Sankey Flyover: ಮೇಲ್ಸೇತುವೆ ಬೇಡ ಎಂದು ಸಿಎಂ ಬೊಮ್ಮಾಯಿಗೆ ಪತ್ರ ಬರೆದ 2000ಕ್ಕೂ ಹೆಚ್ಚು ಮಕ್ಕಳು
ಬೆಂಗಳೂರು, ಜನವರಿ, 20: ಸಿಲಿಕಾನ್ ಸಿಟಿಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಅದರಲ್ಲಿ ಹಲವು ಯೋಜನೆಗಳು ಪರಿಸರಕ್ಕೆ ಹಾನಿಕಾರಕ ಎಂದು ಜನರು ವಿರೋಧ ವ್ಯಕ್ತಪಡಿಸಿದರೂ ಸರ್ಕಾರ ಅದಕ್ಕೆ ಕಿಂಚಿತ್ತೂ ಕಿಮ್ಮತ್ತು ಕೊಡುತ್ತಿಲ್ಲ. ಅಂತಹದ್ದೇ ಒಂದು ಬೆಂಗಳೂರಿನ ಸ್ಯಾಂಕಿ ರಸ್ತೆ ವಿಸ್ತರಣೆ ಮತ್ತು ಮೇಲ್ಸೇತುವೆ ಯೋಜನೆ.
ಈ ಯೋಜನೆ ಪರಿಸರಕ್ಕೆ ಮಾರಕ ಎಂದು ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಪರಿಸರವಾದಿಗಳು, ಸ್ಥಳಿಯರ ಜೊತೆಗೆ ಈಗ ಶಾಲಾ ಮಕ್ಕಳು ಸಹ ಸ್ಯಾಂಕಿ ಕೆರೆ ಉಳಿವಿಗಾಗಿ ಪಣ ತೊಟ್ಟಿದ್ದಾರೆ.
ನಗರದ ಸುಮಾರು 2000ಕ್ಕೂ ಹೆಚ್ಚು ಮಕ್ಕಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಉದ್ದೇಶಿತ ಸ್ಯಾಂಕಿ ರೋಡ್ ಮೇಲ್ಸೇತುವೆ ನಿಲ್ಲಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಪತ್ರದಲ್ಲಿ, " ಆತ್ಮೀಯ ಬೊಮ್ಮಾಯಿ ಅಂಕಲ್, ದಯವಿಟ್ಟು ನಮ್ಮ ಪರಿಸರವನ್ನು ರಕ್ಷಿಸಿ. ನಾವು ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣದಲ್ಲಿ ಕಲಿಯಲು ಮತ್ತು ಒಟ್ಟಿಗೆ ಆಡಲು ಬಯಸುತ್ತೇವೆ" ಎಂದು ಬರೆಯಲಲಾಗಿದೆ. ಕನ್ನಡ ಮತ್ತು ಆಂಗ್ಲಭಾಷೆಗಳಲ್ಲಿ ಪತ್ರ ಬರೆದು ಮುಖ್ಯಮಂತ್ರಿಗಳಿಗೆ ಕಳುಹಿಸಲಾಗಿದೆ.
ನಗರದಲ್ಲಿ ಟ್ರಾಫಿಕ್ ದಟ್ಟನೆ ಕಡಿಮೆ ಮಾಡಲು ಸ್ಯಾಂಕಿ ರಸ್ತೆ ವಿಸ್ತರಣೆ ಮತ್ತು ಅದೇ ರಸ್ತೆಯ ಭಾಷ್ಯಂ ವೃತ್ತದಿಂದ ಮಲ್ಲೇಶ್ವರಂ 18ನೇ ಕ್ರಾಸ್ವರೆಗೆ ಮೇಲ್ಸೇತುವೆ ನಿರ್ಮಾಣ ಮಾಡಲು ಸರ್ಕಾರ ಟೆಂಡರ್ ಕರೆದಿದ್ದು, ಕೆಲಸಕ್ಕೆ ಕೈ ಹಾಕಿದೆ. ಈ ಯೋಜನೆಗಾಗಿ ಪೂರ್ಣ ಪ್ರಮಾಣದಲ್ಲಿ ಬೆಳೆದು ನಿಂತ ರಾಜಧಾನಿಯ ಪಾರಂಪರಿಕ 40 ಮರಗಳಿಗೆ ಕೊಡಲಿ ಹಾಕಲು ನಿರ್ಧರಿಸಲಾಗಿದ್ದು, ಇದಕ್ಕೆ ಪರಿಸರವಾದಿಗಳು ಸೇರಿದಂತೆ ಸ್ಥಳಿಯ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಆದರೆ, ಯೋಜನೆಯಿಂದ ಬಿಬಿಎಂಪಿ ಹಿಂದೆ ಸರಿಯುತ್ತಿಲ್ಲ. ಹೀಗಾಗಿ ಬೆಂಗಳೂರಿನ ಕೆಲವು ನಿವಾಸಿಗಳು ಆನ್ಲೈನ್ ಅರ್ಜಿ ಅಭಿಯಾನ ಆರಂಭಿಸಿದ್ದರು. ಇವರಿಗೆ ಈಗ ಮಕ್ಕಳು ಪತ್ರದ ಮೂಲಕ ಸಾಥ್ ನೀಡಿದ್ದಾರೆ.












Click it and Unblock the Notifications