ಕೆ.ಆರ್ ಪೇಟೆ ಉಪ ಚುನಾವಣೆ ಬಗ್ಗೆ ನಿಖಿಲ್ ಮಹತ್ವದ ಪ್ರತಿಕ್ರಿಯೆ
Recommended Video
ಬೆಂಗಳೂರು, ಆಗಸ್ಟ್ 05: ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮೈತ್ರಿ ಮುರಿದುಕೊಂಡಿದ್ದು, ಉಪ ಚುನಾವಣೆಯಲ್ಲಿ ಏಕಾಂಗಿಯಾಗಿ ಜೆಡಿಎಸ್ ಸ್ಪರ್ಧಿಸುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಘೋಷಿಸಿದ ಬಳಿಕ ಜೆಡಿಎಸ್ ಯುವಘಟಕದ ಮುಖ್ಯಸ್ಥ ನಿಖಿಲ್ ಕುಮಾರಸ್ವಾಮಿ ಅವರು ಉಪಚುನಾವಣೆ ಬಗ್ಗೆ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.
ಮುಂಬರುವ 17 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪ್ರತ್ಯೇಕವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ, ಕಣಕ್ಕಿಳಿಸಬೇಕಿದೆ. ಆದರೆ, ಕಾಂಗ್ರೆಸ್ ನಾಯಕರು ಮಾತ್ರ ಇನ್ನೂ ಮೈತ್ರಿ ಜೀವಂತವಾಗಿದೆ ಎಂದು ಹೇಳುತ್ತಿದ್ದಾರೆ.
ಉಪಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ: ಕುಮಾರಸ್ವಾಮಿ ಹೇಳಿದ್ದೇನು?
"ಜೆಡಿಎಸ್ ಕಾರ್ಯಕರ್ತರು ಮೈತ್ರಿ ಬೇಡವೆಂದು ಹೇಳಿದ್ದಾರೆ, 17 ಕ್ಷೇತ್ರದ ಉಪ ಚುನಾವಣೆಯಾಗಲಿ, 224 ಕ್ಷೇತ್ರಕ್ಕೂ ಚುನಾವಣೆ ನಡೆಯಲಿ ನಾವು ಏಕಾಂಗಿಯಾಗಿ ಸ್ಪರ್ಧಿಸಲು ಸಿದ್ಧ, ಅಧಿಕಾರ ಎಂದಿಗೂ ಶಾಶ್ವತವಲ್ಲ, ಜನರ ಪ್ರೀತಿ ಮುಖ್ಯ" ಎಂದು ಕುಮಾರಸ್ವಾಮಿ ಹೇಳಿದ್ದಾರೆ.
"ಕೈ- ತೆನೆ ಮೈತ್ರಿ ಖತಂ, ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ"
ಮೈತ್ರಿ ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಮುಂಬೈಗೆ ವಲಸೆ ಹೋಗಿದ್ದರು. ನಂತರ ಮೈತ್ರಿ ಸರ್ಕಾರ ಪತನವಾಗಿ, ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ನಡುವೆ ರಾಜೀನಾಮೆ ನೀಡಿದ್ದ 17 ಮಂದಿ ಶಾಸಕರನ್ನು ಈ ಹಿಂದಿನ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದಾರೆ.
ಹೀಗಾಗಿ, 17 ಕ್ಷೇತ್ರಗಳಿಗೆ ಮತ್ತೊಮ್ಮೆ ಚುನಾವಣೆ ನಡೆಯಬೇಕಿದೆ. ಕೆ.ಆರ್ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡ ಅನರ್ಹಗೊಂಡ ಬಳಿಕ ಉಪ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧಿಸುವ ಬಗ್ಗೆ ಸುದ್ದಿ ಹಬ್ಬಿದೆ. ಆದರೆ, ನಿಖಿಲ್ ಸುದ್ದಿಯನ್ನು ಅಲ್ಲಗೆಳೆದು ಪ್ರತಿಕ್ರಿಯೆ ನೀಡಿದ್ದಾರೆ.
ಆಕಾಂಕ್ಷಿಗಳ ಪಟ್ಟಿ ತಯಾರಿಸುವೆ ಎಂದ ನಿಖಿಲ್
"ಕೆ. ಆರ್ ಪೇಟೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನನ್ನ ಹೆಸರು ಕೇಳಿ ಬರುತ್ತಿದೆ, ಆದರೆ, ನಾನು ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ, ಕಾರ್ಯಕರ್ತರ ಸಭೆಯನ್ನು ಕರೆದು ಆಕಾಂಕ್ಷಿಗಳ ಪಟ್ಟಿ ತಯಾರಿಸಿ ಪಕ್ಷದ ವರಿಷ್ಠರಿಗೆ ನೀಡುತ್ತೇನೆ" ಎಂದು ಜೆಡಿಎಸ್ ಯುವಘಟಕದ ಮುಖ್ಯಸ್ಥ ನಿಖಿಲ್ ಕುಮಾರಸ್ವಾಮಿ ಅವರು ಯುವಘಟಕದ ಮುಖಂಡರು ಮತ್ತು ಕಾರ್ಯಕರ್ತರ ಸಭೆಗೂ ಮುನ್ನ ಹೇಳಿದರು.
ಚುನಾವಣೆಯಲ್ಲಿ ಈಗಾಗಲೇ ಸೋತಿದ್ದೇನೆ
ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ನಾನು ಸೋತಿದ್ದೇನೆ. ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದೇನೆ. ಕೆ.ಆರ್.ಪೇಟೆ ಉಪ ಚುನಾವಣೆಗೆ ನಾನು ಆಕಾಂಕ್ಷಿ ಅಲ್ಲ. ಕಾರ್ಯಕರ್ತರು ಒತ್ತಾಯ ಮಾಡುತ್ತಾರೆ. ಆದರೆ, ದೇವೇಗೌಡರ ಕುಟುಂಬದವರೇ ಸ್ಪರ್ಧೆ ಮಾಡಬೇಕೆಂಬ ಬಗ್ಗೆ ಒತ್ತಾಯ ಮಾಡುವುದು ಸರಿಯಲ್ಲ ಎಂದರು.
ಜೆಡಿಎಸ್ ಭದ್ರಕೋಟೆ ಉಳಿಸಿಕೊಳ್ಳಬೇಕಿದೆ.
ಜೆಡಿಎಸ್ ಭದ್ರಕೋಟೆಯಾಗಿರುವ ಕೆ. ಆರ್ ಪೇಟೆ ಉಳಿಸಿಕೊಳ್ಳಬೇಕಿದೆ. ನಮ್ಮಲ್ಲಿ ಸ್ಪರ್ಧಿಗಳಾಗಲು ಕಾರ್ಯಕರ್ತರು, ಆಕಾಂಕ್ಷಿಗಳು ತುಂಬಾ ಜನ ಇದ್ದಾರೆ. ಯುವಕರನ್ನು ಸಂಘಟಿಸುವುದು. ಸದಸ್ಯತ್ವ ಅಭಿಯಾನ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. 17 ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ನಾನು ಪಾದಯಾತ್ರೆ ಮಾಡುತ್ತೇನೆ ಎಂಬುದು ಊಹಾಪೋಹ. ಯಾವ ವಿಚಾರವಾಗಿ ಪಾದಯಾತ್ರೆ ಮಾಡುತ್ತೇವೆ ಎಂಬುದು ಮುಖ್ಯ ಎಂದರು.
ದೇವೇಗೌಡ್ರು ಪಕ್ಷ ಸಂಘಟನೆಗೆ ಸಾಕಷ್ಟು ದುಡಿಯುತ್ತಿದ್ದಾರೆ
ದೇವೇಗೌಡರು ಈ ವಯಸ್ಸಿನಲ್ಲೂ ಪಕ್ಷ ಸಂಘಟನೆಗೆ ಸಾಕಷ್ಟು ದುಡಿಯುತ್ತಿದ್ದಾರೆ. ಅವರು ನಮಗೆಲ್ಲಾ ಆದರ್ಶ ವ್ಯಕ್ತಿ. 7ನೇ ತಾರೀಖು ಅರಮನೆ ಮೈದಾನದಲ್ಲಿ ಪ್ರಾಮಾಣಿಕ ಕಾರ್ಯಕರ್ತರ ಸಭೆ ಇದೆ. ನಮ್ಮ ತಂದೆ ಭಾವನಾತ್ಮಕ ಜೀವಿ. 14 ತಿಂಗಳ ತಮ್ಮ ಆಡಳಿತದಲ್ಲಿ ಭ್ರಷ್ಟಾಚಾರ ರಹಿತವಾಗಿ ಸರ್ಕಾರ ನಡೆಸಿದ್ದಾರೆ. ರಾಜಕೀಯ ಘಟನೆಗಳು ಮುಗಿದ ಅಧ್ಯಾಯ. ಆ ಬಗ್ಗೆ ಮತ್ತೆ ಚರ್ಚೆ ಮಾಡುವುದು ಸರಿಯಲ್ಲ ಎಂದರು