ಬೆಂಗಳೂರಿನಲ್ಲೂ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಕಚೇರಿ ಸ್ಥಾಪನೆ: ಸರ್ಕಾರ
ಬೆಂಗಳೂರು, ಸೆಪ್ಟಂಬರ್ 20: ವಿಜಯಪುರದ ಬಿಎಲ್ ಡಿಇ ಶಿಕ್ಷಣ ಸಂಸ್ಥೆಗಳ ಸಮೂಹದ ಅಂಗವಾಗಿ ಸಕ್ರಿಯವಾಗಿರುವ ವಚನ ಪಿತಾಮಹ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಇನ್ನೊಂದು ಕಚೇರಿಯನ್ನು ಬೆಂಗಳೂರಿನಲ್ಲಿ ಶೀಘ್ರದಲ್ಲೇ ತೆರೆಯಲಾಗುವುದು ಎಂದು ಸಂಸ್ಥೆಯ ಪೋಷಕರೂ ಆಗಿರುವ ರಾಜ್ಯ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ತಿಳಿಸಿದರು.
ಬುಧವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಹಿರಿಯ ವಿದ್ವಾಂಸ ಗೊ.ರು.ಚನ್ನಬಸಪ್ಪ, ಕವಿ ಎಸ್ ಜಿ ಸಿದ್ದರಾಮಯ್ಯ, ಲೇಖಕ ಟಿ ಆರ್ ಚಂದ್ರಶೇಖರ, ಅಶೋಕ ದೊಮ್ಮಲೂರು ಅವರೊಂದಿಗೆ ಈ ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಕಚೇರಿ ತೆರೆಯುವ ಕುರಿತು ಸುದೀರ್ಘ ಸಭೆ ನಡೆಸಿದರು.

ಉದ್ದೇಶಿತ ಕೇಂದ್ರದ ರೂಪುರೇಷೆಗಳ ಬಗ್ಗೆ ಒಂದು ಚೌಕಟ್ಟನ್ನು ಸಿದ್ಧಪಡಿಸುವ ಹೊಣೆಯನ್ನು ಅಶೋಕ ದೊಮ್ಮಲೂರು ಅವರಿಗೆ ವಹಿಸಲಾಗಿದೆ. ವಚನ ಸಾಹಿತ್ಯಕ್ಕೆ ಸಂಬಂಧಿಸಿದ ಹೆಚ್ಚಿನ ಸಂಶೋಧನೆ ಸೇರಿದಂತೆ ವಿವಿಧ ಯೋಜನೆಗಳನ್ನು ಈ ಕೇಂದ್ರದ ಮೂಲಕ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.
ವಚನಗಳ ಅಧ್ಯಯನಕ್ಕೆ ಒಂದು ಶಾಸ್ತ್ರೀಯ ನೆಲೆಯನ್ನು ರೂಪಿಸಿದ ಹಿರಿಮೆ ಹಳಕಟ್ಟಿ ಅವರದಾಗಿದೆ. ಅವರು ಬಿಎಲ್ ಡಿಇ ಶಿಕ್ಷಣ ಸಂಸ್ಥೆಗಳ ಸ್ಥಾಪಕರಲ್ಲಿ ಒಬ್ಬರಾಗಿದ್ದಾರೆ. ಅವರ ಹೆಸರಿನಲ್ಲಿ ಇರುವ ಸಂಶೋಧನಾ ಕೇಂದ್ರವು ವಚನ ಸಾಹಿತ್ಯ ಕುರಿತು ಇದುವರೆಗೂ ಅರ್ಥಪೂರ್ಣ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿದೆ ಎಂದು ಪಾಟೀಲ್ ಹೇಳಿದ್ದಾರೆ.
ಕಾವೇರಿ ವಿವಾರ: ಪ್ರಧಾನಿ ಜತೆ ಚರ್ಚೆಗೆ ಸಮಯ ನಿಗದಿಪಡಿಸಲಿ
ಕರ್ನಾಟಕ ಹಾಗೂ ತಮಿಳುನಾಡು ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಪರಿಹಾರ ಕಂಡುಕೊಳ್ಳುವ ಪ್ರಯತ್ನವಾಗಿ ಬಿಜೆಪಿಯವರಿಗೆ ತಮ್ಮದೇ ಪ್ರಧಾನಮಂತ್ರಿಯನ್ನು ಭೇಟಿ ಮಾಡಿಸಲು ಏಕೆ ಸಾಧ್ಯವಾಗುತ್ತಿಲ್ಲ. ಮಳೆಯ ತೀವ್ರ ಕೊರತೆಯಿಂದಾಗಿ ನಮ್ಮ ರಾಜ್ಯದಲ್ಲೇ ಕುಡಿಯುವ ನೀರಿಲ್ಲ. ಅದರಲ್ಲೂ, ಬೆಂಗಳೂರಿಗೆ ತುಂಬಾ ಸಮಸ್ಯೆಯಾಗುವ ಪರಿಸ್ಥಿತಿ ಇದೆ. ಹೀಗಿರುವಾಗ, ತಮಿಳುನಾಡಿಗೆ ನೀರು ಹರಿಸಬೇಕು ಎಂಬ ಆದೇಶ ಪಾಲಿಸಲು ಅಸಾಧ್ಯವಾಗುತ್ತದೆ ಎಂದು ಎಂಬಿ ಪಾಟೀಲರು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಈಗಾಗಲೇ ಸರ್ವಪಕ್ಷ ಸಭೆ ನಡೆಸಿದ್ದಾರೆ. ಚರ್ಚೆಗಾಗಿ ಪ್ರಧಾನಮಂತ್ರಿಯವರ ಸಮಯ ಕೇಳಿದ್ದರೂ ಅವರಿನ್ನೂ ಸಮಯ ಕೊಟ್ಟಿಲ್ಲ. ಇಂತಹ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಬಿಜೆಪಿಯ ಇತರ ಸಂಸದರು ಇವರೆಲ್ಲಾ ಸೇರಿ ಪ್ರಧಾನಿಯವರ ಜೊತೆ ಚರ್ಚೆಗೆ ಸಮಯ ನಿಗದಿಪಡಿಸಲು ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.












Click it and Unblock the Notifications