ಇಂದು ಸರ್ಕಾರಿ ಆಸ್ಪತ್ರೆಗಳ ಓಪಿಡಿ ಬಂದ್ ಸಾಧ್ಯತೆ,ಕಾರಣಗಳೇನು?
ಬೆಂಗಳೂರು, ಫೆಬ್ರವರಿ 11: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆರೋಗ್ಯ ಇಲಾಖೆ ಗುತ್ತಿಗೆದಾರರು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿರುವ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಬಂದ್ ಆಗುವ ಸಾಧ್ಯತೆ ಇದೆ.
ಆರೋಗ್ಯ ಇಲಾಖೆಯಲ್ಲಿ ಶುಶ್ರೂಷಕರು, ಅರೆ ವೈದ್ಯಕೀಯ ಸಿಬ್ಬಂದಿ ಎಲ್ಟಿ ಸಿಬ್ಬಂದಿ ಸೇರಿದಂತೆ 30 ಸಾವಿರಕ್ಕೂ ಹೆಚ್ಚು ಮಂದಿ ಗುತ್ತಿಗೆ ನೌಕರರು ವಿವಿಧ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿ ಸ್ವಾತಂತ್ರ್ಯ ಉದ್ಯಾನದಲ್ಲಿ ಭಾನುವಾರ ಪ್ರತಿಭಟನೆಯನ್ನು ಕೂಡ ನಡೆಸಿದ್ದಾರೆ. ಕಾಯಂ ನೌಕರರಿಗಿಂತ ಗುತ್ತಿಗೆ ಆಧಾರದಲ್ಲಿ ನೌಕರರು ಹೆಚ್ಚಾಗಿರುವುದರಿಂದ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.
ಆರೋಗ್ಯ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಹೊರ ರೋಗಿಗಳ ವಿಭಾಗ ಸೇರಿದಂತೆ ಎಲ್ಲಾ ಸೇವೆಗಳು ಎಂದಿನಂತೆ ದೊರೆಯಲಿದೆ ಎಂದು ತಿಳಿಸಿದ್ದಾರೆ. ಉಳಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಸೇವೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಿರುವುದಿಲ್ಲ.
ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರ ಧರಣಿ ಸ್ಥಳಕ್ಕೆ ರಾತ್ರಿ ಭೇಟಿ ನೀಡಿದ್ದ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಮನವಿ ಪತ್ರ ಸ್ವೀಕರಿಸಿದರು. ಶೀಘ್ರದಲ್ಲೇ ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ.
ಮೌಖಿಕ ಭರವಸೆಯಿಂದ ಯಾವುದೇ ಪ್ರಯೋಜನವಿಲ್ಲ ಲಿಖಿತ ದಾಖಲೆ ಭರವಸೆ ದೊರೆತರೆ ಮಾತ್ರ ಧರಣಿ ಹಿಂಪಡೆಯುತ್ತೇವೆ ಎಂದು ಹೇಳಿದ್ದಾರೆ.
ಬೇಡಿಕೆಗಳೇನು? ಆರೋಗ್ಯ ಇಲಾಖೆಯಲ್ಲಿ ಅಂದಾಜು 30 ಸಾವಿರ ಹೊರಗುತ್ತಿಗೆ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಕಾಯಂ ಶುಶ್ರೂಷಕರು 30ರಿಂದ 35 ಸಾವಿರ ರೂ ವೇತನ ಪಡೆಯುತ್ತಿದ್ದರೆ, ಗುತ್ತಿಗೆ ಮೇರೆಗೆ ನೇಮಕವಾದವರಿಗೆ 15 ಸಾವಿರ ರೂ ವೇತನ ನೀಡಲಾಗುತ್ತಿದೆ.
ಈ ತಾರತಮ್ಯ ತೊಲಗಬೇಕು. ಹಾಗೆಯೇ ಸೇವೆಯಿಂದ ವಿಮುಖರಾದ ಗುತ್ತಿಗೆ ನೌಕರರಿಗೆ ವೇತನ ಹಾಗೂ ಸೇವಾ ಭದ್ರತೆ ಕ್ರಮಗಳನ್ನು ಜಾರಿಗೊಳಿಸಬೇಕು ಎನ್ನುವುದು ಒತ್ತಾಯವಾಗಿದೆ.