ಬೆಂಗಳೂರಿನ ಈ ಕಟ್ಟಡಗಳಿಗೆ ನೀರು, ವಿದ್ಯುತ್ ಪೂರೈಕೆ ಸ್ಥಗಿತದ ಆತಂಕ!
ಬೆಂಗಳೂರಲ್ಲಿ ಆಸ್ತಿ ಹಾಗೂ ಕಟ್ಟಡಗಳ ವಿಚಾರದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮತ್ತೊಂದು ಮಹತ್ವದ ಕ್ರಮವನ್ನು ತೆಗೆದುಕೊಂಡಿದೆ. ಬೆಂಗಳೂರಿನಲ್ಲಿ ವಸತಿ ಪ್ರಮಾಣಪತ್ರ ಇಲ್ಲದ ಆಸ್ತಿಗಳಿಗೆ ಇದೀಗ ಭಾರೀ ಸಂಕಷ್ಟ ಎದುರಾಗಿದೆ. ಸುಪ್ರೀಂಕೋರ್ಟ್ನ ನಿರ್ದೇಶನದಂತೆ ಹೊಸ ಕ್ರಮಕ್ಕೆ ಬಿಬಿಎಂಪಿ ಮುಂದಾಗಿದ್ದು, ಈ ಸಂಬಂಧ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬೆಸ್ಕಾಂ ಹಾಗೂ ಜಲಮಂಡಳಿಗೆ ಪತ್ರ ಬರೆದಿದ್ದಾರೆ. ಬೆಂಗಳೂರಿನಲ್ಲಿ ವಸತಿ ಪ್ರಮಾಣ ಪತ್ರ ಇಲ್ಲದ ಕಟ್ಟಡಗಳಿಗೆ ಸಂಬಂಧಿಸಿದಂತೆ ಯಾವ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎನ್ನುವ ಮಾಹಿತಿ ಇಲ್ಲಿದೆ.
ಬೆಂಗಳೂರಿನಲ್ಲಿ ಆಸ್ತಿ ಹಾಗೂ ಕಟ್ಟಡಗಳ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಈ ವರ್ಷದಲ್ಲಿ ಬಿಬಿಎಂಪಿ ಹಾಗೂ ಸರ್ಕಾರದಿಂದ ಹಲವು ಸುಧಾರಣೆಯ ಕ್ರಮಗಳನ್ನು ಅನುಸರಿಸಲಾಗಿದೆ. ಇ ಖಾತಾ, ಖಾತಾ ಇಲ್ಲದವರಿಗೆ ಖಾತಾ ಹಾಗೂ ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿರುವವರನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ತರುವುದು ಸೇರಿದಂತೆ ಹಲವು ಹೊಸ ಮಾದರಿಯನ್ನು ಪರಿಚಯಿಸಲಾಗಿದೆ. ಇದೀಗ ವಸತಿ ಪ್ರಮಾಣಪತ್ರಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನು ಬಿಬಿಎಂಪಿ ತೆಗೆದುಕೊಂಡಿದೆ.

ನಗರದಲ್ಲಿ ವಸತಿ ಪ್ರಮಾಣ ಪತ್ರ ಇಲ್ಲದ ಕಟ್ಟಡಗಳಿಗೆ ಯಾವುದೇ ಕಾರಣಕ್ಕೂ ವಿದ್ಯುತ್ ಸಂಪರ್ಕ, ನೀರು ಹಾಗೂ ಒಳಚರಂಡಿ ಸಂಪರ್ಕ ಕೊಡದಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ಗಿರಿನಾಥ್ ಅವರು ಬೆಸ್ಕಾಂ ಹಾಗೂ ಜಲಮಂಡಳಿಗೆ ಪತ್ರ ಬರೆದಿದ್ದಾರೆ. ನಗರದಲ್ಲಿ ಕಟ್ಟಡಗಳ ನಿರ್ಮಾಣದಲ್ಲಿ ಮಿತಿ ಮೀರಿದ ನಿಯಮ ಉಲ್ಲಂಘನೆಯನ್ನು ತಪ್ಪಿಸುವ ಉದ್ದೇಶದಿಂದ ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ ಬಿಬಿಎಂಪಿಯು ಅನಧಿಕೃತ ಅಥವಾ ನಿಯಮ ಉಲ್ಲಂಘನೆ ಮಾಡಿ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದು ಗುರುತಿಸಲಾಗಿರುವ ಎಲ್ಲಾ ಕಟ್ಟಡಗಳ ಮೇಲೂ ಈ ಕ್ರಮ ತೆಗೆದುಕೊಳ್ಳುವುದಕ್ಕೆ ತಿಳಿಸಲಾಗಿದೆ. ಈ ರೀತಿಯ ಕಟ್ಟಡಗಳಿಗೆ ತಾತ್ಕಾಲಿಕವಾಗಿ ಇಲ್ಲವೇ ಶಾಶ್ವತವಾಗಿ ವಿದ್ಯುತ್ ಪೂರೈಕೆ, ನೀರು ಹಾಗೂ ಒಳಚರಂಡಿ ಸಂಪರ್ಕಗಳನ್ನು ತಡೆಹಿಡಿಯಬೇಕು ಎಂದು ಬೆಸ್ಕಾಂ ಹಾಗೂ ಜಲಮಂಡಳಿಗೆ ಪತ್ರ ಬರೆದಿದ್ದಾರೆ.
ಇನ್ನು ಬೆಂಗಳೂರಿನಲ್ಲಿ ಕಟ್ಟಡಗಳಿಗೆ ಬೆಸ್ಕಾಂ ಹಾಗೂ ಜಲಮಂಡಳಿಯಿಂದ ತಾತ್ಕಾಲಿಕ ಸಂಪರ್ಕಗಳನ್ನು ಕೊಡುವ ಸಂದರ್ಭದಲ್ಲಿ ಕಟ್ಟಡಗಳು ಎ-ಖಾತಾದಲ್ಲಿ ಇವೆಯೇ ಹಾಗೂ ಮಂಜೂರಾದ ನಿಯಮಗಳನ್ನು ಪಾಲಿಸಲಾಗಿದೆಯೇ ಎನ್ನುವ ವಿಷಯಗಳನ್ನು ಪರಿಶೀಲನೆ ಮಾಡುವುದಕ್ಕೆ ಸೂಚನೆ ನೀಡಲಾಗಿದೆ. ಸುಪ್ರೀಂ ಕೋರ್ಟ್ನ ಆದೇಶವನ್ನು ತುಷಾರ್ ಗಿರಿನಾಥ್ ಅವರು ಉಲ್ಲೇಖಿಸಿದ್ದಾರೆ. ದೇಶದ ಯಾವುದೇ ಸ್ಥಳೀಯ ಸಂಸ್ಥೆಗಳು ಅನಧಿಕೃತ ಕಟ್ಟಡಗಳ ವಿರುದ್ಧ ಕ್ರಮ ತೆಗೆದುಕೊಳ್ಳುವುದಕ್ಕೆ ಮನವಿ ಮಾಡಿದ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಅದರ ಅಧಿಕಾರಿಗಳು ಸಹಕಾರ ಕೊಡಬೇಕು ಒಂದೊಮ್ಮೆ ನಿರ್ಲಕ್ಷ್ಯ ತೋರಿದರೆ ಇಲ್ಲವೇ ವಿಳಂಬ ನೀತಿ ಅನುಸರಿಸಿದರೆ. ಆಯಾ ಇಲಾಖೆಯ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳುವುದಕ್ಕೆ ಅವಕಾಶ ಇದೆ ಎಂದೂ ಹೇಳಿದ್ದಾರೆ.
ಕಾರಣವೇನು: 2024ನೇ ಸಾಲಿನ ಅಕ್ಟೋಬರ್ನಲ್ಲಿ ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ 8 ಜನ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಅನಧಿಕೃತ ಕಟ್ಟಡಗಳ ಸರ್ವೇಯನ್ನು ಮಾಡಲು ಬಿಬಿಎಂಪಿಗೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಅವರು ಸೂಚನೆ ನೀಡಿದ್ದರು. ಆದರೆ, ಈ ವಿಷಯದಲ್ಲಿ ಮಹತ್ವದ ಬೆಳವಣಿಗೆಗಳು ಆಗಿಲ್ಲ. ಇದೀಗ ಜಲಮಂಡಳಿ ಹಾಗೂ ಬೆಸ್ಕಾಂ ಸಹಕಾರವನ್ನು ಬಿಬಿಎಂಪಿ ಕೇಳಿದೆ.












Click it and Unblock the Notifications