ಕೆಂಪೇಗೌಡ ಅಂತಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗದಲ್ಲಿ 3 ಅಂಡರ್ಪಾಸ್ ನಿರ್ಮಾಣ; ಎಲ್ಲೆಲ್ಲಿ?
ಬೆಂಗಳೂರು, ನವೆಂಬರ್, 17: ಬೆಂಗಳೂರು ಅಂದರೆ ಮೊದಲಿಗೆ ನೆನಪಿಗೆ ಬರುವುದೇ ಟ್ರಾಫಿಕ್. ಇಲ್ಲಿ ವಾಹನ ಸವಾರರು ಟ್ರಾಫಿಕ್ನಿಂದ ತಪ್ಪಿಸಿಕೊಂಡು ಹೋಗುವುದೇ ಒಂದು ಸವಾಲಾಗಿ ಪರಿಣಮಿಸಿದೆ. ಅದರಲ್ಲೂ ಇದೀಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಮಾರ್ಗದಲ್ಲಿ ಸಂಚಾರ ದಟ್ಟಣೆಯನ್ನು ತಡೆಯಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನೆಯೊಂದನ್ನು ಹಾಕಿಕೊಂಡಿದೆ.
ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿ ದಿನದಿಂದ ದಿನಕಗಕೆ ಸಂಚಾರ ದಟ್ಟಣೆ ಹೆಚ್ಚಾಗುತ್ತಲೇ ಇದೆ. ಇದನ್ನು ನಿಯಂತ್ರಿಸುವ ಉದ್ದೇಶದಿಂದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೊಡಿಗೇಹಳ್ಳಿ, ಬ್ಯಾಟರಾಯನಪುರ, ಜಕ್ಕೂರು ಮತ್ತು ಅಲ್ಲಾಳಸಂದ್ರದಂತಹ ಪ್ರಮುಖ ಜಂಕ್ಷನ್ಗಳಲ್ಲಿ ಅಂಡರ್ಪಾಸ್ಗಳನ್ನು ನಿರ್ಮಿಸಲು ಯೋಜನೆ ಹಾಕಿಕೊಂಡಿದೆ. ಇದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ರಸ್ತೆಯಾಗಿದ್ದು, ಈ ಮಾರ್ಗದಲ್ಲಿ ಸಾಗುವ ಪ್ರಯಾಣವನ್ನು ಸುಲಭಗೊಳಿಸುವ ಗುರಿಯನ್ನು ಹೊಂದಿವೆ ಎಂದು ತಿಳಿದುಬಂದಿದೆ.

ಇನ್ನು ಬಿಎಂಆರ್ಸಿಎಲ್ ಈಗ ಬ್ಲೂ ಲೈನ್ ಮೆಟ್ರೋ ಕಾಮಗಾರಿ ಕೈಗೆತ್ತಿಕೊಂಡಿದ್ದು, ಸರ್ವಿಸ್ ರಸ್ತೆಗಳಲ್ಲಿ ಸಂಚಾರ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತಿದೆ. ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಕೆ.ಬಿ.ಜಯಕುಮಾರ್ ಅಂಡರ್ಪಾಸ್ ಕಾಮಗಾರಿ ಸಾಕಾರಗೊಳಿಸುವುದಕ್ಕೆ ಇರುವ ಸವಾಲುಗಳನ್ನು ಎತ್ತಿ ತೋರಿಸಿದರು.
* ಐಎಎಫ್ ಯಲಹಂಕ ಸ್ಟೇಷನ್ ಅಂಡರ್ಪಾಸ್: ಕಟ್ & ಕವರ್ ವಿಧಾನವನ್ನು ಬಳಸಿಕೊಂಡು 750 ಮೀಟರ್ ಅಂಡರ್ಪಾಸ್ ನಿರ್ಮಾಣ ಮಾಡಲು ಯೋಜಿಸಲಾಗಿದೆ. ಇದು ವಿಮಾನ ನಿಲ್ದಾಣಕ್ಕೆ ಹೋಗುವ ವಾಹನ ಚಾಲಕರಿಗೆ ಪ್ರಯೋಜನಕಾರಿ ಆಗಿದೆ.
* ಸದಾಹಳ್ಳಿ ಅಂಡರ್ಪಾಸ್: ಟೋಲ್ ಗೇಟ್ ಬಳಿಯಿರುವ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಇದರ ಪ್ರಸ್ತಾವನೆಯನ್ನು ಮುಂದಿರಿಸಿದೆ.
* ಸರ್ವಿಸ್ ರಸ್ತೆ ಪುನಶ್ಚೇತನ: ಯಲಹಂಕ ಪ್ರಯಾಣಿಕರ ಉತ್ತಮ ಸಂಚಾರ ಅನುಕೂಲಕ್ಕಾಗಿ ಅಲ್ಲಾಳಸಂದ್ರ ಮತ್ತು ಜಕ್ಕೂರು ಜಂಕ್ಷನ್ ನಡುವೆ ಮೆಟ್ರೋ ಕಾಮಗಾರಿಯಿಂದ ಸರ್ವಿಸ್ ರಸ್ತೆಗಳನ್ನು ಪುನಃಸ್ಥಾಪಿಸುವ ಪ್ರಸ್ತಾವನೆಯೂ ಇದೆ. ಅಲ್ಲದೆ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಹೆಬ್ಬಾಳದಲ್ಲಿ ಇವಿ ಚಾರ್ಜಿಂಗ್ ಸ್ಟೇಷನ್ ಆರಂಭಿಸಲು ಯೋಜಿಸಿದೆ.
ಕಂದಾಯ ಸಚಿವ ಕೃಷ್ಣ ಬೈರೇಗೌಡರ ನಿರ್ದೇಶನಕ್ಕೆ ಪ್ರತಿಕ್ರಿಯಿಸಿದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು, ಯಲಹಂಕದ ಕೆಫೆ ಕಾಫಿ ಡೇ ಬಳಿಯ ಹೆದ್ದಾರಿಯಂತಹ ಅಪಘಾತ ಪೀಡಿತ ಪ್ರದೇಶಗಳ ಸಮಸ್ಯೆಯನ್ನೂ ಬಗೆಹರಿಸುತ್ತದೆ. ಪ್ರಸ್ತಾವಿತ ಯೋಜನೆಗಳು ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಈ ನಿರ್ಣಾಯಕ ಮಾರ್ಗದಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಗುರಿಯನ್ನು ಹೊಂದಿವೆ ಎಂದು ಹೇಳಿದೆ.












Click it and Unblock the Notifications