ರಾಜ್ಯ ಸಚಿವ ಸಂಪುಟ ವಿಸ್ತರಣೆ: "ದೇವರಾಣೆಗೂ ಗೊತ್ತಿಲ್ಲ ಗುರುವೇ"
ಬೆಂಗಳೂರು, ಜನವರಿ.14: ರಾಜ್ಯ ಸಚಿವ ಸಂಪುಟ ವಿಸ್ತರಣೆ ಯಾವಾಗ ಆಗುತ್ತೋ ಏನೋ ಆ ದೇವರೇ ಬಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಬೆಂಗಳೂರು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ತಮಗಂತೂ ಉತ್ತರ ಗೊತ್ತಿಲ್ಲ ಎಂದು ಹೇಳಿದರು. ಯಾರಿಗೆ ಯಾವ ಖಾತೆ, ಸಂಪುಟ ವಿಸ್ತರಣೆ ಯಾವಾಗ ಎಂಬುದರ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನೇ ಕೇಳಬೇಕು ಎಂದು ಹೇಳಿದರು.
ಇನ್ನು, ಸಚಿವ ಸಂಪುಟ ವಿಸ್ತರಣೆ ಹಾಗೂ ಸಚಿವ ಸ್ಥಾನ ಹಂಚಿಕೆ ಕುರಿತು ನಿಮಗೆ ಮಾಹಿತಿ ಇಲ್ಲವೇ ಎಂದಾಗ ದೇವರಾಣೆಗೂ ನನಗಂತೂ ಗೊತ್ತಿಲ್ಲ ಗುರು ಎಂದು ಡಿಫರೆಂಟ್ ಆಗಿ ಉತ್ತರಿಸಿದರು.

ಸಂಕ್ರಾಂತಿ ಬಳಿಕ ಸಂಪುಟ ವಿಸ್ತರಣೆಗೆ ಮುಹೂರ್ತ?:
ರಾಜ್ಯದಲ್ಲಿ ನಡೆದ ವಿಧಾನಸಭಾ ಉಪ ಚುನಾವಣೆ ಬಳಿಕ ಗೆದ್ದ ಶಾಸಕರಿಗೆಲ್ಲ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈಗಾಗಲೇ ಭರವಸೆ ನೀಡಿದ್ದಾರೆ. ಆದರೆ, ಯಾವ ಶಾಸಕರಿಗೆ ಯಾವ ಸಚಿವ ಸ್ಥಾನ ನೀಡಬೇಕು ಎಂಬುದರ ಬಗ್ಗೆ ಸಾಕಷ್ಟು ಗೊಂದಲಗಳಿವೆ.
ಇನ್ನು, ಡಿಸಿಎಂ ಸ್ಥಾನಕ್ಕಾಗಿ ಕೆಲವರು ಕಸರತ್ತು ನಡೆಸುತ್ತಿದ್ದಾರೆ. ಮತ್ತೊಂದು ಡಿಸಿಎಂ ಸ್ಥಾನ ಸೃಷ್ಟಿಸಬೇಕೇ ಬೇಡವೇ ಎಂಬುದರ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಇದರ ಮಧ್ಯೆ ಜನವರಿ.19ರ ನಂತರದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.












Click it and Unblock the Notifications