ಬೆಂಗಳೂರಿಗರಿಗೆ ಕೊಟ್ಟ ಮಾತು ಉಳಿಸಿಕೊಂಡ ಸಿದ್ದರಾಮಯ್ಯ
ಬೆಂಗಳೂರು, ಅಕ್ಟೋಬರ್ 31 : ಉದ್ಯಾನ ನಗರಿ ಬೆಂಗಳೂರಿನ ಜನರಿಗೆ ಕೊಟ್ಟ ಮಾತನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಳಿಸಿಕೊಂಡಿದ್ದಾರೆ. ಕೆ.ಜೆ.ಜಾರ್ಜ್ ಅವರನ್ನು 'ಬೆಂಗಳೂರು ನಗರಾಭಿವೃದ್ಧಿ' ಸಚಿವರನ್ನಾಗಿ ನೇಮಿಸಲಾಗಿದೆ. ಗೃಹ ಖಾತೆಯ ಹೊಣೆಯನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ನೀಡಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ 'ಬೆಂಗಳೂರು ನಗರದ ಅಭಿವೃದ್ಧಿಗೆ ಪ್ರತ್ಯೇಕ ಸಚಿವರನ್ನು ನೇಮಕ ಮಾಡುವುದಾಗಿ' ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದರು. 'ಚುನಾವಣಾ ಫಲಿತಾಂಶ ಏನೇ ಬಂದರೂ ಪ್ರತ್ಯೇಕ ಸಚಿವರನ್ನು ನೇಮಕ ಮಾಡುವುದಾಗಿ' ಹೇಳಿದ್ದರು. [ಬೆಂಗಳೂರು ಅಭಿವೃದ್ಧಿಗೊಂದು ಖಾತೆ, ಸಚಿವರ ನೇಮಕ]
ಗುರುವಾರ ನಾಲ್ಕು ನೂತನ ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಂಡಿರುವ ಸಿದ್ದರಾಮಯ್ಯ ಅವರು, ಸರ್ವಜ್ಞ ನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್ ಅವರ ಖಾತೆಯನ್ನು ಬದಲಾವಣೆ ಮಾಡಿದ್ದು, ಬೆಂಗಳೂರು ನಗರಾಭಿವೃದ್ಧಿ (ಬಿಡಿಎ, ಬಿಬಿಎಂಪಿ, ಜಲಮಂಡಳಿ, ಬಿಎಂಆರ್ಡಿಎ), ನಗರ ಯೋಜನೆ ಖಾತೆಯ ಜವಾಬ್ದಾರಿಯನ್ನು ಅವರಿಗೆ ವಹಿಸಿದ್ದಾರೆ. [ಬೆಂಗಳೂರು ಅಭಿವೃದ್ಧಿಗೆ ಪ್ರತ್ಯೇಕ ಸಚಿವರು ಬೇಕಿಲ್ಲ]
ಬೇಡ ಎಂದಿದ್ದರು : 'ಬೆಂಗಳೂರಿನ ಅಭಿವೃದ್ಧಿಗಾಗಿ ಪ್ರತ್ಯೇಕ ಸಚಿವರನ್ನು ನೇಮಕ ಮಾಡುವ ಅಗತ್ಯವಿಲ್ಲ. ಖಾತೆ ಮುಖ್ಯಮಂತ್ರಿಗಳ ಬಳಿಯೇ ಇರಲಿ' ಎಂದು ಬೆಂಗಳೂರು ನಗರ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದರು. [ನೂತನ ಸಚಿವರಿಗೆ ಖಾತೆ ಹಂಚಿಕೆ]
ಆದರೆ, ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವ ಸಮಯದಲ್ಲಿ ಗೃಹ ಸಚಿವ ಕೆ.ಜೆ.ಜಾರ್ಜ್ ಅವರ ಖಾತೆಯನ್ನು ಮುಖ್ಯಮಂತ್ರಿಗಳು ಬದಲಾವಣೆ ಮಾಡಿದ್ದು, ಅವರಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಿದ್ದಾರೆ. ಗೃಹ ಖಾತೆಯನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ವಹಿಸಲಾಗಿದೆ.
ಇದೇ ಮೊದಲಲ್ಲ : ಬೆಂಗಳೂರು ಅಭಿವೃದ್ಧಿಗೆ ಪ್ರತ್ಯೇಕ ಸಚಿವರನ್ನು ನೇಮಕ ಮಾಡುತ್ತಿರುವುದು ಇದೇ ಮೊದಲಲ್ಲ. ಜೆ.ಎಚ್.ಪಟೇಲ್ ಅವರು ಮುಖ್ಯಮಂತ್ರಿಗಳಾಗಿದ್ದಾಗ ವಿ. ಸೋಮಣ್ಣ ಅವರನ್ನು ಬೆಂಗಳೂರು ನಗರದ ಸಚಿವರಾಗಿ ನೇಮಿಸಲಾಗಿತ್ತು. ನಂತರದ ದಿನಗಳಲ್ಲಿ ಈ ಖಾತೆ ಮುಖ್ಯಮಂತ್ರಿಗಳ ಬಳಿಯೇ ಉಳಿದಿತ್ತು.