ನಿಜವಾದ ಕನ್ನಡ ಪ್ರೇಮಿ ಯಾರು, ಎನ್ನಾರೈ ಕನ್ನಡಿಗನ ಅನುಭವಾಮೃತ
ಕನ್ನಡಕ್ಕಾಗಿ ಕೈಯೆತ್ತು ನಿನ್ನ ಕೈ
ಕಲ್ಪವೃಕ್ಷವಾಗುತ್ತದೆಂದನಾ ಕವಿ.
ಖನ್ನಡವೆನಿ ಕೈ ಎತ್ತಿ ಕರವ(ವೇ) ಹೇರಿ
ಕಲ್ಪಕವ ಕಂಡುಕೊಂಡ ಭವಿ!
ಕವಿಯ ನುಡಿಗಿಂತ, ಭವಿಯ ಉಡಿ
ದಳ್ಳುರಿಯಾಗಿ ಆ ಬಣ ಈ ಬಣ ಸೇರಿ
ಹಿರಿಹಿರಿದು ಸಜ್ಜನರ ಭಾರಿ
ಕಲ್ಪವೃಕ್ಷದೊಂದಿಗೆ ಕನ್ನಡ
ಕಾಮಧೇನುವ ಹಿಂಡುವುದ ಕಂಡು
ತೊಳಸಿ ಬಸವಳಿದೆ ಹಗೆದಿಬ್ಬೇಶ್ವರ!
ಕಳೆದ ತಿಂಗಳು ನಾನು ಮುಖ್ಯ ಸಲಹೆಗಾರನಾಗಿರುವ ನನ್ನ ಸ್ನೇಹಿತನ ಬೆಂಗಳೂರು ಆಫೀಸಿನಲ್ಲಿ ಕುಳಿತಿದ್ದೆ.
ಕಳೆದ ಇಪ್ಪತ್ತು ವರ್ಷಗಳಿಗೂ ಮೀರಿ ಅಮೆರಿಕದಲ್ಲಿ ನನ್ನೊಂದಿಗೆ ಕೆಲಸ ಮಾಡಿ, ಉದ್ಯಮಿಯಾಗಿರುವ ಈತನೊಂದಿಗೆ ನನ್ನದು ಗುರು-ಶಿಷ್ಯ ಸಂಬಂಧ. ಘಟಾನುಘಟಿ ಆಂಧ್ರ ರಾಜಕಾರಣಿಗಳ ಸಂಬಂಧವಿದ್ದರೂ ಅದೆಲ್ಲ ಬಿಟ್ಟು ಗುರುವಾದ ನನ್ನನ್ನು ಸಂಪ್ರೀತಗೊಳಿಸಲು ಬೆಂಗಳೂರಿನಲ್ಲಿ ಕಚೇರಿ ತೆರೆದ ಪುಣ್ಯಾತ್ಮ ಈತ.
ನನ್ನ ಸಲಹೆಯ ಮೇರೆಗೆ ತನ್ನ ಭಾರತದ ಶಾಖೆಯನ್ನು ಕಳೆದ ವರ್ಷ ಬೆಂಗಳೂರಿನಲ್ಲಿ ತೆರೆದು ನೂರು ಜನಕ್ಕೆ ಐ.ಟಿ. ಉದ್ಯೋಗವನ್ನು ನೀಡಿದ್ದಾನೆ. ಆ ನೂರು ಜನರಲ್ಲಿ ಶೇಕಡಾ 90 ಭಾಗ ಕನ್ನಡಿಗರು, ಅದರಲ್ಲೂ ಒಳನಾಡು ಕನ್ನಡಿಗರಿಗೆ ಉದ್ಯೋಗ ನೀಡಿರುವ ತೆಲುಗು ಅಬ್ಬಾಯಿ ಈತ! ಜಗಳೂರಿನ ಸಿಕಂದರ್, ಹರಿಹರದ ಪಂಚಾಕ್ಷರಿ, ದಾವಣಗೆರೆಯ ಸಿಂಧು, ಬೆಂಗಳೂರಿನ ಲತಾ, ಮೈಸೂರಿನ ಕುಮಾರ್...ಹೀಗೆ ಪಟ್ಟಿ ಬೆಳೆಯುತ್ತದೆ.

ಇರಲಿ, ಆತನೊಂದಿಗೆ ಮಾತನಾಡುತ್ತ ಕುಳಿತಾಗ ನಾಲ್ಕು ಜನ ಆತನ ಛೇಂಬರಿಗೆ ಅಕ್ಷರಶಃ ನುಗ್ಗಿದರು. ಕೆಳಗಡೆ ಇದ್ದ ಸೆಕ್ಯೂರಿಟಿ, ಮೇಲ್ಮಹಡಿಯ ರಿಸೆಪ್ಸನ್ ದಾಟಿ ಮುಖ್ಯಾಧಿಕಾರಿಯ ಕೊಠಡಿಗೆ ದಬಾಯಿಸಿಕೊಂಡು ಕನ್ನಡ ರಾಜ್ಯೋತ್ಸವಕ್ಕೆ ಚಂದಾ ವಸೂಲಿಗೆ ಕರವೇ ಕಾರ್ಯಕರ್ತರೆಂದು ಹೇಳಿಕೊಂಡು ಬಂದಿದ್ದರು. ಕನ್ನಡ ಬಾರದ ನನ್ನ ಸ್ನೇಹಿತ ನನ್ನನ್ನು ತೋರಿ ಇವರೇ ಮುಖ್ಯಾಧಿಕಾರಿ ಎಂದು ಕೈಚೆಲ್ಲಿದ.
ಈಗಷ್ಟೇ ಸಾಲ ಸೋಲ ಮಾಡಿ ಕಂಪೆನಿ ನಡೆಸುವ ಕಷ್ಟಗಳ ಗೋಳಿಟ್ಟು, ಕೈಯಲ್ಲಿದ್ದ ಸಮಾಜಮುಖಿ ಪತ್ರಿಕೆ, ಹುಯೆನ್ ತ್ಸಾಂಗ್ ಪುಸ್ತಕದ ಹಿಂದಿದ್ದ ನನ್ನ ಚಿತ್ರ ತೋರಿಸಿ "ನಾವು ಸಾಕಷ್ಟು ಕನ್ನಡ ಸೇವೆ ಮಾಡುತ್ತಿದ್ದೇವೆ. ಸದ್ಯಕ್ಕೆ ಲಾಭದ ಹಾದಿ ಹಿಡಿದು ಮುಂದೆ ಹಣ ಸಹಾಯ ಮಾಡುವಷ್ಟು ಶಕ್ತಿ ಬರಲೆಂದು ಹಾರೈಸಿ" ಎಂದು ಟೀ ಕುಡಿಸಿ ಸಾಗಹಾಕಿದೆ.
ಆ ಕ್ಷಣದಲ್ಲಿ ನನ್ನ ಮೇಲಿನ ಅಭಿಮಾನಕ್ಕೆ ಮಹಾ ರಿಸ್ಕ್ ತೆಗೆದುಕೊಂಡಿದ್ದ ನನ್ನ ಶಿಷ್ಯನ ಕಣ್ಣಿನಲ್ಲಿ ಆ ನಿರ್ಧಾರದ ಕುರಿತು ಒಂದು ಸಣ್ಣ ಅಳುಕು ಕಂಡಿದ್ದು ಮಾತ್ರ ಸತ್ಯ!
ಕನ್ನಡ ಉಳಿಕೆ, ಬಳಕೆ ವ್ಯವಸ್ಥೆಯ ಒಂದು ಭಾಗವಾಗಿ ಬರಬೇಕೇ ಹೊರತು ಈ ರೀತಿಯ ಊಳಿಗಶಾಹಿ ಸಂಘ ಸಂಸ್ಥೆಗಳಿಂದಲ್ಲ.
ವ್ಯಾಲೆಂಟೈನ್ಸ್ ದಿನ ಹ್ಯಾಲೋವೀನ್ ರೀತಿ ಚುಂಬಿಸಿ ನೈತಿಕ ಪೊಲೀಸುಗಿರಿ ಪ್ರತಿಭಟಿಸುವ, ಅಯ್ಯಪ್ಪನ ಬಳಿ ಹೆಂಗಸರು ಹೋಗುವುದಕ್ಕೆ ಕೋರ್ಟಿಗೆ ಹೋಗುವ, ಯಾರೋ ಯಾವುದೋ ಕಲ್ಲಿನ ಮೇಲೆ ಉಚ್ಚೆ ಹುಯ್ದುಕೊಂಡಿದ್ದಕ್ಕೆ ಬೊಬ್ಬಿರಿಯುವ ಪಕ್ಷಗಳಿಗೆ, ಜನತೆಗೆ, ಚಿಂತಕರಿಗೆ ಈ ರೀತಿಯ ಕನ್ನಡಕ್ಕಾಗಿ ಕೈಯೆತ್ತುವ ಭಾಷಾ ಪೊಲೀಸುಗಿರಿ ಸಹ್ಯವಾಗಿರುವುದು ಏಕೆ?!
ಧರ್ಮದ ಕುರಿತಾಗಿ ಆಧುನಿಕ ಮಾನವನ ಮನದಾಳದಲ್ಲೆಲ್ಲೋ ಸುಪ್ತವಾಗಿರುವ ಭಾವನೆ ಜಾತಿವಾದ/ಧಾರ್ಮಿಕ ಉಗ್ರವಾದಗಳನ್ನು ಪೋಷಿಸುತ್ತಿರುವಂತೆಯೇ, ಭಾಷಾಪ್ರೇಮಿಗಳ ಮನದಾಳದಲ್ಲಿ ಬೇರೂರಿರುವ ಆ ಒಂದು ಊಳಿಗಮಾನ್ಯ ಕ್ರೌರ್ಯದ ಭಾವ, ಈ ಭಾಷಾ ಉಗ್ರವಾದೀ ಸಂಘಟನೆಗಳನ್ನು ಪೋಷಿಸುತ್ತಿರುವುದು ಕನ್ನಡದಷ್ಟೇ ಸತ್ಯ.












Click it and Unblock the Notifications