ಓಲಾ, ಉಬರ್ ಆಟೋ ಬಿಕ್ಕಟ್ಟು: ಸದ್ಯಕ್ಕೆ ಬಗೆಹರಿಯುವುದು ಡೌಟು!
ಬೆಂಗಳೂರು, ನ.7. ಓಲಾ, ಉಬರ್ ಆಟೋರಿಕ್ಷಾಗಳಿಗೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟು ಸದ್ಯಕ್ಕೆ ಶಮನವಾಗುವಂತೆ ಕಾಣುತ್ತಿಲ್ಲ. ಏಕೆಂದರೆ ಸರ್ಕಾರ , ಓಲಾ, ಉಬರ್ ಕಂಪನಿಗಳ ಜೊತೆ ಸಮಾಲೋಚಿಸಿ ಪರಿಹಾರ ಕಂಡುಕೊಳ್ಳಲು ಹೈಕೋರ್ಟ್ನಲ್ಲಿ ಮತ್ತೆ 4 ವಾರ ಸಮಯವನ್ನು ಕೋರಿದೆ. ಆದರೆ ನ್ಯಾಯಾಲಯ ಅಷ್ಟು ಸಮಯ ನೀಡಲು ನಿರಾಕರಿಸಿದೆ.
ಈ ಮಧ್ಯೆ, ಆಟೋ ಸೇವೆ ನೀಡುವ ಓಲಾ, ಉಬರ್ ಕಂಪನಿಗಳು ತಮಗೆ ಹೆಚ್ಚುವರಿ ಶುಲ್ಕ ವಿಧಿಸಲು ಅನುಮತಿ ನೀಡುವಂತೆ ಮತ್ತೆ ಮಧ್ಯಂತರ ಅರ್ಜಿ ಸಲ್ಲಿಸಿವೆ. ಹಾಗಾಗಿ ಬಿಕ್ಕಟ್ಟು ಮತ್ತಷ್ಟು ಜಟಿಲವಾಗಿದೆ.
ಆಪ್(App) ಆಧಾರಿತ ಓಲಾ ಮತ್ತು ಉಬರ್ ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಸರ್ಕಾರ ಇತ್ತೀಚೆಗೆ ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಎಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಉಬರ್ ಇಂಡಿಯಾ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರಿದ್ದ ಏಕಸದಸ್ಯ ಪೀಠ ಸೋಮವಾರ ವಿಚಾರಣೆ ನಡೆಸಿತು.
ಆಗ ಸರ್ಕಾರಿ ವಕೀಲರು, ನ್ಯಾಯಾಲಯದ ಸೂಚನೆಯಂತೆ ಸಂಬಂಧಪಟ್ಟವರ ಜೊತೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲು 4 ವಾರ ಸಮಯ ನೀಡಬೇಕೆಂದು ಕೋರಿದರು. ಅಷ್ಟರಲ್ಲಿ ಅರ್ಜಿದಾರರ ಪರ ವಕೀಲರು, ಶೇ.10ರ ಕಮೀಷನ್ನಲ್ಲಿ ತಾವು ಆಟೋ ಸೇವೆ ನೀಡಲಾಗದು. ಹಾಗಾಗಿ ಹೆಚ್ಚುವರಿ ಶುಲ್ಕ ವಿಧಿಸಲು ಅರ್ಜಿ ಸಲ್ಲಿಸಲಾಗಿದೆ, ಅವುಗಳನ್ನು ಮಾನ್ಯ ಮಾಡಬೇಕೆಂದು ಕೋರಿದರು.
ಕೊನೆಗೆ ನ್ಯಾಯಪೀಠ, ಐದು ದಿನಗಳಲ್ಲಿ ಮೂಲ ಅರ್ಜಿಗೆ ಹಾಗೂ ಮಧ್ಯಂತರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆಯನ್ನು ನ.16ಕ್ಕೆ ಮುಂದೂಡಿತು.

ಸಹಮತದ ತೀರ್ಮಾನಕ್ಕೆ ಸೂಚನೆ: ನ್ಯಾಯಾಲಯ ಈ ಹಿಂದೆ ಜನರಿಗೆ ತೊಂದರೆ ಆಗದಂತೆ ಸಮಹತದ ಪರಿಹಾರ ಕಂಡುಕೊಳ್ಳುವಂತೆ ಸರ್ಕಾರಕ್ಕೆ ಆದೇಶಿಸಿದೆ.
ಆಪ್ ಆಧಾರಿತ ಆಟೋರಿಕ್ಷಾಗೆ ಸೇವೆಗೆ ನ್ಯಾಯಯುತ ದರ ವಿಧಿಸುವುದಕ್ಕೆ ಸಂಬಂಧಿಸಿದಂತೆ ಸೇವೆ ನೀಡುತ್ತಿರುವ ಓಲಾ ಮತ್ತು ಉಬ್ ಕಂಪನಿಗಳೊಂದಿಗೆ ಸಭೆ ನಡೆಸಿ ಜನರಿಗೆ ಅನುಕೂಲವಾಗುವಂತಹ ಸಹಮತದ ತೀರ್ಮಾನ ಕೈಗೊಳ್ಳಬೇಕೆಂದು ನಿರ್ದೇಶಿಸಿತ್ತು.
ಸಹಮತ ಸಾಧಿಸುವರೆಗೂ ಕಂಪನಿಗಳು ಸಹ ಸರ್ಜ್ ಚಾರ್ಜ್ ಮಾಡಬಾರದು. ಅರ್ಜಿದಾರ ಕಂಪನಿಗಳ ವಿರುದ್ಧ ಬಲವಂತದ ಕ್ರಮ ಜರುಗಿಸುವುದಿಲ್ಲ ಎಂಬ ಭರವಸೆಯನ್ನು ರಾಜ್ಯ ಅಡ್ವೋಕೇಟ್ ಅವರು ಮೌಖಿಕವಾಗಿ ನೀಡಬೇಕು ಎಂದು ನ್ಯಾಯಪೀಠ ತಿಳಿಸಿತು.
ಕೋರ್ಟ್ ಮೌಖಿಕ ಅಭಿಮತ: ಅರ್ಜಿದಾರರ ಕಂಪನಿಗಳು ಪರವಾನಗಿ ಪಡೆಯದೆ ಆಟೋರಿಕ್ಷಾ ಸೇವೆ ಒದಗಿಸುತ್ತಿವೆ. ಆದರೆ, ಪರವಾನಗಿ ಪಡೆಯದೆ ಸೇವೆ ಸುವುದಕ್ಕೆ ಅವಕಾಶ ಇಲ್ಲ. ಹೆಚ್ಚಿನ ಪ್ರಯಾಣ ದರ ಪಡೆಯಲಾಗುತ್ತಿದೆ ಎಂಬುದಾಗಿ ಸರ್ಕಾರ ಹೇಳುತ್ತಿದೆ. ಮತ್ತೊಂದಡೆ ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸುವುದಕ್ಕೆ ಸರ್ಕಾರ ಸಕಾರಣ ನೀಡಿಲ್ಲ.
ತಮ್ಮ ಮನವಿ ಆಲಿಸದೆ ದಿಢೀರ್ ಆಗಿ ಸರ್ಕಾರ ಆದೇಶ ಹೊರಡಿಸಿದೆ. ದರ ನಿಗದಿ ಮಾಡುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ನಿಯಮ ರೂಪಿಸಿಲ್ಲ ಎಂಬುದಾಗಿ ಅರ್ಜಿದಾರರು ಕಂಪನಿಗಳು ಹೇಳುತ್ತಿವೆ. ಹೀಗಿರುವಾಗ ಸೇವೆ ಸ್ಥಗಿತ ಮಾಡುವುದರಿಂದ ಅಂತಿಮವಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತದೆ. ಅವರು ತೊಂದರೆಗೆ ಒಳಗಾಗಬಾರದು ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿತು.

ನೋಟಿಸ್ ನೀಡದೆ ಕ್ರಮ: ಅರ್ಜಿದಾರರ ಸಂಸ್ಥೆಗಳ ಪರ ವಕೀಲರು, App ಆಧಾರಿತ ಆಟೋರಿಕ್ಷಾ ಸೇವೆ ನೀಡುವುದಕ್ಕೆ ಪರವಾನಗಿ ಅಗತ್ಯವಿಲ್ಲ ಎಂದು ಪ್ರತಿಪಾದಿಸುವ ಪ್ರಕರಣವು ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಇನ್ನೂ ಓಲಾ ಮತ್ತು ಉಬರ್ ಆಪ್ ಮೂಲಕ ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸಿರುವುದಕ್ಕೆ ರಾಜ್ಯ ಸರ್ಕಾರವು ಸಮಂಜಸ ಕಾರಣ ನೀಡಿಲ್ಲ.
'ಕರ್ನಾಟಕ ರಾಜ್ಯ ಬೇಡಿಕೆ ಆಧಾರಿತ ಸಾರಿಗೆ ತಂತ್ರಜ್ಞಾನ ಅಗ್ರಿಗೇಟರ್ಸ್ ನಿಯಮಗಳು-2016'ರ ನಿಯಮ 2(7) ಅಡಿಯಲ್ಲಿ ಮೋಟಾರು ಕ್ಯಾಬ್ (ಟ್ಯಾಕ್ಸಿ) ವ್ಯಾಖ್ಯಾನದಡಿಗೆ ಆಟೋರಿಕ್ಷಾ ಸಹ ಬರುತ್ತದೆ ಹಾಗಾಗಿ, ಸೇವೆ ಸ್ಥಗಿತಗೊಳಿಸುವ ಬಗ್ಗೆ ವಿವರಣೆ ಕೇಳಿ ಅ.6ರಂದು ನೀಡಿರುವ ನೋಟಿಸ್ ಮತ್ತು ಸೇವೆ ಸ್ಥಗಿತಗೊಳಿಸಲು ಅ.11ರಂದು ಹೊರಡಿಸಿರುವ ಆದೇಶಕ್ಕೆ ಮಾನ್ಯತೆ ಇಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಪ್ರಕರಣ: ಕರ್ನಾಟಕ ರಾಜ್ಯ ಬೇಡಿಕೆ ಆಧಾರಿತ ಸಾರಿಗೆ ತಂತ್ರಜ್ಞಾನ ಅಗ್ರಿಗೇಟರ್ಸ್ ನಿಯಮಗಳ ಅಡಿ ಟ್ಯಾಕ್ಸಿ ಸೇವೆ ಒದಗಿಸಲು ಓಲಾ ಮತ್ತು ಉಬರ್ ಕಂಪೆನಿಗಳಿಗೆ ಪರವಾನಗಿ ನೀಡಲಾಗಿದೆ. ಆದರೆ, ಆಟೋರಿಕ್ಷಾ ಸೇವೆ ಒದಗಿಸಲು ಪರವಾನಗಿ ಪಡೆದುಕೊಂಡಿಲ್ಲ. ಪರವಾನಗಿ ಪಡೆಯದೆ ಆಟೋ ರಿಕ್ಷಾ ಸೇವೆ ಒದಗಿಸಲಾಗುತ್ತಿದೆ ಎಂದು ಆಕ್ಷೇಪಿಸಿದ್ದ ಸಾರಿಗೆ ಇಲಾಖೆ, ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸುವ ವಿಚಾರವಾಗಿ ವಿವರಣೆ ಕೇಳಿ ಅ.6ರಂದು ನೋಟಿಸ್ ನೀಡಿತ್ತು. ಸೇವೆ ಸ್ಥಗಿತಗೊಳಿಸಲು ಅ.11ರಂದು ಆದೇಶ ಮಾಡಿದೆ. ಅದನ್ನು ಪ್ರಶ್ನಿಸಿ ಅರ್ಜಿದಾರ ಕಂಪನಿಗಳು ಹೈಕೋರ್ಟ್ ಮೊರೆ ಹೋಗಿವೆ.











Click it and Unblock the Notifications