ಮಂಡ್ಯದ ಜನತೆ ನಮ್ಮ ಕೈಬಿಟ್ಟಿಲ್ಲ: ನಿಖಿಲ್ ಕುಮಾರಸ್ವಾಮಿ
ಬೆಂಗಳೂರು, ಜನವರಿ 5: ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿರುವುದಕ್ಕೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಲೋಕಸಭೆ ಚುನಾವಣೆಯಲ್ಲಿ ನಾನು ಸೋತಿದ್ದರೂ ಮಂಡ್ಯದ ಜನತೆ ನಮ್ಮ ಕೈಬಿಟ್ಟಿಲ್ಲ ಎನ್ನುವುದಕ್ಕೆ ಇದು ಉದಾಹರಣೆ ಎಂದು ಅವರು ಹೇಳಿದ್ದಾರೆ.
ಜೆಡಿಎಸ್ ಪಕ್ಷ ಸಂಘಟನೆ ಸಂಬಂಧ ಬೆಂಗಳೂರಿನ ಜೆ.ಪಿ. ಭವನದಲ್ಲಿ ಸೋಮವಾರ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಪಕ್ಷದಲ್ಲಿನ ಒಂದಿಬ್ಬರು ಶಾಸಕರಲ್ಲಿ ಅಸಮಾಧಾನ ಇರುವುದು ನಿಜ. ಆದರೆ ಅಸಮಾಧಾನಿತ ಶಾಸಕರನ್ನು ಕೂಡ ನಾವು ಜತೆಯಲ್ಲಿ ಕೊಂಡೊಯ್ಯುತ್ತೇವೆ. ಜೆಡಿಎಸ್ನಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. 40 ವರ್ಷದ ಮೇಲಿನ ಕಾರ್ಯಕರ್ತರು ಮಾತೃ ಘಟಕದಲ್ಲಿ ಇರಬೇಕು ಎಂದರು.

ಜೆಡಿಎಸ್ ಬೇರೆ ಪಕ್ಷದೊಂದಿಗೆ ಮೈತ್ರಿ ಅಥವಾ ವಿಲೀನ ಮಾಡಿಕೊಳ್ಳುವುದಿಲ್ಲ. ನಮಗೆ ಅಂತಹ ಸ್ಥಿತಿ ಬಂದಿಲ್ಲ. ಬರುವುದೂ ಇಲ್ಲ. ನಾವು ಸ್ವಂತ ಬಲದ ಮೇಲೆಯೇ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತೇವೆ. ಎಲ್ಲ 30 ಜಿಲ್ಲೆಗಳ ಜೆಡಿಎಸ್ನ ಯುವ ನಾಯಕರು ಮುಕ್ತವಾಗಿ ಚರ್ಚೆ ನಡೆಸುವ ಮೂಲಕ ಮುಂದಿನ ವಿಧಾನಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಮುಂದೆ ಪಕ್ಷದ ಸಂಘಟನೆಯ ಚಟುವಟಿಕೆಗಳಲ್ಲಿ ನಿರಂತರ ಭಾಗಿಯಾಗಬೇಕು ಎಂದು ಸಲಹೆ ನೀಡಿದರು.












Click it and Unblock the Notifications