ಕರ್ನಾಟಕ ಬಂದ್; ಟೌನ್ ಹಾಲ್ ಮುಂದೆ ಪ್ರತಿಭಟನೆಗೆ ಅನುಮತಿ ಇಲ್ಲ
ಬೆಂಗಳೂರು, ಫೆಬ್ರವರಿ 12 : ಕರ್ನಾಟಕ ಸಂಘಟನೆಗಳ ಒಕ್ಕೂಟ ಫೆಬ್ರವರಿ 13ರಂದು ಕರ್ನಾಟಕ ಬಂದ್ಗೆ ಕರೆ ನೀಡಿದೆ. ಆದರೆ, ಬೆಂಗಳೂರಿನ ಟೌನ್ ಹಾಲ್ ಮುಂದೆ ಪ್ರತಿಭಟನೆ ನಡೆಸುವಂತಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಾಗೇಶ್ ಗುರುವಾರ ಕರ್ನಾಟಕ ಬಂದ್ಗೆ ಕರೆ ಕೊಟ್ಟಿದ್ದಾರೆ. 600ಕ್ಕೂ ಅಧಿಕ ಸಂಘಟನೆಗಳು ಬಂದ್ಗೆ ಬೆಂಬಲ ಕೊಟ್ಟಿದ್ದು, ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಬಂದ್ ನಡೆಯಲಿದೆ.
ಗುರುವಾರ ಬೆಂಗಳೂರಿನ ಟೌನ್ ಹಾಲ್ನಿಂದ ಫ್ರೀಡಂ ಪಾರ್ಕ್ ತನಕ ಬೃಹತ್ ಪ್ರತಿಭಟನಾ ಜಾಥಾ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಬೆಂಗಳೂರು ಪೊಲೀಸರು ಟೌನ್ ಹಾಲ್ ಮುಂದೆ ಪ್ರತಿಭಟನೆ ನಡೆಸಲು ಅವಕಾಶವನ್ನು ನೀಡಿಲ್ಲ.

ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ತನಕ ಪ್ರತಿಭಟನಾ ಜಾಥಾ ನಡೆಸಬಹುದು. ಆದರೆ, ಟೌನ್ ಹಾಲ್ನಿಂದ ಪ್ರತಿಭಟನೆ ಆರಂಭಿಸಲು ಅವಕಾಶವಿಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ ಸಂಘಟನೆಗಳ ಒಕ್ಕೂಟ ರೇಸ್ ಕೋರ್ಸ್ ರಸ್ತೆಯ ಮೌರ್ಯ ಸರ್ಕಲ್ ಬಳಿ ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದೆ. ಈ ಪ್ರತಿಭಟನೆ ಗುರುವಾರ 100ನೇ ದಿನಕ್ಕೆ ಕಾಲಿಡುತ್ತಿದೆ. ಆದ್ದರಿಂದ, ಕರ್ನಾಟಕ ಬಂದ್ ಕರೆ ನೀಡಲಾಗಿದೆ.
600ಕ್ಕೂ ಅಧಿಕ ಸಂಘಟನೆಗಳು ಗುರುವಾರದ ಕರ್ನಾಟಕ ಬಂದ್ಗೆ ಬೆಂಬಲ ನೀಡಿವೆ. ಆಟೋ ಮತ್ತು ಕ್ಯಾಬ್ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಸರ್ಕಾರಿ ಬಸ್ ಸಂಚಾರ ಸ್ಥಗಿತಗೊಳ್ಳುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.












Click it and Unblock the Notifications