘಿಸಿ ಮತದಾರರಿಂದ ಅಕ್ರಮವಾಗಿ ಮಾಹಿತಿ ಸಂಗ್ರಹಿಸಿದ್ದರ ವಿರುದ್ಧ ಗುರುವಾರ ಬೆಳಗ್ಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿತ್ತು. ಅದರ ಬೆನ್ನಲ್ಲೆ ಮಧ್ಯಾಹ್ನ ಮುಖ್ಯಮಂತ್ರಿಗಳ ವಿರುದ್ಧ ಆರೋಪಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ದಾಖಲಿಸಿದೆ.
ಮತದಾರರಿಂದ ಮಾಹಿತಿ ಸಂಗ್ರಹಿಸಿದ ಪ್ರಕರಣಕ್ಕೂ ಇವರಿಗೂ ಸಂಬಂಧವಿದೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇನ್ನಿತರ ಅಧಿಕಾರಿಗಳ ವಿರುದ್ಧ ದೂರು ನೀಡಲಾಗಿದೆ.
Voter data theft: ಎನ್ಜಿಒ ವಿರುದ್ಧ ದೂರು ದಾಖಲಿಸಿದ ಬಿಬಿಎಂಪಿ
ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಶಾಸಕ ಯು.ಟಿ.ಖಾದರ್, ಸಲೀಂ ಅಹ್ಮದ್ ಇನ್ನಿತರ ನಾಯಕರು ಸೇರಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಖುದ್ದು ದೂರು ಸಲ್ಲಿಸಿದ್ದಾರೆ.
ಬಿಬಿಎಂಪಿ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಚರ್ಚಿಸಿ ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ' ಪಾಲಿಕೆ ವ್ಯಾಪ್ತಿಯ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ 2023ರ ಕಾರ್ಯಚಟುವಟಿಕೆಗೆ, ಜಾಗೃತಿ ಮೂಡಿಸಲು ಅನುಮತಿ ನೀಡಲಾಗಿತ್ತು. ಆದರೆ ಈ ಸರ್ಕಾರೇತರ ಸಂಸ್ಥೆ ಷರತ್ತು ಉಲ್ಲಂಘಿಸಿದೆ, ಸಂಗ್ರಹಿಸಿದ ಮಾಹಿತಿಯನ್ನು ದುರ್ಬಳಕೆ ಮಾಡಿಕೊಂಡಿದೆ. ಹೀಗಾಗಿ ಸಂಸ್ಥೆ ನೀಡಿದ ಅನುಮತಿಯನ್ನು ರದ್ದು ಮಾಡಲಾಗಿದೆ.
ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕ ಬಾಣ
ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ ಕಾಂಗ್ರೆಸ್ನ ನಾಯಕರು ಗುರುವಾರ ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮತ್ತಿತರರು ಸರ್ಕಾರವನ್ನೇ ನೇರ ಹೊಣೆಯಾಗಿಸಿದರು. ಬಿಜೆಪಿ ವಿರುದ್ಧ ನೇರ ವಾಗ್ದಾಳಿ ನಡೆಸಿದರು.
ಈ ಸಂದರ್ಭದಲ್ಲಿ ರಣದೀಪ್ ಸಿಂಗ್ ಸುರ್ಜೆವಾಲಾ ಮಾತನಾಡಿ, ಸರ್ಕಾರ ವೋಟರ್ ಐಡಿ ಮಾಹಿತಿ ಸಂಗ್ರಹಕ್ಕೆ ಅನುಮತಿಸಿದ ಸಂಸ್ಥೆ ಹಾಗೂ ಡಿಎಪಿ ಹೊಂಬಾಳೆ ಪ್ರೈವೇಟ್ ಲಿಮಿಟೆಡ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರು ಒಬ್ಬರೇ ಎಂದರು. ಈ ಸಂಸ್ಥೆಗಳು ಇವಿಎಂ ಸಿದ್ಧಗೊಳಿಸುತ್ತವೆ. ಈ ಪ್ರಕರಣದ ಹಿಂದೆ ಸಚಿವರೊಬ್ಬರ ಕೈವಾಡವಿದೆ ಎಂದು ಅವರು ಆರೋಪಿಸಿದರು.
ಮತದಾರರ ಪಟ್ಟಿ ನವೀಕರಣವನ್ನು ಸರ್ಕಾರ, ಅಧಿಕಾರಿಗಳು ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರಿಂದ ಹಿಂದೆ ಮುಖ್ಯಮಂತ್ರಿಗಳೇ ಇದ್ದಾರೆ. ವಾಮ ಮಾರ್ಗದಲ್ಲಿ ಚುನಾವಣೆ ಗೆಲ್ಲಲು ಯತ್ನ ನಡೆಸಿದ್ದಾರೆ. ಮತದಾನ ಗುರುತಿನ ಚೀಟಿ ತಿದ್ದುಪಡಿ ಅಕ್ಷಮ್ಯ ಅಪರಾಧ ಎಂದು ಸಿದ್ದರಾಮಯ್ಯ ಗಂಭೀರ ಆಪಾದನೆ ಮಾಡಿದರು.
ಇಂತಹ ನೀಚ ಕೆಲಸಕ್ಕೆ ಕೈ ಹಾಕುವ ಮೂಲಕ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇಡಿ ಐಎಎಸ್ಗೆ ಅಪಮಾನ ಮಾಡಿದ್ದಾರೆ ಎಂದು ಡಿಕೆ ಶಿವಕುಮಾರ್ ಕಿಡಿ ಕಾರಿದರು. ಎಲ್ಲ ನಾಯಕರು ಸುದ್ದಿಗೋಷ್ಠಿಯಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದರಲ್ಲದೇ ಮಧ್ಯಾಹ್ನ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಈ ಬಗ್ಗೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ದೂರು ನೀಡಿದ್ದಾರೆ.