Footpath parking : ಬೆಂಗಳೂರಲ್ಲಿ ವಾಹನ ಪಾರ್ಕಿಂಗ್ಗೆ ಹೊಸ ನಿಯಮ
ಬೆಂಗಳೂರು, ಡಿಸೆಂಬರ್ 19; ಬೆಂಗಳೂರು ನಗರದಲ್ಲಿ ವಾಹನಗಳ ಪಾರ್ಕಿಂಗ್ ಮಾಡುವುದು ಬಹುದೊಡ್ಡ ಸಮಸ್ಯೆ. ಪಾರ್ಕಿಂಗ್ ವಿಚಾರ ಹಲವು ಬಾರಿ ಜಗಳಕ್ಕೂ ಸಹ ಕಾರಣವಾಗುತ್ತದೆ.
ನಗರದಲ್ಲಿ ವಾಹನಗಳ ಪಾರ್ಕಿಂಗ್ ವಿಚಾರದಲ್ಲಿ ಹೊಸ ಸುತ್ತೋಲೆಯೊಂದು ಹೊರಬಿದ್ದಿದೆ. ಪಾದಚಾರಿ ಮಾರ್ಗದಲ್ಲಿ ವಾಹನಗಳ ಪಾರ್ಕಿಂಗ್ ಮಾಡಿದರೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.
ಸಂಚಾರ ವಿಭಾಗದ ವಿಶೇಷ ಪೊಲೀಸ್ ಆಯುಕ್ತ ಡಾ. ಎಂ. ಎ. ಸಲೀಂ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ನಗರದಲ್ಲಿ ಸಂಚಾರ ವ್ಯವಸ್ಥೆ ಸುಧಾರಣೆಗೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿರುವ ಆಯುಕ್ತರು ಈಗ ಪಾದಚಾರಿ ಮಾರ್ಗದಲ್ಲಿ ವಾಹನ ನಿಲ್ಲಿಸುವುದನ್ನು ತಡೆಯಲು ಕ್ರಮ ಕೈಗೊಂಡಿದ್ದಾರೆ.
ಪಾದಚಾರಿ ಮಾರ್ಗದಲ್ಲಿ ವಾಹನ ಚಲಾವಣೆ ಮಾಡಿದರೆ, ವಾಹನ ನಿಲ್ಲಿಸಿದರೆ ಕ್ರಮ ಕೈಗೊಳ್ಳಲು ಅವಕಾಶವಿದೆ. ಎಲ್ಲಾ ಪೊಲೀಸ್ ಇನ್ಸ್ಪೆಕ್ಟರ್ಗಳು ಕ್ರಮ ಕೈಗೊಳ್ಳಬೇಕು ಎಂದು ಸುತ್ತೋಲೆಯಲ್ಲಿ ನಿರ್ದೇಶನ ನೀಡಲಾಗಿದೆ.

ವಾಹನಗಳನ್ನು ಪಾದಚಾರಿ ಮಾರ್ಗದಲ್ಲಿ ನಿಲ್ಲಿಸುತ್ತಿರುವುದರಿಂದ ಜನರ ಸಂಚಾರಕ್ಕೆ ತೊಂದರೆ ಆಗುತ್ತಿದೆ. ವೃದ್ಧರು, ಮಕ್ಕಳು ಸಂಚಾರ ನಡೆಸಲು ಕಷ್ಟವಾಗುತ್ತಿದೆ. ಆದ್ದರಿಂದ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.
ಪಾದಚಾರಿ ಮಾರ್ಗದಲ್ಲಿ ಸಂಚಾರ ನಡೆಸುವುದು, ವಾಹನ ನಿಲ್ಲಿಸುವುದು ಮಾಡಿದರೆ ಕ್ರಮ ಕೈಗೊಳ್ಳಬೇಕು. ಮುಂದಿನ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡಬೇಕು ಎಂದು ಇನ್ಸ್ಪೆಕ್ಟರ್ಗಳಿಗೆ ಮಾಹಿತಿ ನೀಡಲಾಗಿದೆ.
2021ರಲ್ಲಿ ಬೆಂಗಳೂರು ನಗರದ ಜಯನಗರ ಪ್ರದೇಶದಲ್ಲಿ ಪಾದಚಾರಿ ವಾಹನಗಳ ಮೇಲೆ ಪಾರ್ಕಿಂಗ್ ಮಾಡಲಾಗಿದೆ ಎಂದು ಲೆಟ್ಜ್ ಕಿಟ್ ಫೌಂಡೇಷನ್ ಕರ್ನಾಟಕ ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆ ಮಾಡಿತ್ತು. ಹೈಕೋರ್ಟ್ ಪಾದಚಾರಿ ಮಾರ್ಗ ಅತಿಕ್ರಮಣ ಮಾಡಿದ್ದರೆ ಕೂಡಲೇ ಕ್ರಮ ಕೈಗೊಳ್ಳಿ ಎಂದು ಬಿಬಿಎಂಪಿಗೆ ಸೂಚನೆ ನೀಡಿತ್ತು.
ಡಾ. ಎಂ. ಎ. ಸಲೀಂ ಕೆಲವು ದಿನಗಳ ಹಿಂದೆ ಮಾತನಾಡಿ, "ಪಾದಚಾರಿ ಮಾರ್ಗದಲ್ಲಿ ವಾಹನ ಪಾರ್ಕಿಂಗ್, ಫುಟ್ಪಾತ್ ಅತಿಕ್ರಮಣ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಫುಟ್ಪಾತ್ನಲ್ಲಿ ವಾಹನ ನಿಲ್ಲಿಸುವವರ ವಿರುದ್ಧ ಭಾರತೀಯ ದಂಡಸಂಹಿತೆಯ 283ನೇ ಸೆಕ್ಷನ್ ಅಡಿ ದೂರು ದಾಖಲಿಸುತ್ತಿದ್ದೇವೆ" ಎಂದು ಹೇಳಿದ್ದರು.
ಡಿಸೆಂಬರ್ ತಿಂಗಳಿನಲ್ಲಿ ಪಾದಚಾರಿ ಮಾರ್ಗದಲ್ಲಿ ವಾಹನ ನಿಲ್ಲಿಸುವವರ ವಿರುದ್ಧ ಪೊಲೀಸರು ದಂಡ ಪ್ರಯೋಗ ಆರಂಭಿಸಿದ್ದಾರೆ. ಇದುವರೆಗೂ ಸುಮಾರು 300 ಪ್ರಕರಣ ದಾಖಲು ಮಾಡಲಾಗಿದೆ.












Click it and Unblock the Notifications