ಪತ್ರ ವಿವಾದಕ್ಕೆ ತೆರೆಎಳೆದ ಪರಮೇಶ್ವರ್
ಬೆಂಗಳೂರು, ಅ.10 : ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗಿದ್ದ ಪತ್ರದ ಗೊಂದಲಕ್ಕೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತೆರೆ ಎಳೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯವೈಖರಿ ಬಗ್ಗೆ ಯಾವ ಶಾಸಕರು ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಸಾಮಾಜಿಕ ತಾಣಗಳಲ್ಲಿ ಕಾಂಗ್ರೆಸ್ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಕೆಲ ಕಾಂಗ್ರೆಸ್ ಶಾಸಕರು ಹೈಕಮಾಂಡ್ಗೆ ಪತ್ರ ಬರೆದಿದ್ದಾರೆ ಎಂಬುದು ವಿರೋಧ ಪಕ್ಷಗಳು ಹುಟ್ಟುಹಾಕಿರುವ ವದಂತಿ ಎಂದು ಪರಮೇಶ್ವರ್ ಹೇಳಿದರು.

ಮುಖ್ಯಮಂತ್ರಿ ವಿರುದ್ಧ ಪಕ್ಷದ ಯಾವುದೇ ಶಾಸಕರು ಹೈಕಮಾಂಡ್ಗೆ ಪತ್ರ ಬರೆದಿಲ್ಲ. ಸರ್ಕಾರದಲ್ಲಾಗಲಿ, ಪಕ್ಷದಲ್ಲಾಗಲಿ ಯಾವುದೇ ಗೊಂದಲ ಇಲ್ಲ. ಕಾಂಗ್ರೆಸ್ ಪಕ್ಷದ ಎಲ್ಲಾ 122 ಶಾಸಕರ ಬೆಂಬಲವೂ ಸಿದ್ದರಾಮಯ್ಯ ಅವರಿಗಿದೆ ಎಂದರು.
ದಾಖಲೆ ಪರಿಶೀಲಿಸಿದ್ದೇವೆ : ಸಚಿವ ಸಂತೋಷ್ ಲಾಡ್ ವಿರುದ್ಧ ಕೇಳಿಬಂದಿರುವ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಆರೋಪಗಳಲ್ಲಿ ಹುರುಳಿಲ್ಲ. ಲಾಡ್ ವಿರುದ್ಧ ಬಿಡುಗಡೆ ಮಾಡಲಾಗಿರುವ ಎಲ್ಲಾ ದಾಖಲೆಗಳನ್ನು ತಾವು ಮತ್ತು ಸಿದ್ದರಾಮಯ್ಯ ಪರಿಶೀಲನೆ ನಡೆಸಿದ್ದೇವೆ. (ಲಾಡ್ ಮತ್ತಷ್ಟು ಸಂಕಷ್ಟ ತಂದ ಹಿರೇಮಠ್)
ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್. ಹಿರೇಮಠ್ ಸಮರ್ಪಕ ಅಧ್ಯಯನ ನಡೆಸದೆ ಸಂತೋಷ್ ಲಾಡ್ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಹೊಸದಾಗಿ ಅವರು ಬಿಡುಗಡೆ ಮಾಡಿದ್ದಾರೆ ಎನ್ನಲಾದ ದಾಖಲೆಗಳನ್ನು ನೀಡಿದರೆ ಅವುಗಳನ್ನು ಪರಿಶೀಲಿಸುತ್ತೇವೆ ಎಂದು ಹೇಳಿದರು.
ಕೆಪಿಸಿಸಿ ಮತ್ತು ಸರ್ಕಾರದ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಪಕ್ಷದ ಯಾವೊಬ್ಬ ಶಾಸಕರೂ ಮುಖ್ಯಮಂತ್ರಿಯವರ ಬಗ್ಗೆ ಅಸಮಾಧಾನ ಗೊಂಡಿಲ್ಲ ಎಂದು ಪರಿಮೇಶ್ವರ್ ಸ್ಪಷ್ಟನೆ ನೀಡಿದರು. (ಸಿಎಂ ಸಿದ್ದು ವಿರುದ್ಧ ಬಂಡೆದ್ದ ಮೂಲ ಕಾಂಗ್ರೆಸ್ಸಿಗರು)
ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಡಿ.ಕೆ.ಶಿವಕುಮಾರ್ ಸಹ ಸಿದ್ದರಾಮಯ್ಯ ವಿರುದ್ಧವಾಗಿ ಯಾವ ಶಾಸಕರು ಪತ್ರ ಬರೆದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಸದ್ಯ ಕೆಪಿಸಿಸಿಯೂ ಈ ಕುರಿತು ಸ್ಪಷ್ಟನೆ ನೀಡಿದೆ.












Click it and Unblock the Notifications