ವಾರಾಂತ್ಯ ಬೆಂಗಳೂರಿನ ಚರ್ಚ್ ಸ್ಟ್ರೀಟ್ನಲ್ಲಿ ವಾಹನ ಸಂಚಾರ ನಿಷೇಧ
ಬೆಂಗಳೂರು, ನವೆಂಬರ್ 07: ಬೆಂಗಳೂರಿನ ಚರ್ಚ್ ಸ್ಟ್ರೀಟ್ನಲ್ಲಿ ವಾರಾಂತ್ಯದಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಈ ಮೊದಲು ಕಬ್ಬನ್ ಪಾರ್ಕ್ನಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ವಾಹನ ಸಂಚಾರವನ್ನು ನಿಷೇಧಿಸಲಾಗಿತ್ತು.
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಯು ಮಾಲಿನ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರವನ್ನು ವೀಕೆಂಡ್ನಲ್ಲಿ ಎರಡು ದಿನಗಳ ಕಾಲ ನಿಷೇಧಿಸಲಾಗಿದೆ.
ಚರ್ಚ್ ಸ್ಟ್ರೀಟ್ನಲ್ಲಿ ಇಂದಿನಿಂದ 2012ರ ಫೆಬ್ರವರಿ ಅಂತ್ಯದವರೆಗೂ ವಾರಾಂತ್ಯದಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಚರ್ಚ್ ಸ್ಟ್ರೀಟ್ನಲ್ಲಿ ಇಂದು ಕ್ಲೀನ್ ಏರ್ ಸ್ಟ್ರೀಟ್ ಯೋಜನೆಯನ್ನು ಉದ್ಘಾಟನೆ ಮಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ದೇಶದಲ್ಲೇ ಮೊದಲ ಬಾರಿಗೆ ಪ್ರಾಯೋಗಿಕವಾಗಿ ಬೆಂಗಳೂರಿನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ.
ನಗರ ಭೂಸಾರಿಗೆ ನಿರ್ದೇಶನಾಲಯ ಹಾಗೂ ಯಕೆ ಸಹಭಾಗಿತ್ವದಲ್ಲಿ ಕ್ಲೀನ್ ಏರ್ ಸ್ಟ್ರೀಟ್ ಉದ್ಘಾಟಿಸಲಾಗಿದೆ. 2021ರ ಫೆಬ್ರವರಿ 21ವರೆಗೂ ಈ ಪೈಲಟ್ ಪ್ರಾಜೆಕ್ಟ್ ಜಾರಿಯಲ್ಲಿರುತ್ತದೆ. ಶುದ್ಧಗಾಳಿ, ನೀರು ಪ್ರತಿಯೊಬ್ಬ ನಾಗರೀಕನ ಹಕ್ಕು.
ಬೆಂಗಳೂರಿನಲ್ಲಿ ವೈಯಕ್ತಿಕ ವಾಹನಗಳ ಸಂಖ್ಯೆ 80 ಲಕ್ಷ ದಾಟಿದೆ. ಪ್ರತಿ ವರ್ಷ ಇದು ಶೇ.10ರಷ್ಟು ಏರಿಕೆಯಾಗುತ್ತಿದೆ. ಪರಿಸರ ಸಂರಕ್ಷಣೆಗೆ ಯುವ ಜನತೆ ಕೈ ಜೋಡಿಸುತ್ತಿರುವುದು ಆಶಾವಾದ ಮೂಡಿಸಿದೆ ಎಂದು ಹೇಳಿದ್ದಾರೆ.
ವಾರಾಂತ್ಯದ ಶನಿವಾರ ಮತ್ತು ಭಾನುವಾರ ಎರಡು ದಿನ ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ವಾರಾಂತ್ಯದ ಶನಿವಾರ ಮತ್ತು ಭಾನುವಾರ ಕೇವಲ ಪಾದಚಾರಿಗಳಿಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಲಾಗಿದೆ. ವಾಯು ಮಾಲಿನ್ಯ ತಡೆಗಟ್ಟುವ ಸಲುವಾಗಿ ಕ್ಲೀನ್ ಏರ್ ಸ್ಟ್ರೀಟ್ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಕ್ಲೀನ್ ಏರ್ ಸ್ಟ್ರೀಟ್ ಯೋಜನೆಗೆ ಚರ್ಚ್ ಸ್ಟ್ರೀಟ್ ರಸ್ತೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.
ಈ ವೇಳೆ ಮಾತನಾಡಿದ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ನಾಲ್ಕು ತಿಂಗಳ ಅವಧಿಯಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದೆ. ಪ್ರಾಯೋಗಿಕವಾಗಿ ಇದನ್ನು ಚರ್ಚ್ ಸ್ಟ್ರೀಟ್ನಲ್ಲಿ ಜಾರಿಗೆ ತರಲಾಗಿದೆ.
ತುರ್ತು ಸೇವೆ ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಸೈಕಲೀಕರಣ, ಪಾದಚಾರಿಗಳ ಸಂಚಾರಕ್ಕೆ ಉತ್ತೇಜನ ನೀಡಲು ಇದನ್ನು ಮಾಡಲಾಗಿದೆ. ಆರೋಗ್ಯ ವೃದ್ಧಿ ಹಾಗೂ ಮಾಲಿನ್ಯ ತಡೆಗೆ ಈ ಪ್ರಯೋಗ ಯಶಸ್ವಿಯಾಗಲಿ ಎಂದಿದ್ದಾರೆ.