ಓಮಿಕ್ರಾನ್ ಭೀತಿ; ಸಚಿವ ಸುಧಾಕರ್ ನೇತೃತ್ವದಲ್ಲಿ ಆರೋಗ್ಯ ಇಲಾಖೆಯ ಮಹತ್ವದ ಸಭೆ
ಬೆಂಗಳೂರು, ನವೆಂಬರ್ 30: ವಿವಿಧ ದೇಶಗಳಲ್ಲಿ ಕೋವಿಡ್ ರೂಪಾಂತರ ತಳಿ 'ಓಮಿಕ್ರಾನ್' ತೀವ್ರವಾಗಿ ಹರಡುತ್ತಿರುವುದರಿಂದ ರಾಜ್ಯದಲ್ಲಿ ಕೈಗೊಳ್ಳಬೇಕಾದ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಆರೊಗ್ಯ ಇಲಾಖೆಯಲ್ಲಿ ಮಂಗಳವಾರ ಮಹತ್ವದ ಸಭೆ ನಡೆದಿದ್ದು, ಸಂಜೆಯ ವೇಳೆಗೆ ಮತ್ತಷ್ಟು ಮಾರ್ಗಸೂಚಿಗಳು ಹೊರಬರುವ ನಿರೀಕ್ಷೆ ಇದೆ.
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜತೆ ಮಂಗಳವಾರ ಸಭೆ ನಡೆಸಿದರು. ಸಮಿತಿ ಅಧ್ಯಕ್ಷರಾದ ಡಾ. ಕೆ. ಸುದರ್ಶನ್ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಸಭೆಯಲ್ಲಿ ಪ್ರಸಕ್ತ ಬೆಳವಣಿಗೆಗಳ ಬಗ್ಗೆ ವಿವರವಾಗಿ ಚರ್ಚಿಸಿದ್ದಾರೆ.
ಇದಕ್ಕೂ ಮುನ್ನ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, "ವಿದೇಶದಿಂದ ಬಂದ ಪ್ರವಾಸಿಗರನ್ನು ಯಾವ ರೀತಿ ನಿಯಂತ್ರಣ ಮಾಡಬೇಕು ಎಂಬುದು ಪ್ರಮುಖ ವಿಷಯವಾಗಿದೆ. ಕ್ವಾರಂಟೈನ್ ನಿಯಮಗಳು ಹೇಗೆ ಇರಬೇಕು ಎಂಬುದರ ಬಗ್ಗೆ ಚರ್ಚೆ ಮಾಡಲಾಗುತ್ತದೆ. ವಿದೇಶಗಳಿಂದ ಬರುವ ಎಲ್ಲ ಪ್ರಯಾಣಿಕರಿಗೂ ಕೊರೊನಾ ಪರೀಕ್ಷೆ ಮಾಡಲಾಗುತ್ತದೆ. ಪಾಸಿಟಿವ್ ಬಂದವರು ಮತ್ತು ನೆಗೆಟಿವ್ ಬಂದವರನ್ನು ಯಾವ ರೀತಿ ನಿಗಾದಲ್ಲಿ ಇರಡಬೇಕು ಎಂದು ತಜ್ಞರ ಅಭಿಪ್ರಾಯ ಪಡೆಯಲಾಗುವುದು" ಎಂದು ತಿಳಿಸಿದರು.

ಬೂಸ್ಟರ್ ಡೋಸ್ ನೀಡುವ ಬಗ್ಗೆ ಸಚಿವರ ಮಾತು
"ಬೂಸ್ಟರ್ ಡೋಸ್ ನೀಡುವ ಬಗ್ಗೆ ನಾವು ತೀರ್ಮಾನ ಮಾಡಲು ಸಾಧ್ಯವಿಲ್ಲ. ಇದನ್ನು ಕೇಂದ್ರ ಸರ್ಕಾರ ಮತ್ತು ಐಸಿಎಂಆರ್ ತೀರ್ಮಾನ ಮಾಡಬೇಕು. ನಾವೇ ನಿರ್ಧಾರ ಮಾಡಿ ಬೂಸ್ಟರ್ ಡೋಸ್ ಕೊಡಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ತೆಗೆದುಕೊಳ್ಳುವ ತೀರ್ಮಾನದ ಮೇಲೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ನಾವು ತೀರ್ಮಾನ ಮಾಡುತ್ತೇವೆ," ಎಂದು ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
"ಬೇರೆ ಬೇರೆ ದೇಶದಲ್ಲಿ ಹೊಸ ತಳಿ ಬಗ್ಗೆ ಆಗಿರುವ ಪರಿಸ್ಥಿತಿ ಅವಲೋಕನ ಮಾಡುತ್ತಿದ್ದೇವೆ. ಓಮಿಕ್ರಾನ್ ಕೊರೊನಾ ರೂಪಾಂತರ ವೈರಸ್ ತೀವ್ರ ಆದರೆ ಚಟುವಟಿಕೆಗಳನ್ನು ನಿರ್ಬಂಧ ಮಾಡುವ ವಿಚಾರವಾಗಿ ಮಂಗಳವಾರದ ಸಭೆಯಲ್ಲಿ ಚರ್ಚೆ ಮಾಡಲಾಗುತ್ತದೆ," ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ಡಿಸೆಂಬರ್ 1, 2ರಂದು ವರದಿ ನೀಡುತ್ತದೆ
"ಹೊಸ ಪ್ರಭೇದ ತೀವ್ರವಾದರೆ ಚಟುವಟಿಕೆಗಳ ನಿರ್ಬಂಧಕ್ಕೆ ನಿರ್ಧಾರ ಮಾಡುವ ಬಗ್ಗೆ ಚರ್ಚೆ ಆಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆ ಕೂಡಾ ಡಿಸೆಂಬರ್ 1, 2ರಂದು ವರದಿ ನೀಡುತ್ತದೆ. ಆಮೇಲೆ ಮುಂದಿನ ತೀರ್ಮಾನ ಮಾಡುತ್ತೇವೆ. ಅಲ್ಲಿಯವರೆಗೂ ಯಾವುದೇ ಚಟುವಟಿಕೆ ಮೇಲೆ ನಿರ್ಬಂಧ ಇಲ್ಲ. ಆರಂಭಿಕ ಹಂತದ ಮಾರ್ಗಸೂಚಿಗಳ ಜಾರಿಗೆ ಇವತ್ತು ಸಭೆ ಮಾಡುತ್ತೇವೆ. ಇಂದಿನ ಸಭೆ ಬಳಿಕ ಸಿಎಂ ಜೊತೆ ಚರ್ಚೆ ಮಾಡಿ ಮುಂದಿನ ನಿರ್ಧಾರ ಮಾಡುತ್ತೇವೆ," ಎಂದು ಸಚಿವ ಸುಧಾಕರ್ ಹೇಳಿದ್ದಾರೆ.
ವಿದೇಶದಿಂದ ಬಂದ ಇಬ್ಬರಿಗೆ ಮಾತ್ರ ಸೋಂಕು ಬಂದಿದೆ. ಅವರ ಸ್ಯಾಂಪಲ್ ಜಿನೋಮಿಕ್ ಸೀಕ್ವೆನ್ಸ್ಗೆ ಕಳಿಸಲಾಗಿದೆ. ಇನ್ನೆರಡು ದಿನಗಳಲ್ಲಿ ವರದಿ ಬರುತ್ತದೆ. ಲಾಕ್ಡೌನ್ ಮಾಡುವ ಪ್ರಸ್ತಾಪ ನಮ್ಮ ಮುಂದೆ ಇಲ್ಲ ಎಂದರು.

WHO ಹೊಸ ತಳಿ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ
ಈಗಾಗಲೇ ಸೋಮವಾರ ಒಂದಷ್ಟು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಮತ್ತಷ್ಟು ಬದಲಾವಣೆ ತರಬೇಕಾ ಎಂದು ಸಭೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ತಜ್ಞರ ಜೊತೆ ಚರ್ಚೆ ಬಳಿಕ ಏನಾದರೂ ಮಾರ್ಗಸೂಚಿಯಲ್ಲಿ ಬದಲಾವಣೆ ತರಬೇಕಾದರೆ ತರುತ್ತೇವೆ. WHO ಹೊಸ ತಳಿ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಡಿಸೆಂಬರ್ 1 ಅಥವಾ 2ರ ಒಳಗೆ ವಿಶ್ವ ಆರೋಗ್ಯ ಸಂಸ್ಥೆ ನಮಗೆ ಮಾರ್ಗಸೂಚಿ ಕೊಡಬಹುದು. ಆದಾದ ಬಳಿಕ ನಾವು ರಾಜ್ಯದಲ್ಲಿ ಯಾವ ಕ್ರಮ ತೆಗೆದುಕೊಳ್ಳಬೇಕು ಅಂತ ನಿರ್ಧಾರ ಮಾಡುತ್ತೇವೆ. ಅಲ್ಲಿಯವರೆಗೂ ಯಾವುದೇ ಚಟುವಟಿಕೆಗಳಿಗೆ ನಿರ್ಬಂಧ ಹಾಕುವುದಿಲ್ಲ ಎಂದು ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಕೂಡಾ ಲಾಕ್ಡೌನ್ ಹಾಗೂ ಶಾಲಾ-ಕಾಲೇಜುಗಳ ಬಗ್ಗೆಯೂ ಸ್ಪಷ್ಟನೆ ನೀಡಿದ್ದಾರೆ. ಹೀಗಾಗಿ ಯಾವುದೇ ನಿರ್ಬಂಧ ಇರುವುದಿಲ್ಲ. ತಾಂತ್ರಿಕ ಸಲಹಾ ಸಮಿತಿ ಸದಸ್ಯರ ನೀಡುವ ಸಲಹೆ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಾರಂಭಿಕ ಹಂತದ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಇವತ್ತಿನ ಸಭೆಯಲ್ಲಿ ಚರ್ಚಿಸಿ, ಬಳಿಕ ಸಿಎಂ ಜೊತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಮಾಡುತ್ತೇವೆ ಎಂದಿದ್ದರು.

ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ
"ಹೊಸ ಕೋವಿಡ್ ರೂಪಾಂತರಿ ಪತ್ತೆಯಾದ ದೇಶಗಳಿಂದ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ನಾವು ವಿಮಾನ ನಿಲ್ದಾಣದಲ್ಲಿ ಕಟ್ಟುನಿಟ್ಟಾಗಿ ಪರಿಶೀಲಿಸುತ್ತಿದ್ದೇವೆ. ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿ ಪರೀಕ್ಷಿಸಲಾಗುವುದು," ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
"ಇಂದು ಆರೋಗ್ಯ ಸಚಿವರ ಸಭೆ ಮಾಡುತ್ತಿದ್ದು, ಅಲ್ಲಿ ಚರ್ಚಿಸಲಾಗುವ ವಿಷಯಗಳ ನಾನು ಮಾಹಿತಿ ಪಡೆದು ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ. ನಮ್ಮ ಸರ್ಕಾರದ ಮುಂದೆ ಲಾಕ್ಡೌನ್ ಮಾಡುವ ಯಾವುದೇ ಪ್ರಸ್ತಾವವಿಲ್ಲ. ಜನರು ಊಹಾಪೋಹಗಳಿಗೆ ಕಿವಿಗೊಡಬಾರದು. ಆದರೆ ಜನರು ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಮನವಿ ಮಾಡುತ್ತೇನೆ," ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.












Click it and Unblock the Notifications