ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಸ್ಥಾನಕ್ಕೆ ಕುತ್ತು?
ಬೆಂಗಳೂರು, ಮೇ 26. ಯಲಹಂಕ ಶಾಸಕ ಎಸ್. ಆರ್. ವಿಶ್ವನಾಥ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಲಾಭದಾಯಕ ಹುದ್ದೆ ಹೊಂದಿದ್ದಾರೆಂದು ಆರೋಪಿಸಲಾಗಿದೆ.
ಅಲ್ಲದೆ, ಅದೇ ಆಧಾರದ ಮೇಲೆ ವಿಶ್ವನಾಥ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹೂಡಲಾಗಿದೆ.
ವಕೀಲ ಎ.ಎಸ್.ಹರೀಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಸಿಜೆ ರಿತುರಾಜ್ ಅವಸ್ಥಿ ಮತ್ತು ನ್ಯಾ. ಅಶೋಕ್ ಕಿಣಗಿ ಅವರಿದ್ದ ವಿಭಾಗೀಯಪೀಠದ ಮುಂದೆ ವಿಚಾರಣೆಗೆ ಬಂದಿತು. ಕೆಲ ಕಾಲ ವಾದ ಆಲಿಸಿದ ಬಳಿಕ ನ್ಯಾಯಾಲಯ ರಾಜ್ಯ, ಸರ್ಕಾರ, ಶಾಸಕ ಎಸ್.ಆರ್. ವಿಶ್ವನಾಥ್ ಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿತು.
ಅರ್ಜಿದಾರರ ಪರ ವಕೀಲರು, ನಿಯಮದಂತೆ ಶಾಸಕರು ಲಾಭದಾಯಕ ಹುದ್ದೆ ಹೊಂದುವಂತಿಲ್ಲ. ಆದರೆ ಯಲಹಂಕದ ಶಾಸಕರೂ ಆಗಿರುವ ವಿಶ್ವನಾಥ್ ಬಿಡಿಎ ಅಧ್ಯಕ್ಷರಾಗಿ ವೇತನ ಪಡೆಯುತ್ತಿದ್ದಾರೆ. ಹಾಗಾಗಿ ಅನರ್ಹಗೊಳಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಈ ಬಗ್ಗೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದರು.
ಮತ್ತೊಂದು ಕೇಸ್ ಬಾಕಿ:
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಸ್ಥಾನಕ್ಕೆ ಶಾಸಕ ಎಸ್.ಆರ್. ವಿಶ್ವನಾಥ್ ಅವರನ್ನು ನೇಮಕ ಮಾಡಿರುವುದನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಿರುವ ಮತ್ತೊಂದು ಅರ್ಜಿಯೂ ಹೈಕೋರ್ಟ್ ಮುಂದಿದೆ.
ಅದರಲ್ಲಿ ನ್ಯಾಯಾಲಯ ಕಾನೂನಾತ್ಮಕ ಅಂಶಗಳ ಬಗ್ಗೆ ವಿವರಣೆ ನೀಡುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. ನ್ಯಾಯಪೀಠ, ಶಾಸಕರಾದವರು ಬಿಡಿಎ ಅಧ್ಯಕ್ಷರಾಗಲು ಅನರ್ಹರೇ ?ಪೂರ್ಣಾವಧಿ ಅಧ್ಯಕ್ಷರು ಸದನಕ್ಕೆ ಹಾಜರಾಗಬಹುದೇ ಅಥವಾ ಸದನಕ್ಕೆ ಹಾಜರಾಗದೆ ಶಾಸಕರಾಗಿ ಮುಂದುವರಿಯಬಹುದೇ? ಅಧ್ಯಕ್ಷರು ಶಾಸಕರಾಗಿ ವೇತನ ಪಡೆಯುವ ಜೊತೆಗೆ ಬಿಡಿಎಯಿಂದ ಸಂಬಳ ಪಡೆಯುತ್ತಿದ್ದಾರೆಯೇ''ಎಂದು ಪ್ರಶ್ನಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಅಲ್ಲದೆ, ಈ ಕುರಿತಂತೆ ಬೇರೆ ಬೇರೆ ರಾಜ್ಯಗಳಲ್ಲಿ ಶಾಸಕರಿಗೆ ಯಾವ ನಿಯಮಗಳಿವೆ ಎಂಬ ಬಗ್ಗೆ ಕಾನೂನಾತ್ಮಕ ಅಂಶಗಳನ್ನು ಕುರಿತು ವಿವರಣೆ ನೀಡುವಂತೆ ಸರ್ಕಾರಕ್ಕೆ ಸೂಚಿಸಿತು ಮತ್ತು ಪ್ರತಿವಾದಿ ವಿಶ್ವನಾಥ್ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸುವಂತೆ ಆದೇಶಿಸಿ ವಿಚಾರಣೆ ಮುಂದೂಡಿತು. ಅರ್ಜಿದಾರರರು, ಬಿಡಿಎ ಅಧ್ಯಕ್ಷರು ಪೂರ್ಣಾವಧಿಗೆ ನೇಮಕವಾಗಬೇಕೆಂದು ನಿಯಮವಿದೆ. ಆದರೆ ಶಾಸಕರಾದವರು ಪೂರ್ಣಾವಧಿ ಅಧ್ಯಕ್ಷರಾಗಲು ಸಾಧ್ಯವಿಲ್ಲ. ಹೀಗಾಗಿ ಎಸ್.ಆರ್.ವಿಶ್ವನಾಥ್ ನೇಮಕ ರದ್ದುಪಡಿಸಲು ಮನವಿ ಮಾಡಿದರು.
ಬಿಡಿಎ ಅಧ್ಯಕ್ಷರು ಹಾಗೂ ಸದಸ್ಯರ ನೇಮಕಾತಿಗೆ ನಿರ್ದಿಷ್ಟ ನಿಯಮ ಹಾಗೂ ಮಾರ್ಗಸೂಚಿ ಇಲ್ಲ. ಸರ್ಕಾರ ತನಗೆ ಬೇಕಾದವರನ್ನು ಅಧ್ಯಕ್ಷ ಹಾಗೂ ಸದಸ್ಯರ ಸ್ಥಾನಕ್ಕೆ ನೇಮಿಸುತ್ತದೆ. ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಇರುವುದಿಲ್ಲ. ಬಿಡಿಎ ಹಾಲಿ ಅಧ್ಯಕ್ಷರಾಗಿರುವ ವಿಶ್ವನಾಥ್ ಅವರು ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಅವರಿಗೆ ಬಿಡಿಎ ಅಧ್ಯಕ್ಷರಾಗಲು ಅರ್ಹತೆ ಇಲ್ಲ. ಆದ್ದರಿಂದ ಶಾಸಕ ಎಸ್.ಆರ್. ವಿಶ್ವನಾಥ್ ಅವರನ್ನು ಬಿಡಿಎ ಅಧ್ಯಕ್ಷರಾಗಿ ನೇಮಿಸಿ ಸರ್ಕಾರ 2020ರ ನ.28ರಂದು ಹೊರಡಿಸಿದ ಆದೇಶ ರದ್ದುಪಡಿಸುವಂತೆ ಅರ್ಜಿದಾರರು ಕೋರಿದ್ದಾರೆ.