ಸಾವಿನ ವಿಷಯದಲ್ಲಿ ರಾಜಕೀಯ ಮಾಡಬೇಡಿ: ಡಿಕೆಶಿಗೆ ಸುಧಾಕರ್ ತಿರುಗೇಟು
ಬೆಂಗಳೂರು, ಆಗಸ್ಟ್ 21: ಕೋವಿಡ್ ಸಂಕಷ್ಟದ ಈ ಸಮಯದಲ್ಲಿ ವೈದ್ಯರ ಸಮಸ್ಯೆಗಳೇನು ಎಂಬುದು ಸರ್ಕಾರಕ್ಕೆ ಗೊತ್ತಿದೆ. ವೈದ್ಯರ ಸಮಸ್ಯೆಗಳ ಬಗ್ಗೆ ಸಿಎಂ ಜೊತೆ ಚರ್ಚಿಸಲಾಗಿದೆ. ಆದರೆ ಸಾವಿನ ವಿಷಯದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಾಕೀತು ಮಾಡಿದ್ದಾರೆ.
Recommended Video
"ದೈವಾಧೀನರಾದ ಡಾ.ನಾಗೇಂದ್ರ ಅವರ ಬಗ್ಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರಿಗೆ ಹೆಚ್ಚಿನ ಮಾಹಿತಿ ಇಲ್ಲ. ಅವರು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಡಾ.ನಾಗೇಂದ್ರ ಅವರ ಸಾವಿನ ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಿ 7 ದಿನಗಳೊಳಗೆ ವರದಿ ನೀಡಲು ಮೈಸೂರಿನ ಪ್ರಾದೇಶಿಕ ಆಯುಕ್ತರನ್ನು ನಿಯೋಜಿಸಲಾಗಿದೆ. ಆದರೆ ಶಿವಕುಮಾರ್ ಅವರು ಸಾವಿನ ಮನೆಯಲ್ಲಿ ರಾಜಕೀಯ ಮಾಡುವ ಮೂಲಕ ವಿಕೃತಿ ತೋರಿಸಿದ್ದಾರೆ" ಎಂದು ಸಚಿವರು ಹೇಳಿದ್ದಾರೆ.
ಡಾ. ನಾಗೇಂದ್ರ ಆತ್ಮಹತ್ಯೆಗೆ ಕಾರಣವೇನು? ಇಲ್ಲಿದೆ ಸಂಪೂರ್ಣ ವಿವರ!
"ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಡಾ.ನಾಗೇಂದ್ರ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಧನ ಹಾಗೂ ಮೃತರ ಪತ್ನಿಗೆ ಸಬ್ ರಿಜಿಸ್ಟ್ರಾರ್ ಉದ್ಯೋಗ ನೀಡಲು ಕ್ರಮ ಕೈಗೊಂಡಿದ್ದಾರೆ. ಆದರೆ ಈ ಘಟನೆಯನ್ನು ಕೆಲವರು ಬೇರೆ ಕಾರಣಗಳಿಗೆ ಬಳಸಿಕೊಳ್ಳುತ್ತಿದ್ದಾರೆ" ಎಂದು ಸಚಿವರು ಹೇಳಿದ್ದಾರೆ.
ಬಿಜೆಪಿ ವರಿಷ್ಠರ ಭೇಟಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಸಚಿವ ಡಾ.ಕೆ.ಸುಧಾಕರ್ ಭೇಟಿಯಾಗಿ ಮಾತುಕತೆ ನಡೆಸಿದರು.
''ಕೋವಿಡ್ ನಿಯಂತ್ರಣಕ್ಕೆ ತರಲು ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಬಿ.ಎಲ್.ಸಂತೋಷ್ ಅವರಿಗೆ ಮಾಹಿತಿ ನೀಡಿದ್ದೇನೆ. ದಿನಕ್ಕೆ 1 ಲಕ್ಷದಷ್ಟು ಕೊರೊನಾ ಪರೀಕ್ಷೆ ಮಾಡಿಸಲು ಕ್ರಮ ಕೈಗೊಳ್ಳಿ ಎಂದು ಅವರು ಸಲಹೆ ನೀಡಿದ್ದಾರೆ'' ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಶ್ರೀ ಡಿಕೆ ಶಿವಕುಮಾರ್ ಅವರೇ, ನೀವು ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದಾಗ ಧರ್ಮ-ಸಂಸ್ಕೃತಿಯ ಪ್ರತೀಕ, ಪವಿತ್ರವಾದ ಮನಸ್ಸುಳ್ಳ ಆದಿಚುಂಚನಗಿರಿ, ರಂಭಾಪುರಿ, ಸಿದ್ಧಗಂಗಾ ಮಠದ, ಸಿರಿಗೆರೆ ಮಠ, ಸುತ್ತೂರು ಮಠ ಶ್ರೀಗಳು ಸೇರಿದಂತೆ 7 ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಮಾಡಿದ್ದು ಅದು ನೆನಪಿದೆಯಾ? (1/1)
— Dr Sudhakar K (@mla_sudhakar) August 21, 2020
ಟ್ಯಾಪ್ ಮಾಡುವ ದಾರಿದ್ರ್ಯ ನಮಗಿಲ್ಲ: ಫೋನ್ ಟ್ಯಾಪ್ ಕುರಿತು ಪ್ರತಿಕ್ರಿಯಿಸಿರುವ ಸಚಿವ ಡಾ.ಕೆ.ಸುಧಾಕರ್ "ಡಿ.ಕೆ.ಶಿವಕುಮಾರ್ ಅವರು ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದಾಗ ಏಳು ಸ್ವಾಮೀಜಿಗಳ ಫೋನ್ ಟ್ಯಾಪ್ ಆಗಿತ್ತು. ಆ ಪ್ರಕರಣ ಇನ್ನೂ ಜೀವಂತವಾಗಿದೆ. ಫೋನ್ ಕದ್ದಾಲಿಕೆ ಮಾಡುವ ದಾರಿದ್ರ್ಯ ನಮಗಿಲ್ಲ" ಎಂದು ಹೇಳಿದ್ದಾರೆ.