ರಾಜ್ಯಕ್ಕೆ ಬರುವ ವಲಸಿಗರಿಗೆ ಕನ್ನಡ ಕಲಿಕೆ ಕಡ್ಡಾಯ : ಸಿದ್ದರಾಮಯ್ಯ
ಬೆಂಗಳೂರು, ಜನವರಿ 22: ನಮ್ಮ ಕಲೆ, ಸಾಹಿತ್ಯ, ಸಂಸ್ಕೃತಿಗೆ ಯಾರೇ ಅಡ್ಡ ಬದರೂ ಸಹಿಸಲ್ಲ, ಅದನ್ನು ನಿವಾರಿಸುವ ಶಕ್ತಿ ನಮ್ಮಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಶತಮಾನೋತ್ಸವ ಭವನದ ಉದ್ಘಾಟಿಸಿ ಮಾತನಾಡಿದ ಅವರು, ಹಿಂದೆ ನಾನು ಕನ್ನಡ ಕಾವಲು ಸಮಿತಿ ಅಧ್ಯಕ್ಷನಾಗಿದ್ದೆ. ನಾನು ಸಾಹಿತಿಯಲ್ಲ. ಆದರೆ ನಾಡು, ನುಡಿಯ ಬಗ್ಗೆ ಅಭಿಮಾನವಿದೆ. ಭಾಷೆಯ ಬಗ್ಗೆ ಅಭಿಮಾನ ಇಲ್ಲದೇ ಇದ್ದರೆ ನಾವು ಕನ್ನಡಿಗರೇ ಅಲ್ಲ ಎಂದರು.
ತಮಿಳುನಾಡು, ಕೇರಳ, ಆಂಧ್ರದಲ್ಲಿರುವಂತೆ ಯಾರೇ ಇಲ್ಲಿಗೆ ಬಂದರೂ ಕನ್ನಡ ಕಲಿಯಬೇಕು. ಕನ್ನಡ ಕಲಿಯದೇ ಬದುಕುವುದು ನೋವಿನ ವಿಚಾರ, ಸಾಹಿತ್ಯ ಪರಿಷತ್ತು ಕೂಡಾ ಈ ನಿಟ್ಟಿನಲ್ಲಿ ಕೆಲಸ ಮಾಡಲಿ, ನಾವೆಲ್ಲರೂ ಕನ್ನಡದ ವಾತಾವರಣ ನಿರ್ಮಾಣ ಮಾಡೋಣ ಎಂದರು.

ಕನ್ನಡ ನಾಡಿನಲ್ಲಿ ಪ್ರತಿಯೊಬ್ಬರೂ ಕನ್ನಡ ಕಲಿಯಬೇಕು. ಅದಕ್ಕಾಗಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಎಲ್ಲರೂ ಶ್ರಮಿಸಬೇಕು, ಕನ್ನಡ ಸಾಹಿತ್ಯ ಪರಿಷತ್ತು ನೂರು ವರ್ಷ ಪೂರೈಸಿರುವ ಸಂದರ್ಭದಲ್ಲಿ ಅದರ ಸ್ಮರಣಾರ್ಥ ಭವನ ನಿರ್ಮಾಣ ಮಾಡಲು ಮನವಿ ಮಾಡಿದ್ದರು.
ಅದಕ್ಕೆ ಐದು ಕೋಟಿ ರೂ. ಮಂಜೂರು ಮಾಡಿ ಶಂಕುಸ್ಥಾಪನೆಯನ್ನೂ ಮಾಡಿದ್ದೆ. ಇಂದು ಅದರ ಉದ್ಘಾಟನೆ ಮಾಡುತ್ತಿದ್ದೇನೆ. ಇದು ನನಗೆ ಇಮ್ಮಡಿ ಸಂತೋಷ ತಂದಿದೆ. ಇಂತಹ ಅವಕಾಶ ಸಿಗುವುದು ಅಪರೂಪ. ಅತ್ಯಂತ ಸಂತೋಷದಿಂದ ಹೊಸ ಶತಮಾನೋತ್ಸವ ಭವನವನ್ನು ಲೋಕಾರ್ಪಣೆ ಮಾಡುತ್ತಿದ್ದೇನೆ ಎಂದರು.
ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ಇನ್ನೂ ಹೆಚ್ಚು ಕ್ರಿಯಾಶೀಲವಾಗಲಿ ಎಂದು ಹಾರೈಸುತ್ತೇನೆ. ಇದು ಆರೂವರೆ ಕೋಟಿ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ. ಕನ್ನಡ ಜನರನ್ನು ಪ್ರತಿನಿಧಿಸುವ ಸಂಸ್ಥೆ. ನಮ್ಮ ಭಾಷೆ, ಸಂಸ್ಕೃತಿಯನ್ನು ಬೆಳೆಸುವ ಸಂಸ್ಥೆ. ಅದಕ್ಕೆ ಸರ್ಕಾರ ಎಲ್ಲ ರೀತಿಯ ಬೆಂಬಲ ನೀಡುತ್ತದೆ.












Click it and Unblock the Notifications