ಲೋಡ್ ಶೆಡ್ಡಿಂಗ್ ಮಾಡೋಲ್ಲ, ಸಚಿವರ ಭರವಸೆ
ಬೆಂಗಳೂರು, ಏ. 23 : ಬೇಸಿಗೆಯಲ್ಲಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ. ಕೆಲವು ತಾಂತ್ರಿಕ ಕಾರಣಗಳಿಂದಾಗಿ ನಗರಗಳಲ್ಲಿ ಒಂದೆರಡು ಗಂಟೆ ವಿದ್ಯುತ್ ಕಡಿತವಾಗುತ್ತಿದೆ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿನ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಜಾರಿಗೊಳಿಸುವುದಿಲ್ಲ. ಅಗತ್ಯ ಪ್ರಮಾಣದಲ್ಲಿ ವಿದ್ಯುತ್ ಉತ್ಪಾದನೆ ಯಾಗುತ್ತಿದೆ ಎಂದು ಅವರು ಹೇಳಿದರು. ನಗರ ಪ್ರದೇಶದಲ್ಲಿ 24 ಗಂಟೆ, ಗ್ರಾಮೀಣ ಪ್ರದೇಶದಲ್ಲಿ 18 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಬೇಸಿಗೆಯಲ್ಲಿ ಕೃಷಿ ಚಟುವಟಿಕೆ ಕಡಿಮೆಯಾಗಿರುವುದರಿಂದ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಬೇಡಿಕೆ ಕೂಡ ಇಳಿಕೆಯಾಗಿದೆ. ಮಾರ್ಚ್ ಕೊನೆಯ ವಾರದಲ್ಲಿ ಮತ್ತು ಏಪ್ರಿಲ್ ತಿಂಗಳಲ್ಲಿ 2-3 ದಿನ ಮಾತ್ರ ವಿದ್ಯುತ್ ಖರೀದಿಸಲಾಗಿದ್ದು, ಉಳಿದಂತೆ ರಾಜ್ಯದಲ್ಲಿ ಬೇಡಿಕೆಗೆ ಅನುಗುಣವಾಗಿ ವಿದ್ಯುತ್ ಉತ್ಪಾದನೆ ಯಾಗುತ್ತಿದೆ ಎಂದರು. [ಮೇಕೆದಾಟು ಯೋಜನೆ ಕೈ ಬಿಟ್ಟ ಸರ್ಕಾರ]
ಜಲ ವಿದ್ಯುತ್ ಉತ್ಪಾದಿಸುತ್ತಿರುವ ಜಲಾಶಯಗಳಲ್ಲಿ ಇನ್ನೂ 70 ದಿನಗಳ ವಿದ್ಯುತ್ ಉತ್ಪಾದನೆಗೆ ಸಾಕಾಗುವಷ್ಟು ನೀರಿದೆ. ಜಲವಿದ್ಯುತ್ ಸ್ಥಾವರಗಳಲ್ಲಿ 208 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಬೇಡಿಕೆ 168 ದಶಲಕ್ಷ ಯೂನಿಟ್ ಮಾತ್ರ ಇದೆ. ಆದ್ದರಿಂದ ಲೋಡ್ ಶೆಡ್ಡಿಂಗ್ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು. [ಕಾದಿದೆ ವಿದ್ಯುತ್ ದರ ಏರಿಕೆ ಶಾಕ್]
ಮೇಕೇದಾಟು ಯೋಜನೆ ಕೈ ಬಿಟ್ಟಿಲ್ಲ : ವಿದ್ಯುತ್ ಉತ್ಪಾದನೆಗಾಗಿ ಮೇಕೆದಾಟು ಯೋಜನೆ ಜಾರಿಗೊಳಿಸಿ ರಾಜ್ಯದ ಹಿತವನ್ನು ಕಾಪಾಡಲಾಗುತ್ತದೆ. ರಾಜಕೀಯ ಕಾರಣಕ್ಕಾಗಿ ಮೇಕೆದಾಟು ಯೋಜನೆ ಕೈಬಿಡಲಾಗಿದೆ ಎಂಬ ಮಾಜಿ ಸಿಎಂ ಸದಾನಂದಗೌಡರ ಹೇಳಿಕೆ ಅರ್ಥಹೀನವಾದದ್ದು, ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಗೆ ಮೇಕೆದಾಟು ಯೋಜನೆ ಅಗತ್ಯವಾದರೆ ಅದನ್ನು ಅನುಷ್ಠಾನ ಮಾಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದರು.
ಸರ್ಕಾರದ ಪಾತ್ರವಿಲ್ಲ : ಮೇ 16ರ ನಂತರ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಮಾಡಲು ಕರ್ನಾಟಕ ವಿದ್ಯುಚ್ಚಕ್ತಿ ನಿಯಂತ್ರಣ ಆಯೋಗದ ತೀರ್ಮಾನಿಸಿದೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದು ವಿದ್ಯುತ್ ಸರಬರಾಜು ಕಂಪನಿಗಳ ಬೇಡಿಕೆಯಾಗಿದೆ. ವಿದ್ಯುತ್ ದರ ಏರಿಕೆ ಮಾಡುವ ವಿಚಾರದಲ್ಲಿ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಸಚಿವರು ತಿಳಿಸಿದರು.











Click it and Unblock the Notifications